ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ವೀರೇಂದ್ರ ಹೆಗ್ಗಡೆ ವಿರುದ್ಧ ಅಪಪ್ರಚಾರ ಮಾಡುತ್ತಿದ್ದ ಕೆ. ಸೋಮನಾಥ ನಾಯಕ್ಗೆ ( ಹೈಕೋರ್ಟ್ ಜೈಲು ಶಿಕ್ಷೆ ಖಾಯಂಗೊಳಿಸಿದೆ.
ಬೆಳ್ತಂಗಡಿ ಸಿವಿಲ್ ನ್ಯಾಯಾಲಯದ ಪ್ರತಿಬಂಧಕಾಜ್ಞೆಯನ್ನು ಉಲ್ಲಂಘಿಸಿ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದ ಗುರುವಾಯನಕೆರೆಯ ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಸೋಮನಾಥ ನಾಯಕ್, ತನಗೆ ಬೆಳ್ತಂಗಡಿ ನ್ಯಾಯಾಲಯ ವಿಧಿಸಿದ ಜೈಲು ಶಿಕ್ಷೆ, ಆಸ್ತಿ ಮುಟ್ಟುಗೋಲು ಹಾಗೂ ದಂಡನೆಯನ್ನು ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಉಚ್ಚ ನ್ಯಾಯಾಲಯಕ್ಕೆ ರಿಟ್ ಅರ್ಜಿ ಸಲ್ಲಿಸಿದ್ದರು.
ಎರಡೂ ಕಡೆಯ ವಾದ ಆಲಿಸಿದ ಉಚ್ಚ ನ್ಯಾಯಾಲಯವು ಮೇ 05 ರಂದು ತನ್ನ 148 ಪುಟಗಳ ಸುದೀರ್ಘ ತೀರ್ಪು ಪ್ರಕಟಿಸಿದ್ದು, ಬೆಳ್ತಂಗಡಿ ಸಿವಿಲ್ ನ್ಯಾಯಾಲಯಗಳ ಆದೇಶವನ್ನು ಎತ್ತಿ ಹಿಡಿದಿದೆ ಹಾಗೂ ಸೋಮನಾಥ ನಾಯಕ್ರ ರಿಟ್ ಅರ್ಜಿಯನ್ನು ವಜಾಗೊಳಿಸಿದೆ. ಸೋಮನಾಥ ನಾಯಕ್, ವೀರೇಂದ್ರ ಹೆಗ್ಗಡೆಯವರ ವಿರುದ್ಧ ನ್ಯಾಯಾಲಯದ ಪ್ರತಿಬಂಧಕಾಜ್ಞೆ ಸಹ ಉಲ್ಲಂಘಿಸಿ ಸುಳ್ಳು ಆರೋಪ ಮಾಡಿರುವುದು ಸಾಬೀತಾಗಿದೆ ಎಂದು ಕೋರ್ಟ್ ಹೇಳಿದೆ.
ಹೆಗ್ಗಡೆಯವರು ಮಿತಿಗಿಂತ ಜಾಸ್ತಿ ಸ್ಥಿರಾಸ್ತಿ ಹೊಂದಿದ್ದಾರೆ ಎಂಬುವುದಾಗಿ ಮಾಡುತ್ತಿರುವ ಆರೋಪಗಳು ಸುಳ್ಳು ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ. ಈ ಪ್ರಕರಣದ ದಾಖಲೆಗಳನ್ನು ಪರಾಮರ್ಶಿಸುವಾಗ ಹೆಗ್ಗಡೆಯವರು ಮತ್ತವರ ಕುಟುಂಬದವರು ತಮ್ಮ ಬಹಳಷ್ಟು ಆಸ್ತಿಗಳನ್ನು ಸಾಗುವಳಿದಾರರಿಗೆ ಬಿಟ್ಟುಕೊಟ್ಟಿರುವುದು ಕಂಡುಬಂದಿದೆ ಎಂದು ಕೋರ್ಟ್ ಹೇಳಿದೆ.
ಸೋಮನಾಥ ನಾಯಕ್ ನ್ಯಾಯಾಲಯದ ಪ್ರತಿಬಂಧಕಾಜ್ಞೆಯನ್ನೂ ಸಹ ಉಲ್ಲಂಘಿಸಿ ಆರೋಪಗಳನ್ನು ಸಾರ್ವಜನಿಕ ಮಾಧ್ಯಮ ಹಾಗು ಜಾಲತಾಣಗಳಲ್ಲಿ ಮಾಡುತ್ತಿರುವುದು ಕ್ಷಮಾರ್ಹವಲ್ಲ. ಹೆಗ್ಗಡೆಯವರು ಹಾಗು ಅವರ ಕುಟುಂಬದವರ ವಿರುದ್ಧ ಆರೋಪ ಮಾಡುವುದರ ಹೊರತು ಸಮಾಜಕ್ಕೆ ತನ್ನ ಕೊಡುಗೆ ಏನು ಎಂಬುವುದನ್ನು ನ್ಯಾಯಾಲಯಕ್ಕೆ ತಿಳಿಸುವಲ್ಲಿ ಸಹ ಸೋಮನಾಥ ನಾಯಕ್ ವಿಫಲವಾಗಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.
ನಿಮ್ಮ ಕಾಮೆಂಟ್ ಬರೆಯಿರಿ