ಗಣಿಗಾರಿಕೆಯಲ್ಲಿ ಬಿಳಿಕಲ್ಲು ಗುಡ್ಡ ಕುಸಿತ: 7 ಜನರ ರಕ್ಷಣೆ, ಇಬ್ಬರು ನಾಪತ್ತೆ ಶಂಕೆ

ಗುಂಡ್ಲುಪೇಟೆ (ಚಾಮರಾಜನಗರ ಜಿಲ್ಲೆ): ತಾಲೂಕಿನ ಮಡಹಳ್ಳಿ ಹತ್ತಿರವಿರುವ ಬಿಳಿಕಲ್ಲು ಗಣಿಗಾರಿಕೆಯಿಂದ ಗುಡ್ಡವೊಂದು ಕುಸಿದಿರುವ ಘಟನೆ ಶುಕ್ರವಾರ ಬೆಳಿಗ್ಗೆ 11:30ರಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಸುಮಾರು 7 ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, ಇದರಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ಶಂಕಿಸಲಾಗಿದೆ.
ಘಟನೆಯಲ್ಲಿ 6 ಟಿಪ್ಪರುಗಳು, 5 ಜೆಸಿಬಿಗಳು, 4 ಟ್ರ್ಯಾಕ್ಟರ್‌ಗಳು ಮಣ್ಣಿನಡಿ ಸಿಲುಕಿವೆ. ಈ ಇಬ್ಬರು ಮಣ್ಣಿನಡಿ ಸಿಲುಕಿದ್ದಾರೋ ಅಥವಾ ಘಟನಾ ಸ್ಥಳದಿಂದ ಕಾಲ್ಕಿತ್ತಿದ್ದಾರೆಯೇ ಎಂಬುದು ಗೊತ್ತಾಗಿಲ್ಲ. ಗಣಿಯ ಮ್ಯಾನೇಜರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಟಿಪ್ಪರ್ ಚಾಲಕನನ್ನು ಮೂರು ತಾಸು ಕಾರ್ಯಾಚರಣೆ ಬಳಿಕ ರಕ್ಷಣೆ ಮಾಡಲಾಗಿದೆ. 6 ಮಂದಿಯನ್ನು ರಕ್ಷಿಸಿ ಚಿಕಿತ್ಸೆಗಾಗಿ ಚಾಮರಾಜನಗರ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
7 ಮಂದಿ ಕಾರ್ಮಿಕರನ್ನು ರಕ್ಷಿಸಲಾಗಿದೆ. ಅವರೆಲ್ಲರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಾರಾಷ್ಟ್ರ ಮೂಲದ ಇಬ್ಬರು ಕಾರ್ಮಿಕರು ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ. ಅವರ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ. ಕ್ವಾರಿಯಲ್ಲಿ ಎಷ್ಟು ಮಂದಿ ಕೆಲಸ ಮಾಡುತ್ತಿದ್ದರು ಎಂಬುದು ತಿಳಿದುಬಂದಿಲ್ಲ.
ಬೊಮ್ಮಲಾಪುರ ಗ್ರಾಮದ ಮಹೇಂದ್ರ ಎಂಬುವವರಿಗೆ ಸೇರಿದ ಕ್ವಾರಿ ಇದಾಗಿದ್ದು ಬಿಳಿಕಲ್ಲು ಗಣಿಗಾರಿಕೆ ನಡೆಸಲಾಗುತ್ತಿತ್ತು. ಈ ಕ್ವಾರಿಯನ್ನು ಉಪಗುತ್ತಿಗೆ ಪಡೆದು ಗಣಿಗಾರಿಗೆ ನಡೆಸಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ಮ್ಯಾನೇಜರ್ ನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಮಾರ್ಚ್‌ 30ರಂದು ಪ್ರಥಮ ಪಿಯುಸಿ ಫಲಿತಾಂಶ

 

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement