ಹುಬ್ಬಳ್ಳಿ ಘಟನೆ ವ್ಯವಸ್ಥಿತ ಸಂಚು ಎಂಬುದು ಮೇಲ್ನೋಟಕ್ಕೆ ಕಾಣುವ ಅಂಶ; ಗೃಹ ಸಚಿವ ಆರಗ ಜ್ಞಾನೇಂದ್ರ

ಹೊಸಪೇಟೆ (ವಿಜಯನಗರ): ಹುಬ್ಬಳ್ಳಿಯಲ್ಲಿ ಶನಿವಾರ ತಡರಾತ್ರಿ ನಡೆದ ಗಲಾಟೆ ಒಂದು ವ್ಯವಸ್ಥಿತ ಸಂಚು ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಕಿಡಿಗೇಡಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮೊದಲೇ ಕಲ್ಲು ಸಂಗ್ರಹ ಮಾಡಲಾಗಿತ್ತು ಎಂಬ ಮಾಹಿತಿಯಿದೆ ಎಂದು ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶನಿವಾರ ರಾತ್ರಿ ಒಬ್ಬ ಯುವಕ ತನ್ನ ಮೊಬೈಲ್ ವಾಟ್ಸಪ್ ನಲ್ಲಿ ವಿವಾದಿತ ಸ್ಟೇಟಸ್ ಪೋಸ್ಟ್ ಹಾಕಿದ್ದ. ಅದರಿಂದ ಗಲಾಟೆ ಆರಂಭವಾಗಿದೆ. ಸದ್ಯಕ್ಕೆ ಪರಿಸ್ಥಿತಿ ಹತೋಟಿಯಲ್ಲಿದೆ. ಈಗಾಗಲೇ ಪೋಸ್ಟ್ ಹಾಕಿದ ವ್ಯಕ್ತಿ ಸೇರಿದಂತೆ ಹಲವರ ಬಂಧನವಾಗಿದೆ. ಆದಾಗ್ಯೂ ಕಲ್ಲು ತೂರಾಟ ನಡೆದಿರುವುದು ಅಕ್ಷಮ್ಯ. ಕಲ್ಲು ತೂರಾಟಕ್ಕೆ ಮೊದಲೇ ಕಲ್ಲುಗಳನ್ನು ಸಂಗ್ರಹಿಸಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದ್ದು, ಮೇಲ್ನೋಟಕ್ಕೆ ಇದೊಂದು ವ್ಯವಸ್ಥಿತ ಸಂಚು ಎಂಬುದಾಗಿ ಕಂಡು ಬರುತ್ತಿದೆ. ಕಾನೂನು ಕೈಗೆತ್ತಿಕೊಳ್ಳುವವರು ಯಾವುದೇ ಧರ್ಮದವರಾಗಲಿ ಅವರನ್ನು ಬಿಡುವ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾಲ್ಕು ಮಂದಿ ಪೊಲೀಸರು ಹಾಗು ಕೆಲ ಸಿಬ್ಬಂದಿಗೆ ಗಾಯವಾಗಿದೆ. ಓರ್ವ ಪಿಎಸ್‌ಐಗೆ ಗಂಭೀರ ಗಾಯವಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಪರಿಸ್ಥಿತಿ ತಿಳಿಯಾಗಿದೆ ಎಂದು ತಿಳಿಸಿದರು.
ವಿವಾದಿತ ಪೋಸ್ಟ್ ಹಾಕಿ ಬಂಧನಕ್ಕೊಳಗಾದ ವ್ಯಕ್ತಿಯನ್ನು ಠಾಣೆಯಿಂದ ಹೊರಗೆ ಕಳುಹಿಸಿ ಎಂದು ಒತ್ತಾಯಿಸಿ ಗಲಾಟೆ ಮಾಡಿದ್ದಾರೆ ಎಂದು ಗೃಹ ಸಚಿವರು ಮಾಹಿತಿ ನೀಡಿದರು.
ಹುಬ್ಬಳ್ಳಿಯಲ್ಲಿ ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಶಾಂತಿ ಕಾಪಾಡಲು ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement