ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗಾವಣೆಗೆ ಕಾಲೇಜು ಶಿಕ್ಷಣ ಇಲಾಖೆಯಿಂದ ಕೌನ್ಸೆಲಿಂಗ್ಗೆ ಆದೇಶ ಹೊರಡಿಸಲಾಗಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಕೂ ಮೂಲಕ ಮಾಹಿತಿ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣಅವರು ವರ್ಗಾವಣೆ ವೇಳಾಪಟ್ಟಿಯನ್ನು ಹಂಚಿಕೊಂಡಿದ್ದಾರೆ.
ರಾಜ್ಯದ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬೋಧಕರ (ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು, ಗ್ರಂಥಪಾಲಕರು, ಕ್ರೀಡಾ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರು) ವರ್ಗಾವಣೆಗೆ ಆದೇಶ ಹೊರಡಿಸಲಾಗಿದೆ. ಮಂಜೂರಾದ ಬೋಧಕರ ಹುದ್ದೆಗಳ ಶೇ. 9ರಷ್ಟು ಸಾರ್ವಜನಿಕ ಹಿತಾಸಕ್ತಿಯ ವರ್ಗಾವಣೆಗಳು ಹಾಗೂ ಶೇ. 6ರಷ್ಟು ವಿಶೇಷ ಪ್ರಕರಣಗಳ ಕೋರಿಕೆ ವರ್ಗಾವಣೆ ನಡೆಸಲು ಅವಕಾಶವಿದೆ ಎಂದು ಅವರು ತಿಳಿಸಿದ್ದಾರೆ.
ವರ್ಗಾವಣೆ ನಿಯಮಗಳಂತೆ ವಿಶೇಷ ಪ್ರಕರಣಗಳಿಗೆ ಅನ್ವಯಿಸುವ ಬೋಧಕರು ಅಗತ್ಯ ದಾಖಲೆಗಳೊಂದಿಗೆ ಕಡ್ಡಾಯವಾಗಿ ಕಾಲೇಜು ಶಿಕ್ಷಣ ಇಲಾಖೆಯ ವೆಬ್ಸೈಟ್ನಲ್ಲಿ ಲಭ್ಯವಿರುವ ಆನ್ಲೈನ್ ನಮೂನೆಯಲ್ಲಿ ನಿಗದಿತ ದಿನಾಂಕದ ಒಳಗೆ ವರ್ಗಾವಣೆ ಅರ್ಜಿ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಸಲ್ಲಿಸುವ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅಗತ್ಯ ದಾಖಲಾತಿಗಳಿಲ್ಲದ ಮನವಿಗಳನ್ನು ತಿರಸ್ಕರಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ