ಆಂಧ್ರಪ್ರದೇಶದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ: ಆರು ಮಂದಿ ಸಾವು, 13 ಮಂದಿಗೆ ಗಾಯ

ಅಮರಾವತಿ: ಆಂಧ್ರಪ್ರದೇಶದ ಎಲೂರು ಜಿಲ್ಲೆಯ ಪೋರಸ್ ಲ್ಯಾಬೋರೇಟರೀಸ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಆರು ಜನರು ಮೃತಪಟ್ಟಿದ್ದಾರೆ ಮತ್ತು 13 ಮಂದಿ ಗಾಯಗೊಂಡಿದ್ದಾರೆ.
ಪ್ರಯೋಗಾಲಯದಲ್ಲಿ ಸ್ಫೋಟದ ನಂತರ, ಬೆಂಕಿ ಕಾಣಿಸಿಕೊಂಡು ಆರು ಜನರು ಮೃತಪಟ್ಟಿದರು, ಸುಮಾರು 13 ಮಂದಿ ಗಾಯಗೊಂಡರು ಮತ್ತು ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಪಘಾತದ ವೇಳೆ ಬ್ಲಾಕ್‌ನಲ್ಲಿ 30 ಮಂದಿ ಕೆಲಸ ಮಾಡುತ್ತಿದ್ದರು.

ಏಪ್ರಿಲ್ 13 ರ ಬುಧವಾರ ರಾತ್ರಿ 11:30 ರ ಸುಮಾರಿಗೆ ಈ ಅವಘಡ ಸಂಭವಿಸಿದ್ದು, ಅನಿಲ ಸೋರಿಕೆಯಿಂದ ಸ್ಫೋಟ ಸಂಭವಿಸಿ ಸ್ಥಾವರದ ನಾಲ್ಕನೇ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆ ಮತ್ತು ನುಜ್ವಿದ್ ಪಟ್ಟಣದ ಗಿಫರ್ಡ್ ಸ್ಮಾರಕ ಆಸ್ಪತ್ರೆಗೆ ರವಾನಿಸಲಾಗಿದೆ.
ಪೊಲೀಸರು, ಕಂದಾಯ, ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಿಸಿದ್ದಾರೆ. ಗಾಯಾಳುಗಳನ್ನು ಉತ್ತಮ ಚಿಕಿತ್ಸೆಗಾಗಿ ವಿಜಯವಾಡದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ರಾಹುಲ್ ದೇವ್ ಶರ್ಮಾ ಪ್ರಕಾರ, ಅಪಘಾತದ ಸಂಭವನೀಯ ಕಾರಣಗಳ ಬಗ್ಗೆ ವಿವರಗಳನ್ನು ಸಂಗ್ರಹಿಸಲಾಗಿದೆ.
ರಿಯಾಕ್ಟರ್ ಸ್ಫೋಟಗೊಂಡಿದೆಯೇ ಅಥವಾ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆಯೇ ಎಂದು ಇನ್ನೂ ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯಪಾಲ ಬಿಸ್ವ ಭೂಷಣ ಹರಿಚಂದನ್ ಅವರು ಪ್ರಾಣಹಾನಿಗಾಗಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.

ಪ್ರಮುಖ ಸುದ್ದಿ :-   ಟಿಎಂಸಿ ಬಂಡಾಯ ಸಂಸದರು ಎನ್‌ಸಿಪಿಐ ಜೊತೆ ವಿಲೀನ ; ದಿಢೀರ್‌ ರಾಷ್ಟ್ರ ರಾಜಕಾರಣದ ಕೇಂದ್ರಬಿಂದುವಾದ ಅಪರಿಚಿತ ಪಕ್ಷ...! ಇದರ ಬಗ್ಗೆ ಗೊತ್ತೆ..?

ತನಿಖೆಗೆ ಸಿಎಂ ಜಗನ್ ಆದೇಶ
ಏಲೂರು ಜಿಲ್ಲೆಯ ಅಕ್ಕಿರೆಡ್ಡಿಗುಡೆಂ ಪೋರಸ್ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದ ಬಗ್ಗೆ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 25 ಲಕ್ಷ, ಗಂಭೀರವಾಗಿ ಗಾಯಗೊಂಡವರಿಗೆ 5 ಲಕ್ಷ ಹಾಗೂ ಸಣ್ಣಪುಟ್ಟ ಗಾಯಗೊಂಡವರಿಗೆ 2 ಲಕ್ಷ ಪರಿಹಾರ ನೀಡುವುದಾಗಿ ಅವರು ಘೋಷಿಸಿದ್ದಾರೆ. ಘಟನೆಯ ಸಂಪೂರ್ಣ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಹಾಗೂ ಎಸ್ಪಿಗೆ ಅವರು ಸೂಚಿಸಿದ್ದಾರೆ. ಅಲ್ಲದೆ, ಗಾಯಾಳುಗಳಿಗೆ ಸಂಪೂರ್ಣ ವೈದ್ಯಕೀಯ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement