ಬೆಂಗಳೂರು: ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೇಂದ್ರದ ಮಾಜಿ ಸಚಿವ ಜೈರಾಂ ರಮೇಶ್ ಆಯ್ಕೆಯಾಗಿದ್ದಾರೆ. ಮೇ 30ರಂದು ಜೈರಾಂ ರಮೇಶ್ ಅವರು ನಾಮಪತ್ರ ಸಲ್ಲಿಸಲಿದ್ದಾರೆ.
ಬೆಂಗಳೂರಿಗೆ ಆಗಮಿಸಿರುವ ಜೈರಾಂ ರಮೇಶ್ ಗುರುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.
ಎಐಸಿಸಿಯಿಂದ ಟಿಕೆಟ್ ಖಚಿತವಾದ ಬಳಿಕ ವರಿಷ್ಠರ ನಿರ್ದೇಶನದ ಮೇರೆಗೆ ಜೈರಾಂ ರಮೇಶ್ ರಾಜ್ಯದ ನಾಯಕರನ್ನು ಭೇಟಿ ಮಾಡಿದ್ದು, ಮೇ 30ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಲಾಗಿದೆ. ಜೈರಾಂ ರಮೇಶ್ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಸೋಮವಾರ ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರ ಸಭೆ ನಡೆಯಲಿದೆ. 68 ರ ಹರೆಯದ ಜೈರಾಂ ರಮೇಶ್ಅವರು ಖ್ಯಾತ ಅರ್ಥಶಾಸ್ತ್ರಜ್ಞರೂ ಹೌದು.
ಕರ್ನಾಟಕ ವಿಧಾನಸಭೆಯ ಚುನಾಯಿತ ಸದಸ್ಯರಿಂದ ರಾಜ್ಯಸಭೆಗೆ ಆಯ್ಕೆಗೊಂಡ ನಾಲ್ಕು ಸದಸ್ಯರುಗಳ ಪೈಕಿ ಮೂವರು ಸದಸ್ಯರುಗಳು ಅಂದರೆ ನಿರ್ಮಲಾ ಸೀತಾರಾಮನ್, ಜೈರಾಮ್ ರಮೇಶ್ ಮತ್ತು ಕೆ.ಸಿ. ರಾಮಮೂರ್ತಿ ಅವರು ಜೂನ್ 30 ರಂದು ನಿವೃತ್ತರಾಗಲಿರುವುದರಿಂದ ಹಾಗೂ 2021ರ ಸೆಪ್ಟೆಂಬರ್ 13ರಂದು ಆಸ್ಕರ್ ಫರ್ನಾಂಡಿಸ್ ಅವರ ನಿಧನದಿಂದ ತೆರವಾಗಿರುವ ಸ್ಥಾನಗಳನ್ನು ತುಂಬಲು ರಾಜ್ಯಸಭೆಗೆ ದ್ವೈವಾರ್ಷಿಕ ಚುನಾವಣೆಯನ್ನು ನಡೆಸಲು ಭಾರತದ ಚುನಾವಣಾ ಆಯೋಗವು ಚುನಾವಣೆಯನ್ನು ಘೋಷಿಸಿ, ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಚುನಾವಣಾ ವೇಳಾಪಟ್ಟಿಯಂತೆ ಮೇ 24ರ ಮಂಗಳವಾರ ಅಧಿಸೂಚನೆಯನ್ನು ಹೊರಡಿಸಿದ್ದು, ಮೇ 31ರ ಮಂಗಳವಾರ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಜೂನ್ 1ರ ಬುಧವಾರ ನಾಮಪತ್ರಗಳನ್ನು ಪರಿಶೀಲಿಸಲಾಗುತ್ತದೆ.
ನಿಮ್ಮ ಕಾಮೆಂಟ್ ಬರೆಯಿರಿ