ನವದೆಹಲಿ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ನಾಳೆ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲಭಗತ್ ಸಿಂಗ್ ಕೋಶಿಯಾರಿ ಅವರು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸರ್ಕಾರಕ್ಕೆ ನಿರ್ದೇಶನ ನೀಡಿದ ಬೆನ್ನಲ್ಲೇ ಆದೇಶವನ್ನು ಪ್ರಶ್ನಿಸಿ ಮಹಾ ವಿಕಾಸ್ ಅಘಾಡಿ (ಎಂವಿಎ)ಯ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದು, ಸಂಜೆ 5 ಗಂಟೆಗೆ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ.
ಆಡಳಿತಾರೂಢ ಮೈತ್ರಿಯ ಶಿವಸೇನಾ ಮುಖ್ಯ ವಿಪ್ ಸುನಿಲ್ ಪ್ರಭು, ಈ ಸಂಬಂಧ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಹಿರಿಯ ನ್ಯಾಯವಾದಿ ಅಭಿಷೇಕ್ ಮನು ಸಿಂಘ್ವಿ ಶಿವಸೇನಾ ಪರ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಫ್ಲೋರ್ ಟೆಸ್ಟ್ ಅಕ್ರಮವಾಗಿದ್ದು, ತುರ್ತಾಗಿ ಅರ್ಜಿ ವಿಚಾರಣೆಯನ್ನು ಇಂದೇ ನಡೆಸಿಕೊಡಬೇಕು ಎಂದು ಸುಪ್ರೀಂ ಕೋರ್ಟ್ ನ್ಯಾಯಪೀಠಕ್ಕೆ ಮನವಿ ಮಾಡಿದರು.
ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಉಲ್ಬಣಗೊಂಡಿದ್ದು, ನಾಳೆ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ (ಎಂವಿಎ)ಗೆ ನಿರ್ಣಾಯಕ ದಿನವಾಗಿ ಪರಿಣಮಿಸಿದೆ. ಬಹುಮತ ಸಾಬೀತುಪಡಿಸಲು ನಾಳೆ ಕಡ್ಡಾಯವಾಗಿ ವಿಶ್ವಾಸ ಮತ ಎದುರಿಸಬೇಕು ಎಂದು ರಾಜ್ಯಪಾಲರು ಆದೇಶಿಸಿದ್ದಾರೆ. ಅಲ್ಲದೆ, ವಿಶೇಷ ಅಧಿವೇಶನಕ್ಕೆ ತಯಾರಿ ನಡೆಸುವಂತೆ ಮಹಾರಾಷ್ಟ್ರ ವಿಧಾನಸಭೆ ಕಾರ್ಯದರ್ಶಿಗೆ ಪತ್ರವನ್ನೂ ಬರೆದಿದ್ದಾರೆ.
ಗುರುವಾರ ಬೆಳಗ್ಗೆ 11 ಗಂಟೆಗೆ ಶಿವಸೇನೆ ನೇತೃತ್ವದ ಸರ್ಕಾರದ ವಿಶ್ವಾಸಮತ ಪರೀಕ್ಷೆ ನಡೆಸುವಂತೆ ರಾಜ್ಯಪಾಲ ಕೊಶ್ಯಾರಿ ಅವರು ಮಹಾರಾಷ್ಟ್ರ ವಿಧಾನಸಭೆ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ಅಲ್ಲದೆ ಇದನ್ನು ವೀಡಿಯೊ ಚಿತ್ರೀಕರಣ ಮಾಡುವಂತೆ ನಿರ್ದೇಶಿಸಿದ್ದಾರೆ.
ಜುಲೈ 11 ರವರೆಗೆ ಪ್ರಕರಣದ ಬಗ್ಗೆ ಯಥಾಸ್ಥಿತಿ ಕಾಪಾಡುವಂತೆ ಸುಪ್ರೀಂ ಕೋರ್ಟ್ ಹೇಳಿದೆ.
ಏತನ್ಮಧ್ಯೆ, ರಾಜ್ಯಪಾಲರ ಪತ್ರದಿಂದ ಉಂಟಾಗುವ ಪರಿಸ್ಥಿತಿಯನ್ನು ಚರ್ಚಿಸಲು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಬುಧವಾರ ಎಂವಿಎ ನಾಯಕರ ಸಭೆಯನ್ನು ಕರೆದಿದ್ದಾರೆ.
ಶಿವಸೇನೆ-ಎನ್ಸಿಪಿ-ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಶ್ವಾಸಮತ ಪರೀಕ್ಷೆಗಾಗಿ ಗುರುವಾರ ಮುಂಬೈ ತಲುಪುವುದಾಗಿ ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಬುಧವಾರ ಹೇಳಿದ್ದಾರೆ.
ಇನ್ನೊಂದೆಡೆ, ಮುಂಬೈನ ಹೋಟೆಲ್ ತಾಜ್ನಲ್ಲಿ ಸೇರುವಂತೆ ಬಿಜೆಪಿ ಶಾಸಕರಿಗೆ ಸೂಚನೆ ನೀಡಲಾಗಿದೆ. ನಾಳೆ ವಿಶ್ವಾಸ ಮತ ಯಾಚನೆ ನಡೆಯವ ಕಾರಣ ಈ ರೀತಿ ಸೂಚನೆಯನ್ನು ವರಿಷ್ಠರು ನೀಡಿರುವುದಾಗಿ ಪಕ್ಷದ ಮೂಲಗಳು ತಿಳಿಸಿವೆ.
ನಿಮ್ಮ ಕಾಮೆಂಟ್ ಬರೆಯಿರಿ