ಬೆಂಗಳೂರು: ಕೇರಳ, ಗುಜರಾತ್ ಮತ್ತು ಛತ್ತೀಸಗಡ ಮಾದರಿಯಲ್ಲಿ ರಾಜ್ಯದಲ್ಲಿಯೂ ಜಿಲ್ಲಾ ಕೇಂದ್ರ ಸಹಕಾರ (ಡಿಸಿಸಿ) ಬ್ಯಾಂಕ್ಗಳ ವಿಲೀನ ಕುರಿತು ಅಧಿಕಾರಿಗಳ ಜೊತೆ ಈಗಾಗಲೇ ಸಭೆ ನಡೆಸಲಾಗಿದೆ. ಈ ಬಗ್ಗೆ ಅಧ್ಯಯನಕ್ಕೆ ಅಧಿಕಾರಿಗಳ ತಂಡವನ್ನು ಆ ರಾಜ್ಯಗಳಿಗೆ ಕಳುಹಿಸಿ, ಕೇಂದ್ರ ಸರ್ಕಾರಕ್ಕೆ ವರದಿ ಕಳುಹಿಸಲಾಗುವುದು. ಕೇಂದ್ರ ಸರ್ಕಾರದ ನಿರ್ದೇಶನದಂತೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ ತಿಳಿಸಿದರು.
ವಿಧಾನ ಪರಿಷತ್ನಲ್ಲಿ ವೈ.ಎ. ನಾರಾಯಣಸ್ವಾಮಿ ಪ್ರಶ್ನೆಗೆ ಉತ್ತರಿಸಿದ ಅವರು ರಾಜ್ಯದಲ್ಲಿರುವ ಯಾವುದೇ ಡಿಸಿಸಿ ಬ್ಯಾಂಕ್ ನಕಲಿ ಸಾಲ ನೀಡಿದ ಪ್ರಕರಣಗಳು ಕಂಡುಬಂದಿಲ್ಲ ಎಂದು ತಿಳಿಸಿದ್ದಾರೆ.
ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ನಲ್ಲಿ ಸ್ವ ಸ್ವಹಾಯ ಸಂಘಗಳ ಹೆಸರಿನಲ್ಲಿ ನಕಲಿ ಸಾಲ ನೀಡಲಾಗುತ್ತಿದ್ದು, ಅರ್ಹರಿಗೆ ಸಾಲ ಸಿಗುತ್ತಿಲ್ಲ ಎಂಬ ನಾರಾಯಣಸ್ವಾಮಿ ಆರೋಪಕ್ಕೆ ಉತ್ತರಿಸಿದ ಸಚಿವರು, ಅಲ್ಲಿ ಡಿಸಿಸಿ ಬ್ಯಾಂಕ್ ಉತ್ತಮವಾಗಿ ಕೆಲಸ ಮಾಡುತ್ತಿದೆ. ಕೃಷಿಯೇತರರಿಗೂ ಸಾಲ ನೀಡಲಾಗಿದೆ. ಸುಸ್ತಿಯಾಗಿರುವ ಸಾಲ ವಸೂಲಿಗೂ ಕ್ರಮ ಕೈಗೊಳ್ಳಲಾಗಿದೆ’ ಎಂದು ಉತ್ತರಿಸಿದರು.
ಬೇರೆ ಬೇರೆ ವಿಷಯಗಳಿಗೆ ಸಂಬಂಧಿಸಿದಂತೆ ಈ ಬ್ಯಾಂಕಿನ ವ್ಯವಹಾರಗಳ ತನಿಖೆ ನಡೆಸಲಾಗುತ್ತಿದೆ. ಒಂದು ತಿಂಗಳಲ್ಲಿ ತನಿಖೆ ಪೂರ್ಣಗೊಳ್ಳಲಿದೆ. ನಕಲಿ ಸಾಲ ನೀಡಿದ ನಿರ್ದಿಷ್ಟ ಪ್ರಕರಣಗಳಿದ್ದರೆ ಅದನ್ನೂ ತಿಳಿಸಿ, ತನಿಖೆ ಮಾಡಿಸಲಾಗುವುದು ಎಂದು ತಿಳಿಸಿದರು.
ನಿಮ್ಮ ಕಾಮೆಂಟ್ ಬರೆಯಿರಿ