ಪಿಎಸ್‌ಐ ನೇಮಕಾತಿ ಹಗರಣ: ಅಫಜಲಪುರ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷನ ಬಂಧನ

ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಗರಣದಲ್ಲಿ ಭಾಗಿಯಾದ ಆರೋಪದ ಮೇಲೆ ಅಫಜಲಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹಾಂತೇಶ ಪಾಟೀಲ ಎಂಬವರನ್ನು ಶುಕ್ರವಾರ ಸಿಐಡಿ ಪೊಲೀಸರು ಬಂಧಿಸಿದ್ದು, ಇದರೊಂದಿಗೆ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ.
ಇದೇ ಪ್ರಕಣದಲ್ಲಿ ಗುರುವಾರ ಬಂಧಿಸಲಾದ ಅಫಜಲಪುರ ಶಾಸಕ ಎಂ.ವೈ. ಪಾಟೀಲ ಅವರ ಗನ್‌ಮ್ಯಾನ್‌ ಹಯ್ಯಾಳಿ (ಅಣ್ಣಯ್ಯ) ದೇಸಾಯಿ ಅವರಿಗೆ ಸಹಾಯ ಮಾಡಿದ ಆರೋಪದ ಮಹಾಂತೇಶನನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ. ಮಹಾಂತೇಶ ಅವರ ತಮ್ಮ ಆರ್‌.ಡಿ. ಪಾಟೀಲ ತಲೆಮರೆಸಿಕೊಂಡಿದ್ದಾನೆ ಎಂದು ಹೇಳಲಾಗಿದೆ.

ಅಫಜಲಪುರ ಪೊಲೀಸರು ಬಂಧಿಸಲು ಹೋದಾಗ ಆರೋಪಿಗಳು ತೀವ್ರ ವಿರೋಧ ವ್ಯಕ್ತಪಡಿಸಿದರು. ಕೊನೆಗೆ ಸಿಐಡಿ ಅಧಿಕಾರಿಗಳೇ ಸ್ಥಳಕ್ಕೆ ಹೋಗಿ, ಮಹಾಂತೇಶನನ್ನು ಕಾರಿನಲ್ಲೇವಶಕ್ಕೆ ಪಡೆದು, ಕಲಬುರಗಿಗೆ ಕರೆತಂದಿದ್ದಾರೆ.
ಅಫಜಪುರ ತಾಲ್ಲೂಕಿನ ಸೊನ್ನ ಗ್ರಾಮದ ನಿವಾಸಿಯಾದ ಮಹಾಂತೇಶ, ಹಲವು ವರ್ಷಗಳಿಂದ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದಾರೆ. ನಾಲ್ಕು ವರ್ಷಗಳಿಂದ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾಗಿ, ಎರಡು ಬಾರಿ ಜಿಲ್ಲಾ ಪಂಚಾಯತದ ಬಡದಾಳ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಪರಾಭವಗೊಂಡಿದ್ದಾರೆ ಎನ್ನಲಾಗಿದೆ.
ಮಹಾಂತೇಶ ಬಂಧನದೊಂದಿಗೆ ಪ್ರಕರಣ ಹೊಸ ರೂಪ ಪಡೆದಿದ್ದು, ಕಾಂಗ್ರೆಸ್‌ ನಾಯಕರು ಮುಜುಗರ ಅನುಭವಿಸುವಂತಾಗಿದೆ. ‘ಹಗರಣದ ಮುಖ್ಯ ಆರೋಪಿ ದಿವ್ಯಾ ಹಾಗರಗಿ ಅವರು ಬಿಜೆಪಿ ನಾಯಕಿ, ಬಿಜೆಪಿಯ ಹಲವು ನಾಯಕರೇ ಇದರಲ್ಲಿ ಭಾಗಿಯಾಗಿದ್ದಾರೆ. ಪ್ರಕರಣ ನ್ಯಾಯಾಂಗ ತನಿಖೆಗೆ ವಹಿಸಬೇಕು’ ಎಂದು ಕಾಂಗ್ರೆಸ್‌ ಮುಖಂಡರು ಹೋರಾಟ ಮಾಡಿದ್ದರು. ಈಗ ಇದೇ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡನ ಬಂಧನವಾಗಿದೆ.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement