ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಸರ್ವಪಕ್ಷಗಳ ಸಭೆ : ಸಿಎಂ ಬೊಮ್ಮಾಯಿ

ಬೆಂಗಳೂರು: ಪರಿಶಿಷ್ಟ ಪಂಗಡದ ಮೀಸಲಾತಿ ಸೇರಿದಂತೆ ವಿವಿಧ ಸಮುದಾಯಗಳಿಗೆ ಮೀಸಲಾತಿ ನೀಡುವ ಸಂಬಂಧ ಸರ್ವಪಕ್ಷಗಳ ಸಭೆ ಕರೆದು ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಗೆ ತಿಳಿಸಿದರು.
ಇಂದು, ಬುಧವಾರ ಕಾಂಗ್ರೆಸ್ ಶಾಸಕರಾದ ಪ್ರಿಯಾಂಕ್ ಖರ್ಗೆ, ಭೀಮಾ ನಾಯಕ್, ಅಜಯ್ ಧರ್ಮಸಿಂಗ್ ಮತ್ತಿತರರು ಧರಣಿ ನಡೆಸಿ ಪರಿಶಿಷ್ಟ ಪಂಗಡಕ್ಕೆ ಶೇ.7.5ರ ಮೀಸಲಾತಿ ನೀಡಬೇಕೆಂದು ಎಂದು ಒತ್ತಾಯಿಸಿದರು.
ಅಷ್ಟರಲ್ಲಿ ಸದನಕ್ಕೆ ಆಗಮಿಸಿದ ಮುಖ್ಯಮಂತ್ರಿ, ಮೀಸಲಾತಿ ಕುರಿತಂತೆ ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ವರದಿ ನೀಡಿದೆ. ಹಿಂದುಳಿದ ವರ್ಗ 3ಬಿನಿಂದ 2ಎಗೆ ಹಾಗೂ 2ಎನಿಂದ ಎಸ್ಟಿಗೆ ವರ್ಗಾಯಿಸಿ ಮೀಸಲಾತಿ ಸೌಲಭ್ಯ ಕಲ್ಪಿಸಬೇಕೆಂದು ಹಲವು ಸಮುದಾಯಗಳು ಬೇಡಿಕೆ ಇಟ್ಟಿವೆ. ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಸುಭಾಷ್ ಆಡಿ ನೇತೃತ್ವದ ಸಮಿತಿ ರಚಿಸಲಾಗಿದ್ದು, ಈ ಸಮಿತಿಯು ಒಂದು ವಾರ ಅಥವಾ 10 ದಿನಗಳಲ್ಲಿ ಮಧ್ಯಂತರ ವರದಿ ನೀಡಲಿದೆ. ಸುಪ್ರೀಂಕೋರ್ಟ್ ಮೀಸಲಾತಿಗೆ ಸಂಬಂಧಿಸಿದಂತೆ ನೀಡಿರುವ ತೀರ್ಪಿನ ಬಗ್ಗೆ ರಾಜ್ಯದ ಅಡ್ವೋಕೇಟ್ ಜನರಲ್ ಅವರಿಂದ ವರದಿ ಪಡೆದು ಶೀಘ್ರವೇ ಸರ್ವಪಕ್ಷಗಳ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿಧರ್ರ ತೆಗೆದುಕೊಳ್ಳಲಿದೆ ಎಂದರು.

ಪ್ರಮುಖ ಸುದ್ದಿ :-   ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ' ಹೇಳಿಕೆ : ಬಿಜೆಪಿ ಶಾಸಕ ಯತ್ನಾಳ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ಮೀಸಲಾತಿ ಹೆಚ್ಚಳದ ಬಗ್ಗೆ ಶಿಫಾರಸ್ಸು ಮಾಡಿದೆ. ಈ ನಡುವೆ ಹಿಂದುಳಿದ ವರ್ಗದ ಹಲವು ಸಮುದಾಯಗಳು ಮೀಸಲಾತಿ ಬೇಡಿಕೆ ಇಟ್ಟಿವೆ. ಸುಪ್ರೀಂಕೋರ್ಟ್ ಇಂದ್ರಸಾನಿ ಪ್ರಕರಣದಲ್ಲಿ ಮೀಸಲಾತಿ ಪ್ರಮಾಣ ಶೇ.50ಕ್ಕಿಂತ ಹೆಚ್ಚಾಗಬಾರದು ಎಂದು ಹೇಳಿದೆ. ವಿಶೇಷ ಪ್ರಕರಣದಲ್ಲಿ ಹೆಚ್ಚಳಕ್ಕೆ ಅವಕಾಶ ಇರುವುದರ ಬಗ್ಗೆ ರಾಜ್ಯ ಅಡ್ವೋಕೇಟ್ ಜನರಲ್ ಅವರಿಂದ ವರದಿ ಕೇಳಲಾಗಿದೆ. ಸ್ವಲ್ಪ ಸಮಯಾವಕಾಶ ಕೊಟ್ಟರೆ ಎಸ್ಸಿ-ಎಸ್ಟಿ ಜನಸಂಖ್ಯೆಗೆ ಅನುಗುಣವಾಗಿ ಕಾನೂನು ಚೌಕಟ್ಟಿನಲ್ಲಿ ಮೀಸಲಾತಿ ಒದಗಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.
ಈ ಹಂತದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಕಾಲಮಿತಿಯಲ್ಲಿ ನಿರ್ಧಾರ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಇದಕ್ಕೆ ಮುಖ್ಯಮಂತ್ರಿ ಆದ್ಯತೆ ಮೇಲೆ ನಿರ್ಧಾರ ಕೈಗೊಂಡು ಒಳ್ಳೆಯ ಸುದ್ದಿ ಕೊಡುತ್ತೇವೆ. ಹಿಂದುಳಿದ ವರ್ಗದ ಆಯೋಗದ ವರದಿ ಅನ್ವಯ ಹಿಂದುಳಿದ ವರ್ಗದ ಸಮುದಾಯದ ಮೀಸಲಾತಿ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಎಸ್ಟಿ ಸಮುದಾಯಕ್ಕೆ ನ್ಯಾಯ ಒದಗಿಸುತ್ತೇವೆ ಎಂದು ಹೇಳಿದರು.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement