ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಕಂಪಿಸಿದ ಭೂಮಿ

ಮಡಿಕೇರಿ/ಮಂಗಳೂರು: ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳ ಗಡಿ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಭೂಕಂಪನದ ಅನುಭವವಾಗಿದ್ದು, ದಕ್ಷಿಣ ಕನ್ನಡಕ್ಕೆ ಹೊಂದಿಕೊಂಡಿರುವ ಕೇರಳದ ಕಾಸರಗೋಡು ಜಿಲ್ಲೆಯಲ್ಲಿಯೂ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಹೇಳಲಾಗಿದೆ.
ಈ ಭೂಕಂಪನದಲ್ಲಿ ಯಾರಿಗೂ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಆದರೆ, ಹಲವು ಸೆಕೆಂಡ್ ಗಳಷ್ಟು ಸಮಯ ಕಂಪನದ ಅನುಭವವಾಗಿದೆ. ಸುಮಾರು 50 ಕಿ.ಮೀ ಪ್ರದೇಶದವರೆಗೂ ಅನುಭವವಾಗುವ ಸಾಧ್ಯತೆ ಇದೆ. ಆದರೆ, ಈ ಕಂಪನದಿಂದ ಭಯಪಡುವ ಅಗತ್ಯವಿಲ್ಲ. ಹೆಚ್ಚೆಂದರೆ ಮನೆಯಲ್ಲಿರುವ‌ ವಸ್ತುಗಳು ಅಲುಗಾಡಬಹುದು. ಜನತೆ ಗಾಬರಿ ಆಗುವ‌ ಅವಶ್ಯಕತೆಯಿಲ್ಲ ಎಂದು ವಿಪತ್ತು ನಿರ್ವಹಣಾ ಕೇಂದ್ರ ಹೇಳಿದೆ.

ಇದರ ಕೇಂದ್ರ ಬಿಂದು ಕೊಡಗಿನಲ್ಲಿದೆ ಎಂದು ಗೊತ್ತಾಗಿದೆ‌. ಮಡಿಕೇರಿ ತಾಲೂಕಿನ ಚೆಂಬು ಗ್ರಾಮದಿಂದ 5.2 ಕಿ.ಮೀ ವಾಯುವ್ಯ ದಿಕ್ಕಿನಲ್ಲಿ ಭೂಮಿಯ 15 ಕಿ.ಮೀ. ಆಳದಲ್ಲಿ ರಿಕ್ಟರ್ ಮಾಪಕ 3.0ರಷ್ಟು ಭೂಕಂಪನವಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ‌ ಕೇಂದ್ರ ತಿಳಿಸಿದೆ.
ಮಡಿಕೇರಿ, ನಾಪೋಕ್ಲು, ಕುಕ್ಕುಂದ, ಕಾಡು, ಬಲ್ಲಮಾವಟ್ಟಿ. ದಬ್ಬಡ್ಕ, ಪೆರಾಜೆ, ಕರಿಕೆ, ಭಾಗಮಂಡಲ ಸೇರಿದಂತೆ ವಿವಿಧ ಕಡೆ 7.45 ಕ್ಕೆ ಭೂಮಿ ಕಂಪಿಸಿದ ಅನುಭವ ಜನರಿಗೆ ಆಗಿದೆ. ಮನೆಯಲ್ಲಿದ್ದ ಪಾತ್ರೆಗಳು ಅಲುಗಾಡಿವೆ.‌ ಕೊಡಗು ಜಿಲ್ಲೆಯಲ್ಲಿ ಭೂಮಿ ಕಂಪಿಸುತ್ತಿರುವುದು ವಾರದಲ್ಲಿ ಇದು ಮೂರನೆ ಬಾರಿಯಾಗಿದೆ.
ಕೇರಳದ ಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡು ತಾಲೂಕಿನ ಪನತ್ತಡಿ ಕಲ್ಲಪಳ್ಳಿ ಪರಿಸರದಲ್ಲಿ ಇಂದು ಬೆಳಿಗ್ಗೆ ಕಂಪನ ಉಂಟಾಗಿದೆ ಎಂದು ಹೇಳಲಾಗಿದೆ. ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದ್ದು , ಬೆಳಿಗ್ಗೆ 7.45 ರ ಸುಮಾರಿಗೆ ಈ ಘಟನೆ ನಡೆದಿದೆ.

ಪ್ರಮುಖ ಸುದ್ದಿ :-   ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಣೆ ಮಾಡುತ್ತಿದ್ದ 10 ಹಳದಿ ಅನಕೊಂಡ ಹಾವುಗಳು ವಶಕ್ಕೆ, ಓರ್ವನ ಬಂಧನ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement