ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮತ್ತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿದ್ದು, ದೀರ್ಘ ಕಾಲ ಬಾಳಿಕೆ ಬರುವಂತಹ ರಸ್ತೆಗಳನ್ನು ನಿರ್ಮಿಸಬೇಕು, ಇಲ್ಲವಾದರೆ ಆ ಕೆಲಸವನ್ನು ಮಿಲಿಟರಿಗೆ ವಹಿಸಲಾಗುವುದು ಎಂದು ಎಚ್ಚರಿಕೆಯನ್ನೂ ನೀಡಿದೆ.
ಕೋರಮಂಗಲದ ವಿಜಯ್ ಮೆನನ್ ಎಂಬವರು ಬೆಂಗಳೂರಿನ ರಸ್ತೆಗಳ ದುಸ್ಥಿತಿ ಕುರಿತು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ನಿಗದಿಯಂತೆ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾ. ಸೂರಜ್ ಗೋವಿಂದ ರಾಜ್ ಅವರಿದ್ದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತು.
ವಿಚಾರಣೆ ನಡೆಸಿದ ನ್ಯಾಯಪೀಠವು, ವೈಜ್ಞಾನಿಕ ರೀತಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಗುಂಡಿ ಮುಚ್ಚುವ ಕಾಮಗಾರಿ ನಡೆಸುವ ಕುರಿತು ಕ್ರಿಯಾ ಯೋಜನೆ ರೂಪಿಸಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸೂಚನೆ ನೀಡಿ ವಿಚಾರಣೆಯನ್ನು ಮಾರ್ಚ್ 5ಕ್ಕೆ ಮುಂದೂಡಿದೆ.
ಈ ಮಧ್ಯೆ, ಹೈಕೋರ್ಟ್ ಮಂಗಳವಾರ ಜಾಮೀನು ಸಹಿತ ಬಂಧನ ವಾರಂಟ್ ಹೊರಡಿಸಿದ್ದ ಹಿನ್ನೆಲೆಯಲ್ಲಿ ಗುರುವಾರ ಪಾಲಿಕೆಯ ಪ್ರಧಾನ ಎಂಜಿನಿಯರ್ ಎಸ್. ಪ್ರಭಾಕರ್ ಕೋರ್ಟ್ಗೆ ಖುದ್ದು ಹಾಜರಾಗಿ ಕಳೆದ ವಿಚಾರಣೆ ವೇಳೆ ಗೈರು ಹಾಜರಾಗಿದ್ದಕ್ಕೆ ಬೇಷರತ್ ಕ್ಷಮೆಯಾಚಿಸಿದರು.
ವಿಚಾರಣೆ ಆರಂಭವಾಗುತ್ತಿದ್ದಂತೆಯೇ ಪಾಲಿಕೆಯ ಪ್ರಧಾನ ಎಂಜಿನಿಯರ್ ಕೆ. ಪ್ರಭಾಕರ್ ಹಾಜರಾಗಿ ನ್ಯಾಯಾಲಯದ ಕ್ಷಮೆ ಕೋರಿದರು.
ಆಗ ನ್ಯಾಯಪೀಠವು, ಕಳೆದ ವಿಚಾರಣೆ ವೇಳೆ ಹಾಜರಾಗುವಂತೆ ಆದೇಶವಿದ್ದರೂ ಯಾಕೆ ಹಾಜರಾಗಿಲ್ಲ..? ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿಗಳಿರುವುದು ತಿಳಿದಿಲ್ಲವೇ..? ರಸ್ತೆ ಗುಂಡಿ ಸರಿಪಡಿಸಲು ಯಾವ ಕ್ರಮ ಕೈಗೊಂಡಿದ್ದೀರಿ?’ ಎಂದು ಖಾರವಾಗಿ ಪ್ರಶ್ನಿಸಿತಲ್ಲದೆ, ನಿಮ್ಮನ್ನು ನೇರವಾಗಿ ಜೈಲಿಗೆ ಕಳುಹಿಸಬಹುದಿತ್ತು, ಆದರೆ ಸ್ವಲ್ಪ ಕರುಣೆ ತೋರಿದ್ದೇವೆ. ನಿಮ್ಮ ಎಂಜಿನಿಯರ್ಗಳಿಗೆ ರಸ್ತೆ ಗುಂಡಿ ಸಮಸ್ಯೆ ಬಗೆಹರಿಯುವುದು ಬೇಕಾಗಿಲ್ಲ. ಹಾಗಾಗಿ, ನೀವೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ ಎಂದು ಹೇಳಿತು.
ಪ್ರಧಾನ ಎಂಜಿನಿಯರ್ ಅನಾರೋಗ್ಯದ ಕಾರಣ ನೀಡಿದ್ದಕ್ಕೆ ಸಿಜೆ, ‘ಮೊದಲೇ ಮಾಹಿತಿ ನೀಡಿ ವಿನಾಯಿತಿಗೆ ಅರ್ಜಿ ಸಲ್ಲಿಸಬೇಕಿತ್ತು ಎಂದು ಹೇಳಿದರು.
ನಿಮ್ಮ ಕಾಮೆಂಟ್ ಬರೆಯಿರಿ