ದೆಹಲಿಯಿಂದ ಸೂಚನೆ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ದೆಹಲಿಗೆ ಹೋದ ನಂತರ ತಿಳಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಹಾಗಾಗಿ ಹೈಕಮಾಂಡ್ ಸಂದೇಶ ಬಂದ ನಂತರವೇ ಮಂತ್ರಿ ಮಂಡಳದ ವಿಸ್ತರಣೆ ಕುರಿತು ಚಿಂತನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಆರ್.ಟಿ.ನಗರದಲ್ಲಿರುವ ತಮ್ಮ ಖಾಸಗಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಿತ್ ಶಾ ರಾಜ್ಯ ಭೇಟಿ ವೇಳೆ ಸಂಪುಟ ವಿಸ್ತರಣೆ ವಿಷಯ ಪ್ರಸ್ತಾಪವಾಯಿತು. ಆದರೆ ವಿಸ್ತೃತವಾದ ಚರ್ಚೆ ನಡೆಯಲಿಲ್ಲ ಎಂದು ತಿಳಿಸಿದರು.
ದೆಹಲಿಗೆ ತೆರಳಿದ ನಂತರ ಈ ಬಗ್ಗೆ ಚರ್ಚೆ ಮಾಡಲಾಗುತ್ತದೆ, ನಂತರ ನಿಮಗೆ ಈ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಅಮಿತ್ ಶಾ ಹೇಳಿದ್ದಾರೆ. ಆದರೆ ಉಪ ಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ತಿಳಿಸಿದರು.

ಬಜೆಟ್ ಅನುಷ್ಠಾನ ತಕ್ಷಣವೇ ಆಗಬೇಕು. ಇದಕ್ಕಾಗಿ ಆಯಾ ಇಲಾಖೆಯ ಪ್ರಸ್ತಾವನೆ ತೆಗೆದುಕೊಂಡು ಹಣಕಾಸು ಇಲಾಖೆಯ ಅನುಮೋದನೆ ಪಡೆದು ಆದೇಶ ಮಾಡುವುದು ಮೊದಲನೇ ಹಂತ. ಅದು ಬಹುತೇಕ ಮುಗಿದಿದೆ. ಕೆಲವು ಕಾನೂನು ಮತ್ತು ತಾಂತ್ರಿಕ ಕಾರಣಕ್ಕೆ ಶೇಕಡಾ 20ರಷ್ಟು ಅನುಮೋದನೆ ಆಗಬೇಕಿದೆ. ಅದನ್ನು ಸಹ ತಕ್ಷಣವೇ ಮಾಡಲಾಗುತ್ತದೆ ಎಂದು ತಿಳಿಸಿದರು.
ಈಗ ಅನುಮೋದನೆ ಸಿಕ್ಕಿರುವ ಪ್ರಸ್ತಾವನೆಗಳ ಅನುಷ್ಠಾನಕ್ಕೆ ಕಾಲಮಿತಿ ನಿಗದಿ ಮಾಡಬೇಕಾಗಿದ್ದು, ಪ್ರಮುಖ ಇಲಾಖೆಗಳಿಂದ ಪ್ರಾರಂಭ ಮಾಡಿ ಎಲ್ಲಾ ಇಲಾಖೆಗಳಲ್ಲಿ ಅನುಷ್ಠಾನಕ್ಕೆ ಕಾಲಮಿತಿ ನಿಗದಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.

ಪ್ರಮುಖ ಸುದ್ದಿ :-   ಇನ್ಮುಂದೆ ಎಸ್ ​ಎಸ್ಎ ಲ್ ​ಸಿಗೆ ಗ್ರೇಸ್ ಮಾರ್ಕ್ಸ್ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ

ಈ ಸಭೆಗಳು ಒಂದು ವಾರದ ಹಿಂದೆಯೇ ತೀರ್ಮಾನವಾಗಿತ್ತು. ಅದರಂತೆ ಪ್ರಮುಖ ಇಲಾಖೆಗಳ ಬಜೆಟ್ ಅನ್ನು ಅನುಷ್ಠಾನಕ್ಕೆ ತರಲು ಇಂದಿನ ಸಭೆಯಲ್ಲಿ 1 ವರ್ಷದ ಕ್ಯಾಲೆಂಡರ್​​ಗಳನ್ನು ನಿಗದಿಪಡಿಸಲಾಗುತ್ತದೆ ಎಂದರು.
ಜಿಲ್ಲಾಧಿಕಾರಿಗಳು, ಸಿಇಒಗಳ ಜೊತೆ ಸಭೆ: ಮುಂದಿನವಾರ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮಾಡಲು ನಿರ್ಧರಿಸಲಾಗಿದೆ. ಜಿಲ್ಲಾಧಿಕಾರಿಗಳ ಜೊತೆ ಒಂದು ದಿನ, ಸಿಇಒಗಳ ಮತ್ತೊಂದು ದಿನ ಪ್ರತ್ಯೇಕವಾಗಿ ಚರ್ಚೆ ನಡೆಸಲಾಗುತ್ತದೆ. ವಿವಿಧ ಇಲಾಖೆಗಳ ಕಾರ್ಯಕ್ರಮ, ಅಭಿವೃದ್ಧಿ ಕೆಲಸಗಳು ಮತ್ತು ಫಲಾನುಭವಿಗಳ ಆಯ್ಕೆ, ಅಲ್ಲಿರುವ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿ ಜಿಲ್ಲಾಮಟ್ಟದ ಆಡಳಿತಕ್ಕೆ ಚುರುಕು ಮುಟ್ಟಿಸುವ ಕೆಲಸ ಮಾಡಲಾಗುತ್ತದೆ ಎಂದು ಹೇಳಿದರು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement