ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಲು ಬೇಕಾದ ನೀಲನಕ್ಷೆ ಸಿದ್ಧಪಡಿಸಿ ಕೊಡಿ: ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ಸೂಚನೆ

ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಠ 150 ಸ್ಥಾನ ಗೆಲ್ಲಲು ಬೇಕಾದ ನೀಲನಕ್ಷೆಯನ್ನು ಏಪ್ರಿಲ್ 16 ರೊಳಗೆ ಸಿದ್ಧಪಡಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದ ಬಿಜೆಪಿ ನಾಯಕರಿಗೆ ಸೂಚನೆ ನೀಡಿದ್ದಾರೆ.

ಶುಕ್ರವಾರ ಅಮಿತ್ ಶಾ ನೇತೃತ್ವದಲ್ಲಿ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮುಂಬರುವ ವಿಧಾನಸಭೆ ಚುನಾವಣೆ ಕಾರ್ಯತಂತ್ರ ಕುರಿತು ಸುದೀರ್ಘವಾಗಿ ಚರ್ಚೆ ನಡೆದಿದ್ದು, ಈಗಿರುವ 120 ಶಾಸಕರ ಸಂಖ್ಯೆಯನ್ನು ಮುಂದಿನ ಚುನಾವಣೆಯಲ್ಲಿ 150ಕ್ಕೆ ಹೆಚ್ಚಿಸಲು ಬೇಕಾದ ನೀಲ ನಕ್ಷೆಯನ್ನು ಸಿದ್ಧಪಡಿಸಿ ಏಪ್ರಿಲ್ 16ಕ್ಕೆ ರಾಜ್ಯಕ್ಕೆ ಆಗಮಿಸುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರಿಗೆ ನೀಡುವಂತೆ ಶಾ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಈ ಹಿಂದೆ ಎರಡು ಬಾರಿ ಆದಂತೆ ಮುಂಬರುವ ಚುನಾವಣೆಯಲ್ಲಿಯೂ ಬಿಜೆಪಿಗೆ ಬಹುಮತದ ಕೊರತೆ ಆಗದಂತೆ ನೋಡಿಕೊಳ್ಳಬೇಕು. 150 ಶಾಸಕರನ್ನು ಗೆಲ್ಲಿಸಿಕೊಂಡು ಬರಲು ಎಲ್ಲ ನಾಯಕರಿಗೂ ಜವಾಬ್ದಾರಿ ಹಂಚಿಕೆ ಮಾಡಬೇಕು. ಹಳೇ ಮೈಸೂರು ಭಾಗ, ಉತ್ತರ ಕರ್ನಾಟಕ, ಕರಾವಳಿ, ಮಧ್ಯ ಕರ್ನಾಟಕ ಭಾಗಗಳಲ್ಲಿ ಪಕ್ಷದಲ್ಲಿರುವ ಲೋಪ ಹಾಗೂ ನ್ಯೂನತೆಗಳನ್ನು ಪತ್ತೆ ಹಚ್ಚಿ ಅಲ್ಲಿ ಪಕ್ಷ ಬಲವರ್ಧನೆಗೆ ಮುಂದಾಗಬೇಕು ಎಂದು ಅಮಿತ್‌ ಶಾ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯ ಸರ್ಕಾರ ಜಾರಿಗೆ ಯೋಜನೆಗಳನ್ನು ಜನರಿಗೆ ತಲುಪಿಸಲು ಕಾರ್ಯತಂತ್ರ ರೂಪಿಸಬೇಕು, ಬಿಜೆಪಿ ಶಾಸಕರು ಇಲ್ಲದಿರುವ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲು ಬೇಕಾದ ಸಿದ್ಧತೆ ಮಾಡಿಕೊಳ್ಳಬೇಕು. ಗೆಲ್ಲುವ ಸಾಮರ್ಥ್ಯ ಇಲ್ಲದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ಬಿಜೆಪಿಗೆ ಬರುವವರನನ್ನು ಸೇರಿಸಿಕೊಳ್ಳುವಂತೆ ಅಮಿತ್ ಶಾ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ನಡೆದ ಕೋರ್ ಕಮಿಟಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲು, ಮುಂದಿನ ಚುನಾವಣೆಗೆ ಬೇಕಾದ ತಯಾರಿ ಬಗ್ಗೆ ಚರ್ಚೆಯಾಗಿದೆ‌. ಪಕ್ಷದ ಸಂಘಟನೆ ಬಗ್ಗೆಯೂ ಚರ್ಚೆ ನಡೆದಿದೆ. ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವ ಕುರಿತು ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.
ಸಚಿವ ಸಂಪುಟ ವಿಸ್ತರಣೆ ವಿಚಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಿಟ್ಟ ವಿಚಾರ. ನಿಗಮ-ಮಂಡಳಿ ವಿಚಾರ, ನಾನು ಮುಖ್ಯಮಂತ್ರಿ ಬೊಮ್ಮಾಯಿ ಅವರು ಕುಳಿತು ಅಂತಿಮಗೊಳಸಿತ್ತೇವೆ ಎಂದರು.

ಪ್ರಮುಖ ಸುದ್ದಿ :-   ಮಾರ್ಚ್‌ 30ರಂದು ಪ್ರಥಮ ಪಿಯುಸಿ ಫಲಿತಾಂಶ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement