ರಾಷ್ಟ್ರಕವಿ ಕುವೆಂಪು-ನಾಡಗೀತೆಗೆ ಅಪಮಾನ ಖಂಡಿಸಿ ಕುವೆಂಪು ಪ್ರತಿಷ್ಠಾನಕ್ಕೆ ಸಾಹಿತಿ ಹಂಪನಾ ರಾಜೀನಾಮೆ

ಬೆಂಗಳೂರು: ರಾಜ್ಯದ ನಾಡಗೀತೆಗೆ ಅಪಮಾನವನ್ನುಂಟು ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಸಾಹಿತಿ, ನಾಡೋಜ ಹಂಪ ನಾಗರಾಜಯ್ಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಹಿರಿಯ ಸಾಹಿತಿ ಹಂಪನಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ತಮ್ಮ ರಾಜೀನಾಮೆ ಘೋಷಿಸಿದ್ದು, ‘ಕುವೆಂಪುರವರನ್ನೂ, ಅವರು ಜನಿಸಿದ ಗೌರವಾನ್ವಿತ ದೊಡ್ಡ ಜನಾಂಗವನ್ನೂ ಅವಾಚ್ಯ ಶಬ್ದಗಳಿಂದ ನಿಂದಿಸಿ, ನಮ್ಮ ರಾ‍ಷ್ಟ್ರಗೀತೆಯಾದ ನಾಡಗೀತೆಯನ್ನು ಲೇವಡಿ ಮಾಡಿದ ವ್ಯಕ್ತಿಯ ಮೇಲೆ ಕ್ರಮ ಕೈಗೊಳ್ಳುವ ಬದಲು ಸರ್ಕಾರ ಜವಾಬ್ದಾರಿಯ ಸ್ಥಾನ ನೀಡಿದೆ. ಇದು ಅಪಾಯಕಾರಿಯಾದ ಬೆಳವಣಿಗೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ತಮ್ಮ ಅಮೂಲ್ಯ ಕೃತಿಗಳಿಂದ ಹೊಸಗನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳ ಮೂಲಕ ಭಾರತೀಯ ಸಾಹಿತ್ಯದಲ್ಲಿ ಕನ್ನಡಕ್ಕೂ, ಕರ್ನಾಟಕಕ್ಕೂ ಕುವೆಂಪುರವರು ಗೌರವ ತಂದರು. ಅವರು ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದ ಕನ್ನಡದ ಮೊದಲನೆ ಸಾಹಿತಿ. ಇದನ್ನರಿತು ಸರ್ಕಾರ ‘ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ’ವನ್ನು ಪ್ರಾರಂಭಿಸಿತಲ್ಲದೆ, ಅತ್ಯುನ್ನತ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನಿತ್ತು ಗೌರವಿಸಿತು.

ಆದರೆ ಇಂದು ಕುವೆಂಪು ಅವರನ್ನು ನಿಂದಿಸಿ, ನಮ್ಮ ರಾ‍ಷ್ಟ್ರಗೀತೆಯಾದ ನಾಡಗೀತೆಯನ್ನು ಲೇವಡಿ ಮಾಡಿದ ವ್ಯಕ್ತಿಯ ಮೇಲೆ ಕ್ರಮ ಕೈಗೊಳ್ಳುವ ಬದಲು ಸರ್ಕಾರ ಜವಾಬ್ದಾರಿಯ ಸ್ಥಾನ ನೀಡಿದೆ. ಇದು ಅಪಾಯಕಾರಿಯಾದ ಬೆಳವಣಿಗೆ. ಇದರಿಂದ ‘ಪುಣ್ಯಶ್ಲೋಕದ ಮೇಲೆ ಕೆಟ್ಟ ಮಾತುಗಳ ಮಳೆ ಸುರಿಸಿದರೆ ಅಂಥವರಿಗೆ ಸರ್ಕಾರದ ಸಮಿತಿಗಳಲ್ಲಿ ಸದಸ್ಯರಾಗುವ ಸದವಕಾಶಗಳಿವೆ’ ಎಂಬ ತಪ್ಪು ಸಂದೇಶ ರವಾನೆ ಮಾಡಿದಂತಾಗಿದೆ. ವ್ಯಕ್ತಿಗಳ ತೇಜೋವಧೆ ಮಾಡುವುದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂಬ ನಂಬಿಕೆ ಹುಸಿಯಾಗಿದೆ. ರಾಷ್ಟ್ರಕವಿ ಕುವೆಂಪು ಹಾಗೂ ನಮ್ಮ ಪವಿತ್ರ ನಾಡಗೀತೆ ಅಪಮಾನಿಸುತ್ತಿದ್ದರೂ ನೋಡಿಕೊಂಡು ತೆಪ್ಪಗಿರುವುದು ನನಗೆ ಕಷ್ಟವಾಗಿದೆ. ಸರ್ಕಾರ ಸ್ಥಾಪಿಸಿರುವ ಕುವೆಂಪು ಅಧ್ಯಕ್ಷ ಸ್ಥಾನಕ್ಕೂ ಸದಸ್ಯತ್ವಕ್ಕೂ ನನ್ನ ರಾಜೀನಾಮೆಯನ್ನು ಮಾನ್ಯ ಮುಖ್ಯಮಂತ್ರಿಗಳು ಅಂಗೀಕರಿಸಬೇಕೆಂದು ಪ್ರಾರ್ಥಿಸುತ್ತೇನೆ ಎಂದು ಪತ್ರದಲ್ಲಿ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಕುಣಿಗಲ್ : ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement