ಜಿಪಂ, ತಾಪಂ ಚುನಾವಣೆ ಮುಹೂರ್ತ ಫಿಕ್ಸ್‌ : 3 ತಿಂಗಳಲ್ಲಿ ಪುನರ್‌ವಿಂಗಡಣೆ, ಮೀಸಲು ನಿರ್ಧರಿಸಲು ಹೈಕೋರ್ಟ್‌ ನಿರ್ದೇಶನ

ಬೆಂಗಳೂರು: ರಾಜ್ಯದಲ್ಲಿ ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ ಚುನಾವಣೆಗೆ ಸಂಬಂಧಿಸಿದಂತೆ ಕ್ಷೇತ್ರ ಪುನರ್‌ ವಿಂಗಡಣೆ ಮತ್ತು ಹಿಂದುಳಿದ ವರ್ಗಗಳು ಸೇರಿದಂತೆ ಎಲ್ಲಾ ವರ್ಗಗಳಿಗೂ ತ್ರಿವಳಿ ಪರೀಕ್ಷೆಯ ಅನ್ವಯ ಮೂರು ತಿಂಗಳ ಒಳಗೆ ಮೀಸಲಾತಿ ನಿಗದಿಪಡಿಸುವಂತೆ ಮಂಗಳವಾರ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಗಡುವು ವಿಧಿಸಿದೆ.
ಅದರ ನಂತರ ಒಂದು ವಾರದ ಬಳಿಕ ಚುನಾವಣಾ ಪ್ರಕ್ರಿಯೆ ಆರಂಭಿಸಲು ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ. ರಾಜ್ಯದಲ್ಲಿ ಜಿಪಂ ಮತ್ತು ತಾಪಂ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯಿದೆಗೆ ತಿದ್ದುಪಡಿ ತಂದಿರುವುದಕ್ಕೆ ತಡೆ ನೀಡುವ ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಮತ್ತು ನ್ಯಾಯಮೂರ್ತಿ ಅಶೋಕ್‌ ಎಸ್‌. ಕಿಣಗಿ ಅವರಿದ್ದ ವಿಭಾಗೀಯ ಪೀಠವು ನಡೆಸಿತು ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ.

ವರದಿ ಪ್ರಕಾರ, ಕ್ಷೇತ್ರ ಪುನರ್‌ ವಿಂಗಡಣೆ ಮತ್ತು ಮೀಸಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ ಒಂದು ವಾರದ ಬಳಿಕ ಚುನಾವಣೆ ಪ್ರಕ್ರಿಯೆ ಆರಂಭಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿರುವ ನ್ಯಾಯಾಲಯವು ಯಾವುದೇ ಕಾರಣಕ್ಕೂ ಸಮಯ ವಿಸ್ತರಣೆ ಮಾಡುವುದಿಲ್ಲ ಎಂದು ಸರ್ಕಾರಕ್ಕೆ ಸ್ಪಷ್ಟಪಡಿಸಿದೆ.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪ್ರಕರಣದಲ್ಲಿ ಎಂಟು ವಾರಗಳಲ್ಲಿ ಕ್ಷೇತ್ರ ವಿಂಗಡಣೆ ಮತ್ತು ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸಿ ಅಧಿಸೂಚನೆ ಹೊರಡಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಗಡುವು ವಿಧಿಸಿದೆ.
ಒಂದು ವಾರದ ಬಳಿಕ ಚುನಾವಣೆ ಪ್ರಕ್ರಿಯೆ ಆರಂಭಿಸಲು ಆಯೋಗಕ್ಕೆ ನಿರ್ದೇಶಿಸಿದೆ. ಕ್ಷೇತ್ರ ಪುನರ್‌ ವಿಂಗಡಣೆ ಮತ್ತು ಹಿಂದುಳಿದ ವರ್ಗಗಳೂ ಸೇರಿದಂತೆ ಎಲ್ಲ ವರ್ಗಗಳನ್ನು ಒಳಗೊಂಡ ಮೀಸಲಾತಿ ನಿರ್ಧರಿಸಲು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಚುನಾವಣಾ ಆಯೋಗದ ನಿವೃತ್ತ ಆಯುಕ್ತರನ್ನು ಒಳಗೊಂಡು ಸಮಿತಿಯನ್ನು ರಾಜ್ಯ ಸರ್ಕಾರ ನೇಮಿಸಿದೆ. ಹೀಗಾಗಿ, ಕ್ಷೇತ್ರ ಪುನರ್‌ ವಿಂಗಡಣೆ ಮತ್ತು ಮೀಸಲಾತಿ ನಿಗದಿಪಡಿಸಲು ಮೂರು ತಿಂಗಳು ಕಾಲಾವಕಾಶ ನೀಡಬೇಕು” ಎಂದು ಕೋರಿದರು.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

ಇದಕ್ಕೂ ಮುನ್ನ, “ಕ್ಷೇತ್ರ ಪುನರ್‌ ವಿಂಗಡಣೆ ಮತ್ತು ಹಿಂದುಳಿದ ವರ್ಗಗಳೂ ಸೇರಿದಂತೆ ಎಲ್ಲರಿಗೂ ಮೀಸಲಾತಿ ಕಲ್ಪಿಸಲು ಹತ್ತು ವಾರ ಕಾಲಾವಕಾಶ ನೀಡಬೇಕು. ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ವ್ಯಾಪ್ತಿ ದೊಡ್ಡದಿದೆ. ಮೀಸಲಾತಿ ಕಲ್ಪಿಸುವುದು ದೊಡ್ಡ ಪ್ರಕ್ರಿಯೆ. ಹೀಗಾಗಿ, ಎರಡು ವಾರ ಹೆಚ್ಚುವರಿಯಾಗಿ ನೀಡಬೇಕು. ಹಿಂದುಳಿದ ವರ್ಗಗಳನ್ನು 1995ರಿಂದ ವಿಶ್ಲೇಷಿಸಬೇಕು. ಇದು ಅತ್ಯಂತ ತ್ರಾಸದಾಯಕ ಕೆಲಸ. ಇದಕ್ಕಾಗಿ ನಿರ್ದಿಷ್ಟ ಆಯೋಗವನ್ನು ರಚಿಸಲಾಗಿದೆ. ಆಯೋಗವು ದೊಡ್ಡ ಜವಾಬ್ದಾರಿ ನಿಭಾಯಿಸುತ್ತಿದೆ. 138 ತಾಲ್ಲೂಕು ಪಂಚಾಯಿತಿ ಮತ್ತು 34 ಜಿಲ್ಲಾ ಪಂಚಾಯಿತಿಗಳಿಗೆ ಮೀಸಲಾತಿ ಕಲ್ಪಿಸುವುದು ಕಷ್ಟಕರವಾದ ಕೆಲಸ. ಹೀಗಾಗಿ, ಕಾಲಾವಕಾಶ ಕೋರುತ್ತಿದ್ದೇವೆ” ಎಂದರು.

ಆಗ ಪೀಠವು “ಬಿಬಿಎಂಪಿ ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಎಂಟು ವಾರ ಕಾಲಾವಕಾಶ ನೀಡಿದೆ. ಹತ್ತು ವಾರಗಳು ಏಕೆ? ನಾವು ಎಂಟು ವಾರ ಮಾತ್ರ ಕಾಲಾವಕಾಶ ನೀಡುತ್ತೇವೆ. ಸುಪ್ರೀಂ ಕೋರ್ಟ್‌ ಆದೇಶದಂತೆ ಅದೇ ವೇಳಾಪಟ್ಟಿ ಪಾಲಿಸಿ. ಆಯೋಗಕ್ಕೆ ಹೆಚ್ಚಿನ ಮಾನವ ಸಂಪನ್ಮೂಲ ಕಲ್ಪಿಸಿ” ಎಂದು ಮೌಖಿಕವಾಗಿ ಹೇಳಿತು.

ರಾಜ್ಯ ಚುನಾವಣಾ ಆಯೋಗವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಕೆ ಎನ್‌ ಫಣೀಂದ್ರ ಅವರು “ಮಧ್ಯಪ್ರದೇಶ ಪ್ರಕರಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಸ್ಪಷ್ಟ ನಿರ್ದೇಶನ ನೀಡಿದೆ. ಜಿಪಂ ಮತ್ತು ತಾಪಂ ಚುನಾವಣೆ ನಡೆಸುವುದಕ್ಕೆ ಸಂಬಂಧಿಸಿದಂತೆ ಆಯೋಗ ಎಲ್ಲಾ ಸಿದ್ಧತೆ ಮಾಡಿಕೊಳ್ಳುತ್ತಿರುವಾಗ ರಾಜ್ಯ ಸರ್ಕಾರವು ಕಾಯಿದೆಗೆ ತಿದ್ದುಪಡಿ ತಂದು ಕ್ಷೇತ್ರ ಪುನರ್‌ ವಿಂಗಡಣೆ ಮತ್ತು ಮೀಸಲಾತಿ ಅಧಿಕಾರವನ್ನು ಕಸಿದುಕೊಂಡಿದೆ. ಇದರಿಂದ ಚುನಾವಣೆ ವಿಳಂಬವಾಗಿದೆ. ಹೀಗಾಗಿ, ಸರ್ಕಾರಕ್ಕೆ ಹೆಚ್ಚಿನ ಕಾಲಾವಕಾಶ ನೀಡಬಾರದು ಎಂದು ತಕರಾರು ಎತ್ತಿದರು.

ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

“ಸುರೇಶ್‌ ಮಹಾಜನ್‌ ಮತ್ತು ಮಧ್ಯಪ್ರದೇಶ ರಾಜ್ಯ ಪ್ರಕರಣದಲ್ಲಿ ಕ್ಷೇತ್ರ ಪುನರ್‌ ವಿಂಗಡಣೆ ಮತ್ತು ತ್ರಿವಳಿ ಪರೀಕ್ಷೆ ವಿಧಾನಕ್ಕೆ ಕಾಯದೇ ಚುನಾವಣೆ ನಡೆಸುವಂತೆ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ನಿರ್ದೇಶಿಸಿದೆ. ಐದು ವರ್ಷ ಮೀರಿದ ನಂತರ ಚುನಾವಣೆ ನಡೆಸದೇ ಆಯೋಗ ಸುಮ್ಮನಿರಲಾಗದು. ತಿದ್ದುಪಡಿ ಕಾಯಿದೆಯ ಅನ್ವಯ ಕ್ಷೇತ್ರ ಪುನರ್‌ ವಿಂಗಡಣೆ ಆಗಿಲ್ಲ. ಅಲ್ಲದೇ ಹಿಂದುಳಿದ ವರ್ಗಗಳಿಗೆ ತ್ರಿವಳಿ ಪರೀಕ್ಷೆಯ ಅನ್ವಯ ಮೀಸಲಾತಿ ಪ್ರಕ್ರಿಯೆಯೂ ಮುಗಿದಿಲ್ಲ. ಹೀಗಾಗಿ, ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಚುನಾವಣೆ ನಡೆಸಲು ಅನುಮತಿಸಬೇಕು” ಎಂದು ಕೋರಿದರು.
ರಾಜ್ಯ ಸರ್ಕಾರದ ಕೋರಿಕೆಗೆ ಸಹಮತಿಸಿದ ಆಯೋಗದ ಪರ ವಕೀಲರು “ಇಂದಿನಿಂದ 12 ವಾರಗಳಲ್ಲಿ ಎಲ್ಲಾ ಪ್ರಕ್ರಿಯೆ ಮುಗಿಯಬೇಕು. ಮತ್ತೆ ಕಾಲಾವಕಾಶ ವಿಸ್ತರಿಸಬಾರದು” ಎಂದು ಪೀಠಕ್ಕೆ ಮನವಿ ಮಾಡಿದರು. ಇದನ್ನು ನ್ಯಾಯಾಲಯ ಆದೇಶದಲ್ಲಿ ದಾಖಲಿಸಿಕೊಂಡಿತು. ವಿಚಾರಣೆಯನ್ನು ಮೂರು ತಿಂಗಳ ಕಾಲ ಪೀಠವು ಮುಂದೂಡಿತು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement