ರಾಜ್ಯದಲ್ಲಿ ಆನ್‌ಲೈನ್ ಜೂಜು ನಿಷೇಧ ತಿದ್ದುಪಡಿ ಕಾಯ್ದೆ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಆನ್‌ಲೈನ್‌ ಜೂಜಾಟ ನಿಷೇಧಿಸುವ ಸಂಬಂಧ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕರ್ನಾಟಕ ಪೊಲೀಸ್‌ (ತಿದ್ದುಪಡಿ) ಕಾಯಿದೆ-2021 ಅನ್ನು ಹೈಕೋರ್ಟ್‌ ರದ್ದು ಪಡಿಸಿದೆ.
ಸರ್ಕಾರದ ಕ್ರಮ ಸಂವಿಧಾನ ಬದ್ಧವಾಗಿಲ್ಲ. ಆನ್​ಲೈನ್ ಗೇಮಿಂಗ್ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವಂತಿಲ್ಲ. ಸರ್ಕಾರ ಸಂವಿಧಾನ ಬದ್ಧವಾದ ಶಾಸನ ರೂಪಿಸಲು ಸ್ವತಂತ್ರವಿದೆ. ಆದರೆ ಈಗಿನ ಆದೇಶ ಕಾನೂನುಬಾಹಿರ ಎಂದು ಹೈಕೋರ್ಟ್ ತಿಳಿಸಿದೆ.

ಮುಂಬೈನಲ್ಲಿ ಕೇಂದ್ರ ಕಚೇರಿ ಹೊಂದಿರುವ ಆಲ್ ಇಂಡಿಯಾ ಗೇಮಿಂಗ್ ಫೆಡರೇಷನ್ ಒಳಗೊಂಡು 11 ಖಾಸಗಿ ಕಂಪೆನಿಗಳು ಸಲ್ಲಿಸಿದ್ದ ಮನವಿಗಳ ವಿಚಾರಣೆಯನ್ನು ನಡೆಸಿ, ಡಿಸೆಂಬರ್‌ 22ರಂದು ತೀರ್ಪು ಕಾಯ್ದಿರಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌ ದೀಕ್ಷಿತ್ ನೇತೃತ್ವದ ವಿಭಾಗೀಯ ಪೀಠವು ಇಂದು,ಸೋಮವಾರ ತೀರ್ಪು ಪ್ರಕಟಿಸಿದೆ. ನವೆಂಬರ್‌ 18ರಂದು ಮನವಿಗಳ ವಿಚಾರಣೆ ಆರಂಭಿಸಿದ್ದ ಪೀಠವು ಆ ಬಳಿಕ ಪಕ್ಷಕಾರರ ವಾದವನ್ನು ಸುದೀರ್ಘವಾಗಿ ಆಲಿಸಿತ್ತು.
ಅರ್ಜಿದಾರರ ಮನವಿಯನ್ನು ಪುರಸ್ಕರಿಸುವ ನ್ಯಾಯಾಲಯವು ಕರ್ನಾಟಕ ಪೊಲೀಸ್‌ ತಿದ್ದುಪಡಿ ಕಾಯಿದೆಯ ವ್ಯಾಜ್ಯಕ್ಕೆ ಕಾರಣವಾಗಿದ್ದ ಆಕ್ಷೇಪಾರ್ಹ ನಿಬಂಧನೆಗಳನ್ನು ರದ್ದುಗೊಳಿಸಿದೆ. “ಈ ನಿಬಂಧನೆಗಳು ಸಂವಿಧಾನದ ಅಧಿಕಾರವ್ಯಾಪ್ತಿಯ ಹೊರತಾಗಿದೆ” ಎಂದು ತೀರ್ಪಿನಲ್ಲಿ ಹೇಳಲಾಗಿದೆ. ಇಡೀ ಕಾಯಿದೆಯನ್ನು ರದ್ದುಪಡಿಸಲಾಗಿಲ್ಲ ಎಂದು ತೀರ್ಪಿನಲ್ಲಿ ಸ್ಪಷ್ಟಪಡಿಸಲಾಗಿದೆ. ಸಾಂವಿಧಾನಿಕ ನಿಯಮಗಳಿಗೆ ಅನುಗುಣವಾಗಿ ಬೆಟ್ಟಿಂಗ್‌ ಮತ್ತು ಗ್ಯಾಬ್ಲಿಂಗ್‌ಗೆ ಸಂಬಂಧಿಸಿದಂತೆ ಸೂಕ್ತ ಕಾನೂನು ತರಲು ಸರ್ಕಾರವನ್ನು ನಿರ್ಬಂಧಿಸಲಾಗಿಲ್ಲ ಎಂದು ಆದೇಶದಲ್ಲಿ ಹೇಳಲಾಗಿದೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ.
ಪೋಕರ್‌, ಚೆಸ್‌, ರಮ್ಮಿ, ಫ್ಯಾಂಟಸಿ ಆಟಗಳು (ಫ್ಯಾಂಟಸಿ ಕ್ರಿಕೆಟ್‌, ಫುಟ್‌ಬಾಲ್‌ ಮತ್ತು ಬ್ಯಾಸ್ಕೆಟ್‌ಬಾಲ್‌), ತಾತ್ಕಾಲಿಕ ಆಟಗಳು ಮತ್ತು ಇ-ಕ್ರೀಡೆಗಳು ಕೌಶಲ್ಯ ಸಂಬಂಧಿಸಿದ್ದಾಗಿವೆ ಎಂದು ಹಲವು ನ್ಯಾಯಾಲಯಗಳು ಹೇಳಿವೆ. ಕೆಲವು ಆಟಗಳು ಹಣದ ಅಪಾಯವನ್ನು ಒಳಗೊಂಡಿವೆಯಾದರೂ ಅವು ಜೂಜಾಟಕ್ಕೆ ಸಂಬಂಧಿಸಿಲ್ಲ ಎಂದು ಅರ್ಜಿದಾರರು ವಾದಿಸಿದ್ದರು.
ಆನ್‌ಲೈನ್‌ ಗೇಮಿಂಗ್‌ ಸಂಸ್ಥೆಗಳ ಒಕ್ಕೂಟವಾದ ಆಲ್ ಇಂಡಿಯಾ ಗೇಮಿಂಗ್ ಫೆಡರೇಷನ್ ಅನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿ ಆರ್ಯಮಾ ಸುಂದರಂ ಅವರು “ಕರ್ನಾಟಕ ಸರ್ಕಾರ ಜಾರಿಗೊಳಿಸಿರುವ ಆಕ್ಷೇಪಿತ ಕಾಯಿದೆಯು ಸಂವಿಧಾನಕ್ಕೆ ವಿರುದ್ಧವಾಗಿದೆ. ಆನ್‌ಲೈನ್‌ ಗೇಮ್‌ಗಳು ಕೌಶಲಕ್ಕೆ ಸಂಬಂಧಿಸಿದ್ದಾಗಿವೆ. ಹೀಗಾಗಿ, ಇದು ಜೂಜಾಟವಲ್ಲ. ಈ ಕ್ಷೇತ್ರದಲ್ಲಿ 3,500ಕ್ಕೂ ಹೆಚ್ಚು ಉದ್ಯೋಗಿಗಳಾಗಿದ್ದಾರೆ. 300 ಕೋಟಿ ರೂಪಾಯಿ ಬಂಡವಾಳ ಹೂಡಲಾಗಿದೆ. ನಿಷೇಧ ಮುಂದುವರಿದರೆ ಉದ್ಯೋಗಿಗಳು ಮತ್ತು ಪಾಲುದಾರರು ಆನ್‌ಲೈನ್‌ ಗೇಮಿಂಗ್‌ ಕಂಪೆನಿಗಳ ವಿರುದ್ಧ ಕ್ರಿಮಿನಲ್‌ ದೂರು ದಾಖಲಿಸಬಹುದು ಎಂದು ವಾದಿಸಿದ್ದರು.

ಪ್ರಮುಖ ಸುದ್ದಿ :-   ಶಾಸಕ ಸ್ಥಾನದಿಂದ ಅನರ್ಹಗೊಂಡ ಜನಾರ್ದನ ರೆಡ್ಡಿ

ಗೇಮ್ಸ್‌ಕ್ರಾಫ್ಟ್‌ ಟೆಕ್ನಾಲಜೀಸ್‌ ಪ್ರೈವೇಟ್‌ ಲಿಮಿಟೆಡ್‌ ಪ್ರತಿನಿಧಿಸಿದ್ದ ಹಿರಿಯ ವಕೀಲ ಡಾ. ಅಭಿಷೇಕ್‌ ಮನು ಸಿಂಘ್ವಿ ಅವರು “ಪ್ರತಿಯೊಂದು ಕಾನೂನು ಮತ್ತು ಸುವ್ಯವಸ್ಥೆ ಪ್ರಶ್ನೆಯು ಸಾರ್ವಜನಿಕ ಸುವ್ಯವಸ್ಥೆಯ ಪ್ರಶ್ನೆಯಾಗುವುದಿಲ್ಲ. ಹೀಗಾಗಿ, ಆನ್‌ಲೈನ್‌ ಗೇಮ್‌ಗಳನ್ನು ನಿಷೇಧಿಸಲು ಕಾನೂನು ತಂದಿರುವುದು ತಪ್ಪಾದ ನಡೆ. ಈ ಕಾಯಿದೆಯ ಅನುಪಸ್ಥಿತಿಯಲ್ಲಿ ರಮ್ಮಿ ಆಡುವುದು ಸಾರ್ವಜನಿಕ ಸುವ್ಯವಸ್ಥೆಗೆ ಎರವಾಗಿತ್ತು ಎಂದು ಹೆಳಲು ಸಾಧ್ಯವೇ ಎಂದು ವಾದಿಸಿದ್ದರು.
ಫೆಡರೇಷನ್‌ ಆಫ್‌ ಇಂಡಿಯನ್‌ ಫ್ಯಾಂಟಸಿ ಸ್ಪೋರ್ಟ್ಸ್‌ (ಎಫ್‌ಐಎಫ್‌ಎಸ್‌) ಪ್ರತಿನಿಧಿಸಿದ್ದ ಹಿರಿಯ ವಕೀಲ ಮುಕುಲ್‌ ರೋಹಟ್ಗಿ ಅವರು “ಅರ್ಜಿದಾರರು ಪ್ರವರ್ತಕರಾಗಿರುವ ಫ್ಯಾಂಟಸಿ ಆಟಗಳು ಕರ್ನಾಟಕ ಪೊಲೀಸ್‌ ತಿದ್ದುಪಡಿ ಕಾಯಿದೆಯ ವ್ಯಾಪ್ತಿಗೆ ಯಾವುದೇ ರೀತಿಯಲ್ಲಿಯೂ ಒಳಪಡುವುದಿಲ್ಲ. ಕೌಶಲಕ್ಕೆ ಸಂಬಂಧಿಸಿದ ಆಟಗಳನ್ನು ನಿಷೇಧಿಸಲು ಜಾರಿಗೆ ತಂದಿರುವ ಪೊಲೀಸ್‌ ತಿದ್ದುಪಡಿ ಕಾಯಿದೆ ಅಧಿಕಾರತೀತವಾಗಿದೆ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕಾನೂನು ಸ್ವೇಚ್ಛೆಯಿಂದ ಕೂಡಿದೆ” ಎಂದು ವಾದಿಸಿದ್ದರು.
ಹಿರಿಯ ವಕೀಲ ಡಿ ಎಲ್‌ ಎನ್‌ ರಾವ್‌ ಅವರು “ಸುಪ್ರೀಂ ಕೋರ್ಟ್‌ ತೀರ್ಪಿನ ಹೊರತಾಗಿಯೂ ಕರ್ನಾಟಕ ಸರ್ಕಾರವು ಪೊಲೀಸ್‌ ಕಾಯಿದೆಗೆ ತಿದ್ದುಪಡಿ ತಂದಿದೆ. ಶಾಸಕಾಂಗದ ಮಿತಿಯನ್ನು ಮೀರಿ ಕಾನೂನು ರೂಪಿಸಲಾಗಿದ್ದು, ಇದು ಸಂವಿಧಾನದ 19(1)(ಜಿ)ಗೆ ವಿರುದ್ಧವಾಗಿದೆ. ಹೀಗಾಗಿ, ಪೊಲೀಸ್‌ ತಿದ್ದುಪಡಿ ಕಾಯಿದೆಗೆ ತಡೆ ನೀಡಬೇಕು” ಎಂದು ಕೋರಿದರು.

ಪ್ರಮುಖ ಸುದ್ದಿ :-   ಶಾಸಕ ಸ್ಥಾನದಿಂದ ಅನರ್ಹಗೊಂಡ ಜನಾರ್ದನ ರೆಡ್ಡಿ

ಹಿರಿಯ ವಕೀಲ ಸಜ್ಜನ್‌ ಪೂವಯ್ಯ ಅವರು “ರಮ್ಮಿ ಮತ್ತು ಕುದುರೆ ರೇಸ್‌ ಕೌಶಲಕ್ಕೆ ಸಂಬಂಧಿಸಿದ ಆಟಗಳು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಆಕ್ಷೇಪಾರ್ಹವಾದ ಕರ್ನಾಟಕ ಪೊಲೀಸ್‌ ತಿದ್ದುಪಡಿ ಕಾಯಿದೆಯಲ್ಲೂ ಕೌಶಲದ ಆಟಗಳಿಗೆ ರಕ್ಷಣೆ ಒದಗಿಸಲಾಗಿದೆ. ಕೇರಳ ಹೈಕೋರ್ಟ್‌ ಮತ್ತು ಮದ್ರಾಸ್‌ ಹೈಕೋರ್ಟ್‌ಗಳು ಇಂಥದ್ದೇ ಕಾನೂನುಗಳನ್ನು ವಜಾ ಮಾಡಿವೆ. ಹೀಗಾಗಿ, ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಟ್ಟು ಕರ್ನಾಟಕ ಪೊಲೀಸ್‌ ತಿದ್ದುಪಡಿ ಕಾಯಿದೆಗೆ ತಡೆಯಾಜ್ಞೆ ನೀಡಬೇಕು” ಎಂದು ಮನವಿ ಮಾಡಿದ್ದರು.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ಅವರು “ಮೂರನೇ ವ್ಯಕ್ತಿಯ ಕೌಶಲವನ್ನು ಆಧರಿಸಿ ಫ್ಯಾಂಟಸಿ ಆಟಗಳು ಜೂಜಿಗೆ ಅನುಮತಿಸುತ್ತವೆ. ಇದು ಆಯ್ಕೆಯ ಆಟಕ್ಕೆ ಸಂಬಂಧಿಸಿದ್ದಾಗಿದೆ. ಆನ್‌ಲೈನ್‌ ಗೇಮಿಂಗ್‌ ಚಟುವಟಿಕೆಗಳಲ್ಲಿ ಅಪಾರ ಪ್ರಮಾಣದ ಹವಾಲಾ ಹಣವನ್ನು ಗಮನದಲ್ಲಿಟ್ಟುಕೊಂಡು ತಿದ್ದುಪಡಿ ಕಾಯಿದೆಯನ್ನು ಜಾರಿಗೊಳಿಸಲಾಗಿದೆ” ಎಂದು ಸಮರ್ಥಿಸಿಕೊಂಡಿದ್ದರು.
ಸರ್ಕಾರ ತಂದಿರುವ ತಿದ್ದುಪಡಿಯನ್ನು ನ್ಯಾಯಾಲಯ ಕೇವಲ ಮಾಹಿತಿ ತಂತ್ರಜ್ಞಾನ ಕಾಯಿದೆ ಅಥವಾ ಪ್ರಸರಣ ಕಾಯಿದೆ ಅಡಿಯಲ್ಲಿ ನೋಡಬಾರದು. ಸಮಾಜದಲ್ಲಿ ಹಲವರು ಹಣ ಕಳೆದುಕೊಳ್ಳುತ್ತಿರುವುದರಿಂದ ಆನ್‌ಲೈನ್ ಗೇಮ್ ಗಳನ್ನು ನಿಷೇಸಲಾಗಿದೆ. ಜೂಜು ನಿಷೇಧಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್ ಸೂದ್ ವರದಿಯ ಶಿಫಾರಸುಗಳನ್ನು ಆಧರಿಸಿಯೇ ಸರ್ಕಾರವು ಕಾಯಿದೆಗೆ ತಿದ್ದುಪಡಿ ತಂದಿದೆ” ಎಂದು ಹೇಳಿದ್ದರು.
ಆಟದ ಫಲಿತಾಂಶದ ಬಗ್ಗೆ ತಿಳಿಯದಿರುವಾಗ ಆಟದ ಫಲಿತಾಂಶದ ಮೇಲೆ ಬೆಟ್ಟಿಂಗ್‌ ಕಟ್ಟುವುದು ಆಯ್ಕೆಯನ್ನು ಆಧರಿಸಿರಲಿ ಅಥವಾ ಕೌಶಲವನ್ನು ಆಧರಿಸಿರಲಿ, ಅದು ಬಾಜಿಗೆ ಸಮನಾಗಿರುತ್ತದೆ ಎಂದು ನಾವದಗಿ ಹೇಳಿದ್ದರು.

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement