ಕಲಬುರಗಿ: ಅಕ್ಟೋಬರ್ 3, 2021 ರಂದು ನಡೆದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸಾಮಾನ್ಯ ಪ್ರವೇಶ ಪರೀಕ್ಷೆ (ಪಿಎಸ್ಐ ಸಿಇಟಿ) ಹಗರಣಕ್ಕೆ ಸಂಬಂಧಿಸಿದಂತೆ ಜ್ಞಾನ ಗಂಗಾ ಶಿಕ್ಷಣ ಸಂಸ್ಥೆಯ ಮೇಲೆ ಸೋಮವಾರ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ರಾಜ್ಯದಲ್ಲಿನ 524 ಪಿಎಸ್ಐ ಹುದ್ದೆಗಳನ್ನು ಅನ್ಯಾಯದ ರೀತಿಯಲ್ಲಿ ಭರ್ತಿ ಮಾಡಲು ನಡೆದ ಪರೀಕ್ಷೆಯಲ್ಲಿ ಪಾಲ್ಗೊಳ್ಳಲು ಹಲವು ಅಭ್ಯರ್ಥಿಗಳು ಲಕ್ಷಗಟ್ಟಲೆ ಹಣವನ್ನು ನೀಡಿದ್ದಾರೆ ಎನ್ನಲಾಗಿದೆ.
ಉಪ ಪೊಲೀಸ್ ವರಿಷ್ಠಾಧಿಕಾರಿಗಳಾದ (ಡಿಎಸ್ಪಿ) ಶಂಕರಗೌಡ ಪಾಟೀಲ ಮತ್ತು ಪ್ರಕಾಶ ರಾಥೋಡ ನೇತೃತ್ವದ ತಂಡವು ಸಂಸ್ಥೆಯ ಮೇಲೆ ದಾಳಿ ನಡೆಸಿ ಸಂಸ್ಥೆಗೆ ಸೇರಿದ ಸಿಸಿಟಿವಿ ಕ್ಯಾಮೆರಾಗಳು ಮತ್ತು ಕಂಪ್ಯೂಟರ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಭಾನುವಾರ ತಡರಾತ್ರಿ ಸಿಐಪಿ ಎಸ್ಪಿ ರಾಘವೇಂದ್ರ ಹೆಗಡೆ, ಡಿಎಸ್ಪಿಗಳಾದ ಶಂಕರಗೌಡ ಪಾಟೀಲ, ಪ್ರಕಾಶ ರಾಠೋಡ್ ನೇತೃತ್ವದ ತಂಡ ಜ್ಞಾನಗಂಗಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರಾಜೇಶ್ ಹಾಗರಗಿ ಅವರ ಮನೆಯಲ್ಲಿ ಸಾಕ್ಷ್ಯ ಸಂಗ್ರಹಿಸಲು ಶೋಧ ನಡೆಸಿದ್ದು, ನಂತರ ಅವರನ್ನು ಬಂಧಿಸಿದ್ದಾರೆ. ಅವರ ಪತ್ನಿ ದಿವ್ಯಾ ಹಾಗರಗಿ ಶಾಲೆಯ ಕಾರ್ಯದರ್ಶಿಯಾಗಿದ್ದಾರೆ. ಇವರು ಬಿಜೆಪಿ ಮಹಿಳಾ ಮೋರ್ಚಾದ ಮಾಜಿ ಜಿಲ್ಲಾಧ್ಯಕ್ಷೆ ಎಂದು ಹೇಳಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೇಶ್ ಹಾಗರಗಿ ಸೇರಿದಂತೆ ಎಂಟು ಮಂದಿಯನ್ನು ಇದುವರೆಗೆ ಬಂಧಿಸಲಾಗಿದ್ದು, ಅವರ ಪತ್ನಿ ದಿವ್ಯಾ ಮತ್ತು ಕಾಶಿನಾಥ್ ತಲೆಮರೆಸಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಪಿಎಸ್ ಐ ಸಿಇಟಿ ವೇಳೆ ಕೆಲ ಮೇಲ್ವಿಚಾರಕರು ಪರೀಕ್ಷೆ ಬರೆಯುವ ಮೂಲಕ ಅಭ್ಯರ್ಥಿಗಳಿಗೆ ಸಹಾಯ ಮಾಡಿದ್ದಾರೆ ಎಂದು ಸಿಐಡಿ ಮೂಲಗಳು ತಿಳಿಸಿವೆ. ಸಿಐಡಿ ಅಧಿಕಾರಿಗಳು ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ಮೇಲ್ವಿಚಾರಕರಾದ ಸುಮಾ, ಸಿದ್ದಮ್ಮ ಮತ್ತು ಸಾವಿತ್ರಿಯನ್ನು ಬಂಧಿಸಿದ್ದರು. ನಂತರ ಅವರನ್ನು ವಶಕ್ಕೆ ಪಡೆಯಲಾಯಿತು. ಸಿಸಿಟಿವಿ ಕ್ಯಾಮೆರಾಗಳನ್ನೂ ತಂಡ ವಶಪಡಿಸಿಕೊಂಡಿದೆ.
ಅವ್ಯವಹಾರ ನಡೆದ ದಿನದಂದು ಸಂಸ್ಥೆಯ ಪ್ರಾಂಶುಪಾಲ ಕಾಶಿನಾಥ್ ಅರ್ಧ ಗಂಟೆ ಕಾಲ ಸಿಸಿಟಿವಿ ಕ್ಯಾಮೆರಾಗಳನ್ನು ಸ್ವಿಚ್ ಆಫ್ ಮಾಡಿದ್ದರು ಎಂದು ತಿಳಿದುಬಂದಿದೆ.
ಈ ನಡುವೆ ಬಿಜೆಪಿ ರಾಜ್ಯ ಘಟಕದ ಮಾಧ್ಯಮ ಸಂಚಾಲಕ ಕರುಣಾಕರ ಖಾಸಾಲೆ ಸೋಮವಾರ ಪತ್ರಿಕಾ ಟಿಪ್ಪಣಿ ಬಿಡುಗಡೆ ಮಾಡಿ, ದಿವ್ಯಾ ಹಾಗರಗಿ ಅವರು ಬಿಜೆಪಿ ನಾಯಕಿ ಅಲ್ಲ, ಅವರು ಬಿಜೆಪಿಯೊಂದಿಗೆ ಸಂಪರ್ಕ ಹೊಂದಿಲ್ಲ ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳು ಸಿಐಡಿಗೆ ಮುಕ್ತ ಹಸ್ತ ನೀಡಿದ್ದು, ಹಗರಣದಲ್ಲಿ ಭಾಗಿಯಾದವರ ವಿರುದ್ಧ ತನಿಖಾ ತಂಡ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಕರುಣಾಕರ ಹೇಳಿದ್ದಾರೆ.
ದಿವ್ಯಾ ಅವರು ಜಿಲ್ಲಾ ಘಟಕದ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದರೂ ಅವರಿಗೆ ನೀಡಲಾಗಿದ್ದ ಎಲ್ಲ ಜವಾಬ್ದಾರಿಗಳನ್ನು ಕಳೆದ ವರ್ಷ ಅಕ್ಟೋಬರ್ನಲ್ಲಿ ಹಿಂಪಡೆಯಲಾಗಿದೆ ಎಂದು ಬಿಜೆಪಿ ಮೂಲಗಳು ಖಚಿತಪಡಿಸಿವೆ. ಆದರೆ ಅವರನ್ನು ಪಕ್ಷದಿಂದ ಹೊರಹಾಕಿಲ್ಲ ಎಂದು ಹೇಳಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ