ದೆಹಲಿ: ಮನೆ ಎದುರು ನಿಂತಿದ್ದ ಬಿಜೆಪಿ ಮುಖಂಡನ ಮೇಲೆ ಗುಂಡು ಹಾರಿಸಿ ಹತ್ಯೆ

ನವದೆಹಲಿ: ಪೂರ್ವ ದೆಹಲಿಯಲ್ಲಿ ಬುಧವಾರ ರಾತ್ರಿ ಬಿಜೆಪಿ ಮುಖಂಡರೊಬ್ಬರ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಹತ್ಯೆಯಾದ ವ್ಯಕ್ತಿಯನ್ನು ಜಿತು ಚೌಧರಿ (42 ವರ್ಷ) ಎಂದು ಗುರುತಿಸಲಾಗಿದೆ.
ಗಾಜಿಪುರ ಪ್ರದೇಶದ ಮಯೂರ್ ವಿಹಾರದ ಮೂರನೇ ಹಂತದಲ್ಲಿರುವ ಜಿತು ಅವರು ಮನೆಯ ಹೊರಗೆ ನಿಂತಿದ್ದಾಗ ಬೈಕ್‌ನಲ್ಲಿ ಬಂದವರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ. ಗುಂಡೇಟಿನಿಂದ ತೀವ್ರ ಗಾಯಗೊಂಡಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಕರೆತರುವಾಗಲೇ ಮೃತಪಟ್ಟಿದ್ದರು ಎಂದು ವೈದ್ಯರು ಘೋಷಿಸಿದರು. “ಜಿತು ಚೌಧರಿ ಅವರಿಗೆ ಗುಂಡೇಟಿನಿಂದ ಗಾಯಗಳಾಗಿತ್ತು” ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ.

ಅಪರಾಧ ಕೃತ್ಯ ನಡೆದ ಸ್ಥಳದಿಂದ ನಾಲ್ಕು ಖಾಲಿ ಕ್ಯಾಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಕೆಲವು ಪುರಾವೆಗಳು ದೊರಕಿವೆ. ಗುಂಡಿನ ದಾಳಿ ನಡೆಸಿದ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಅವರ ಪತ್ತೆಗೆ ಪೊಲೀಸರು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಉಪ ಪೊಲೀಸ್ ಆಯುಕ್ತರಾದ (ಪೂರ್ವ) ಪ್ರಿಯಾಂಕಾ ಕಶ್ಯಪ್ ಮಾಹಿತಿ ನೀಡಿದ್ದಾರೆ.
ರಾತ್ರಿ 8:15ರ ಸುಮಾರಿಗೆ ಹತ್ಯೆ ನಡೆದಿದೆ. ಜಿತು ಅವರ ನಿವಾಸದ ಮುಂದೆ ಜನರ ಗುಂಪು ಸೇರಿರುವುದನ್ನು ಗಮನಿಸಿದ ಗಸ್ತು ಪೊಲೀಸ್ ಸಿಬ್ಬಂದಿ ಅಲ್ಲಿಗೆ ತೆರಳಿದ್ದರು. ಗುಂಡೇಟಿನಿಂದ ಗಾಯಗೊಂಡಿದ್ದ ಜಿತು ಮನೆಯ ಹೊರಗಿನ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಜನರ ಸಹಾಯದಿಂದ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅವರು ಬಿಜೆಪಿ ಮಾತುರ್ ವಿಹಾರ್ ಜಿಲ್ಲಾ ಘಟಕದ ಕಾರ್ಯದರ್ಶಿಯಾಗಿದ್ದರು.
ಈ ಹತ್ಯೆಗೆ ಕಾರಣ ಏನೆಂದು ಗೊತ್ತಾಗಿಲ್ಲ. ಎಷ್ಟು ಮಂದಿ ಆರೋಪಿಗಳು ಈ ಕೃತ್ಯ ಎಸಗಿದ್ದಾರೆ? ಅವರು ಜಿತು ಅವರಿಗೆ ಪರಿಚಿತರೇ? ಎಂಬುದು ತನಿಖೆಯ ನಂತರ ಗೊತ್ತಾಗಬೇಕಿದೆ.

ಪ್ರಮುಖ ಸುದ್ದಿ :-   ಧರ್ಮದ ಹೆಸರಿನಲ್ಲಿ ಮತ ಯಾಚನೆ: ಮೋದಿ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧಿಸಲು ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement