ಬೆಂಗಳೂರು: ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಇದೇ ತಿಂಗಳ ೨೭ ಮತ್ತು ೨೮ ರಂದು ರಾಜ್ಯಾದ್ಯಂತ ಹೋರಾಟ ನಡೆಸಲು ನಿರ್ಧರಿಸಿದೆ.
ಫೆಬ್ರುವರಿ ೨೭ರಂದು ಕಾಂಗ್ರೆಸ್ನ ಎರಡನೇ ಹಂತದ ಮೇಕೆದಾಟು ಪಾದಯಾತ್ರೆ ಆರಂಭವಾಗಿತ್ತಿದ್ದು, ಈಗ ಬಿಜೆಪಿಯ ಸಹ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ಜನ ವಿರೋಧಿ, ಸದನ ವಿರೋಧಿಯಾದ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ವಿಧಾನಪರಿಷತ್ ಸದಸ್ಯ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಹೇಳಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ , ಶಿವಮೊಗ್ಗದ ಹಿಂದೂ ಕಾರ್ಯಕರ್ತನ ಕೊಲೆ ಪೂರ್ವನಿಯೋಜಿತ. ಪಿಎಫ್ಐ ಮತ್ತು ಎಸ್ಡಿಪಿಐ ಸಂಘಟನೆಗಳು ಕಾಂಗ್ರೆಸ್ನ ಕೂಸು ಎಂದು ಹರಿಹಾಯ್ದರು.
ಸಿದ್ಧರಾಮಯ್ಯ ಅವರು ಈ ಸಂಘಟನೆಗಳ ವಿರುದ್ಧ ಇದ್ದ ಪ್ರಕರಣ ಹಿಂಪಡೆದಿದ್ದಾರೆ. ಹಿಜಾಬ್ ಪರವಾಗಿ ನಿಂತ ಮತಾಂಧರಿಂದ ಹಿಂದೂ ಕಾರ್ಯಕರ್ತ ಹರ್ಷನ ಹತ್ಯೆಯಾಗಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ನಾಯಕರು ಸುಳ್ಳು ಹೇಳುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಸುಳ್ಳಿನ ಕುಮಾರ ಆಗಿದ್ದಾರೆ. ಅವರು ಕೆಪಿಸಿಸಿ ಅಧ್ಯಕ್ಷರಾದ ಮೇಲೆ ದಾದಾಗಿರಿ ಹೆಚ್ಚಾಗಿದೆ. ಕಾಂಗ್ರೆಸ್ ಯುವ ಘಟಕಕ್ಕೂ ದಾದಾಗಿರಿಯ ವ್ಯಕ್ತಿಯನ್ನೇ ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ಟೀಕಿಸಿದರು.
ಮತಾಂಧರ ಪರ ಇರುವ ಕಾಂಗ್ರೆಸ್ ಪಕ್ಷದ ನಾಯಕರಿಗೆ ಕೊಲೆಯಾದ ಹರ್ಷನ ಮನೆಗೆ ಹೋಗಲು ಸಮಯವಿಲ್ಲ. ದೆಹಲಿಗೆ ಹೋಗಲು ಸಮಯವಿದೆ ಎಂದು ಟೀಕಿಸಿದರು.
ಸಂವಿಧಾನ ವಿರೋಧಿ ಕಾಂಗ್ರೆಸ್ ಮತಾಂಧತೆಯನ್ನು ಪೋಷಿಸಿ, ಬೆಳೆಸುತ್ತಿದೆ. ವಿಧಾನಮಂಡಲದ ಅಧಿವೇಶನ ನಡೆಸಲು ಬಿಡದೆ ಕಲಾಪ ವ್ಯರ್ಥವಾಗುವಂತೆ ಮಾಡಿದೆ. ಕಾಂಗ್ರೆಸ್ನ ಈ ಜನವಿರೋಧಿ ನಿಲುವುಗಳ ವಿರುದ್ಧ ಬಿಜೆಪಿ ಕಾರ್ಯಕರ್ತರು ಇದೇ ೨೭ ಮತ್ತು ೨೮ ರಂದು ರಾಜ್ಯದ ಎಲ್ಲ ಜಿಲ್ಲಾ, ತಾಲ್ಲೂಕುಗಳಲ್ಲಿ ಹೋರಾಟ ನಡೆಸಲಿದ್ದಾರೆ ಎಂದರು.
ನಿಮ್ಮ ಕಾಮೆಂಟ್ ಬರೆಯಿರಿ