ಹೈಕೋರ್ಟ್‌ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಅಲೋಕ್‌ ಅರಾಧೆ ನೇಮಕ

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಅಲೋಕ್‌ ಅರಾಧೆ ಅವರನ್ನು ಜುಲೈ 3ರಿಂದ ಅನ್ವಯವಾಗುವಂತೆ ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿ ರಾಷ್ಟ್ರಪತಿಗಳು ಆದೇಶ ಮಾಡಿದ್ದಾರೆ.
ಈ ಕುರಿತು ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಅವರು ಗುರುವಾರ ಟ್ವೀಟ್‌ ಮಾಡಿದ್ದಾರೆ.ಹಾಲಿ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಅವರು ಜುಲೈ 2ರಂದು ನಿವೃತ್ತಿ ಹೊಂದಲಿದ್ದಾರೆ. ನ್ಯಾ. ರಿತುರಾಜ್‌ ಅವಸ್ಥಿ ಅವರು 2021ರ ಅಕ್ಟೋಬರ್‌ 11ರಂದು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪದಗ್ರಹಣ ಮಾಡಿದ್ದರು. ಅಲಹಾಬಾದ್‌ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಅವರಿಗೆ ಪದೋನ್ನತಿ ನೀಡಿ ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿತ್ತು.

1964ರ ಏಪ್ರಿಲ್‌ 13ರಂದು ಜನಿಸಿರುವ ನ್ಯಾ. ಅಲೋಕ್‌ ಅರಾಧೆ ಅವರು ಬಿ.ಎಸ್‌ಸಿ ಮತ್ತು ಎಲ್‌ಎಲ್‌ಬಿ ಪದವಿ ಪಡೆದ ಅವರು 1988ರ ಜುಲೈ 12ರಂದು ವಕೀಲರಾಗಿ ನೋಂದಾಯಿಸಿಕೊಂಡರು. 2007ರ ಏಪ್ರಿಲ್‌ನಲ್ಲಿ ಹಿರಿಯ ವಕೀಲರಾಗಿ ಪದೋನ್ನತಿ ಪಡೆದ ನ್ಯಾ. ಅರಾಧೆ ಅವರನ್ನು 2009ರ ಡಿಸೆಂಬರ್‌ 29ರಂದು ಮಧ್ಯಪ್ರದೇಶದ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಯಿತು. 2011ರ ಫೆಬ್ರವರಿ 15ರಂದು ಕಾಯಂಗೊಳಿಸಲಾಯಿತು. 2016ರ ಸೆಪ್ಟೆಂಬರ್‌ 16ರಂದು ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ಗೆ ವರ್ಗಾವಣೆಗೊಂಡಿದ್ದ ನ್ಯಾಯಮೂರ್ತಿ ಅರಾಧೆ ಅವರು 2016ರ ಸೆಪ್ಟೆಂಬರ್‌ 20ರಂದು ಪದಗ್ರಹಣ ಮಾಡಿದ್ದರು. 2018ರ ಮೇ 11ರಂದು ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದ ನ್ಯಾ. ಅರಾಧೆ 2018ರ ಆಗಸ್ಟ್‌ 10ರವರೆಗೆ ಆ ಹುದ್ದೆಯಲ್ಲಿ ಸೇವೆ ಸಲ್ಲಿಸಿದ್ದರು. ಬಳಿಕ ಅಲ್ಲಿಂದ ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆಯಾಗಿ 2018ರ ನವೆಂಬರ್‌ 17ರಂದು ಪದಗ್ರಹಣ ಮಾಡಿದ್ದರು.

ಪ್ರಮುಖ ಸುದ್ದಿ :-   ಏಪ್ರಿಲ್‌ 20ರಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ, ಎರಡು ಚುನಾವಣಾ ಸಮಾವೇಶದಲ್ಲಿ ಭಾಗಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement