ಧಾರವಾಡ: ನುಗ್ಗಿಕೇರಿ ಆಂಜನೇಯ ದೇವಸ್ಥಾನದಲ್ಲಿ ಹಿಂದೂಯೇತರ 4 ಅಂಗಡಿಗಳ ಮೇಲೆ ದಾಳಿ

ಧಾರವಾಡ : ನುಗ್ಗಿಕೇರಿ ಆಂಜನೇಯ ದೇವಸ್ಥಾನದಲ್ಲಿ ಹಿಂದೂಯೇತರ ವ್ಯಾಪಾರಿಗಳ 4 ಅಂಗಡಿಗಳ ಮೇಲೆ ದಾಳಿ ಮಾಡಲಾಗಿದೆ ಎಂದು ವರದಿಯಾಗಿದೆ.
ಕಳೆದ 15 ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದ ನಬಿಸಾಬ್ ಎಂಬುವವರ ಅಂಗಡಿ ಸೇರಿದಂತೆ ಇತರೆ ನಾಲ್ಕು ಅಂಗಡಿಗಳಿಗೆ ಹಾನಿಮಾಡಲಾಗಿದೆ. ಅಂಗಡಿಯಲ್ಲಿದ್ದ ಕಲ್ಲಂಗಡಿ ಹಣ್ಣು, ತೆಂಗಿನಕಾಯಿ ಒಡೆದು ಹಾಕಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ.

ಕಳೆದ 15 ದಿನಗಳ ಹಿಂದೆ ಶ್ರೀರಾಮಸೇನಾ ಕಾರ್ಯಕರ್ತರು ಆವರಣದಲ್ಲಿ ಹಿಂದೂಯೇತರ ಅಂಗಡಿಗಳ ವ್ಯಾಪಾರಕ್ಕೆ ಅವಕಾಶ ಕೊಡಬಾರದು ಎಂದು ಮನವಿ ನೀಡಿದ್ದರು. ಮನವಿ ಸ್ವೀಕರಿಸಿದ್ದ ದೇವಸ್ಥಾನದ ಆಡಳಿತ ಮಂಡಳಿ ಚರ್ಚಿಸಿ ತೀರ್ಮಾನಕ್ಕೆ ಬರುವುದಾಗಿ ಭರವಸೆ ನೀಡಿತ್ತು. ಆದರೆ, ಈ ಕುರಿತು ದೇವಸ್ಥಾನ ಸಮಿತಿ ಯಾವುದೇ ಕ್ರಮಕೈಗೊಳ್ಳದ ಹಿನ್ನೆಲೆಯಲ್ಲಿ ಏಕಾಏಕಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ನುಗ್ಗಿಕೇರಿಗೆ ಬಂದು ಮುಸ್ಲಿಂ ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾರೆ.

ಘಟನೆಯಿಂದ ನಷ್ಟ ಅನುಭವಿಸಿದ ಹಿಂದೂಯೇತರ ವ್ಯಾಪಾರಿ ನಬಿಸಾಬ್, ನೋಡ ನೋಡುತ್ತಿದ್ದಂತೆಯೇ ಎಲ್ಲಾ ಒಡೆಯುತ್ತ ಬಂದರು. ಅವರು 8-10 ಜನ ಇದ್ದರು. 6 ಕ್ವಿಂಟಾಲ್ ಕಲ್ಲಂಗಡಿ ಹಣ್ಣು ತೆಗೆದುಕೊಂಡು ಬಂದಿದ್ದೆ. ಅದರಲ್ಲಿ 1 ಕ್ವಿಂಟಾಲ್ ಮಾತ್ರ ಮಾರಾಟವಾಗಿತ್ತು. ಉಳಿದಿದ್ದು ಹಾಳಾಗಿದೆ ಎಂದು ಮರುಗಿದರು.
ಘಟನೆ ಬಗ್ಗೆ ಪ್ರತಿಕ್ರಿಯಿಸಿದ ದೇವಸ್ಥಾನದ ಪರ್ಯಾಯಸ್ಥರು, ಶನಿವಾವಾಗಿದ್ದರಿಂದ ಹೆಚ್ಚಿನ ಜನಜಂಗುಳಿ ಇತ್ತು. ಶನಿವಾರ ಯಾವಾಗಲೂ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುತ್ತಾರೆ. ಹೀಗಾಗಿ ಹೊರಗಡೆ ಗಲಾಟೆ ನಡೆದಿರುವ ಬಗ್ಗೆ ಲಕ್ಷ್ಯ ಕೊಡಲು ಸಾಧ್ಯವಾಗಲಿಲ್ಲ. ಈ ಬಗ್ಗೆ ಸಭೆ ಮಾಡಿ ಏನಾಗಿದೆ ಎಂದು ಮಾಹಿತಿ ಪಡೆದು ನೀಡುತ್ತೇವೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಣೆ ಮಾಡುತ್ತಿದ್ದ 10 ಹಳದಿ ಅನಕೊಂಡ ಹಾವುಗಳು ವಶಕ್ಕೆ, ಓರ್ವನ ಬಂಧನ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement