ಬೆಂಗಳೂರು: ಕರ್ನಾಟಕದಲ್ಲಿ ಪಿಎಸ್ಐ ಹುದ್ದೆ ನೇಮಕಾತಿಗೆ ಮರು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಕಟಿಸಿದ್ದಾರೆ.
ಈ ಹಿಂದೆ ನಡೆದಿದ್ದ ಪಿಎಸ್ಐ ಪರೀಕ್ಷೆ ಫಲಿತಾಂಶವನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ. 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಶುಕ್ರವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಈ ಮಾಹಿತಿ ನೀಡಿದ್ದಾರೆ. ಅಲ್ಲದೆ ಶೀಘ್ರವೇ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರಿನ ಕೇಂದ್ರದಲ್ಲೂ ಅಕ್ರಮದ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಮರು ಪರೀಕ್ಷೆಗೆ ನಿರ್ಧರಿಸಲಾಗಿದೆ. ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಮರು ಪರೀಕ್ಷೆ ನಡೆಸಲಾಗುವುದು. ಯಾರು ಪಿಎಸ್ಐ ಪರೀಕ್ಷೆ ಬರೆದಿದ್ದಾರೋ ಅವರಿಗೆ ಮರು ಪರೀಕ್ಷೆ ನಡೆಯುತ್ತದೆ. ಆದರೆ, ಆಪಾದಿತರಿಗೆ ಮರು ಪರೀಕ್ಷೆಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಹಣಕ್ಕಾಗಿ ಹುದ್ದೆ ಎಂಬುದನ್ನು ಎಲ್ಲರೂ ಮರೆಯಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಪಿಎಸ್ಐ ಪರೀಕ್ಷೆ ಅಕ್ರಮ ಬೆಂಗಳೂರಿನಲ್ಲೂ ಆಗಿರುವ ಆರೋಪ ಕೇಳಿಬಂದಿದೆ. ಹೀಗಾಗಿ ಕಳೆದ ಬಾರಿ ನಡೆದ ಪರೀಕ್ಷಾ ಕೇಂದ್ರಗಳನ್ನು ಬದಲಾವಣೆ ಮಾಡಲಾಗುವುದು. ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲಾಗುವುದು ಎಂದು ಗೃಹ ಸಚಿವರು ಮಾಹಿತಿ ನೀಡಿದರು.
ಗುರುವಾರ ರಾತ್ರಿ ಪೂನಾದಲ್ಲಿ ದಿವ್ಯಾ ಹಾಗರಗಿ ಅವರನ್ನ ಬಂಧಿಸಿ ಪೊಲೀಸರು ಕಲಬುರಗಿಗೆ ಕರೆತರುತ್ತಿದ್ದಾರೆ. ಕಷ್ಟಪಟ್ಟು ಓದಿದವರ ಬಾಯಿಗೆ ಇವರು ಮಣ್ಣು ಹಾಕಿದ್ದಾರೆ. ಹಲವು ವರ್ಷಗಳಿಂದ ಈ ರೀತಿಯ ಅಕ್ರಮ ನಡೆಯುತ್ತಿದೆ. ಮುಂದೆ ಯಾವ ರೀತಿ ಪರೀಕ್ಷೆ ನಡೆಸಬೇಕೆಂಬ ಬಗ್ಗೆಯೂ ಚಿಂತನೆ ನಡೆಯುತ್ತಿದೆ. ಕಷ್ಟಪಟ್ಟು ಓದಿದವರಿಗೆ ಯಾವುದೇ ಕಾರಣಕ್ಕೂ ವಂಚನೆ ಆಗಬಾರದರು. ಈ ಹಗರಣದಲ್ಲಿ ಎಷ್ಟು ಪ್ರಭಾವಿಗಳಿದ್ದರೂ ಹಸ್ತಕ್ಷೇಪ ಮಾಡಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ನಿಮ್ಮ ಕಾಮೆಂಟ್ ಬರೆಯಿರಿ