ಎಸಿಬಿ ವಿರುದ್ಧ ಟೀಕಾಪ್ರಹಾರ: ವಿಚಾರಣೆ 3 ದಿನ ಮುಂದೂಡಲು ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಬೆಂಗಳೂರು ನಗರ ಜಿಲ್ಲಾಧಿಕಾರಿ ಜಾಮೀನು ಅರ್ಜಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರು, ಕರ್ನಾಟಕದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಎಡಿಜಿಪಿ ವಿರುದ್ಧ ನಡೆಸುತ್ತಿರುವ ವಿಚಾರಣೆಯನ್ನು 3 ದಿನಗಳ ಕಾಲ ಮುಂದೂಡುವಂತೆ ಸುಪ್ರೀಂಕೋರ್ಟ್ ರಾಜ್ಯ ಹೈಕೋರ್ಟ್‍ಗೆ ಸೂಚನೆ ನೀಡಿದೆ.
ಜಾಮೀನು ವಿಷಯದಲ್ಲಿ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಚ್‌ಪಿ ಸಂದೇಶ್ ಅವರು ಜುಲೈ 7 ರಂದು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಎಡಿಜಿಪಿ ಸಲ್ಲಿಸಿದ ಅರ್ಜಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರ ಪೀಠವು ವಿಚಾರಣೆ ನಡೆಸುತ್ತಿದೆ.

ಹೈಕೋರ್ಟ್‌ ಹೇಳಿಕೆಗಳನ್ನು ತಪ್ಪಿಸಬಹುದಿತ್ತು ಎಂದು ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೆಲವು ದಿನಗಳ ಕಾಲ ಹೈಕೋರ್ಟ್‌ನ ವಿಚಾರಣೆಗೆ ತಡೆ ನೀಡುವಂತೆ ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಮಾಡಿದರು.
ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಮಿತ್ ಕುಮಾರ್, “ನನ್ನ ಕಕ್ಷೀದಾರರ ಎಸಿಆರ್‌ಗಳನ್ನು ಮುಕ್ತ ನ್ಯಾಯಾಲಯದಲ್ಲಿ ಓದಲಾಗಿದೆ. ಅವರ ವಾದ ಆಲಿಸದೇ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಆದೇಶಿಸಲಾಗಿದೆ. ಅವರು ಹುದ್ದೆಗೆ ಅರ್ಹರಾಗಿದ್ದಾರೆಯೇ ಎಂದು ಪರಿಗಣಿಸಲು ಸಹ ನಿರ್ದೇಶಿಸಲಾಗಿದೆ” ಎಂದು ಆಕ್ಷೇಪಿಸಿದರು.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

ಈ ಹಂತದಲ್ಲಿ ಮುಖ್ಯ ನ್ಯಾಯಮೂರ್ತಿ ಎನ್‌ ವಿ ರಮಣ ಅವರು “ಜಾಮೀನು ಕೋರಿದ್ದ ಅರ್ಜಿದಾರರ ಕಥೆ ಏನಾಯಿತು? ಆರೋಪಿಯನ್ನು ನೀವು ಪಕ್ಷಕಕಾರನ್ನಾಗಿ ಮಾಡಿದ್ದು ಏಕೆ? ಹೈಕೋರ್ಟ್‌ ರಿಜಿಸ್ಟ್ರಾರ್‌ ಅವರನ್ನು ಪಕ್ಷಕಾರರನ್ನಾಗಿ ಮಾಡಬೇಕಿತ್ತು” ಎಂದು ತಿಳಿಸಿದರು.
ಅಂತಿಮವಾಗಿ ನ್ಯಾಯಾಲಯ “ಪ್ರಕರಣವನ್ನು ಸುಪ್ರೀಂಕೋರ್ಟ್‌ನಲ್ಲಿ ಇಂದಿಗೆ ಪಟ್ಟಿ ಮಾಡಿದ್ದರೂ ಕೂಡ ನ್ಯಾಯಮೂರ್ತಿಗಳು (ನ್ಯಾ ಸಂದೇಶ್‌) ನಾಳೆ ವಿಚಾರಣೆಗೆ ನಿರ್ದೇಶಿಸಿದ್ದು ಕೆಲವು ಮೌಖಿಕ ಆದೇಶಗಳನ್ನು ನೀಡಿದ್ದಾರೆ. ಇದನ್ನು ಪರಿಗಣಿಸಿ 3 ದಿನಗಳ ಕಾಲ ವಿಚಾರಣೆಯನ್ನು ಮುಂದೂಡುವಂತೆ ಕೋರುವುದು ಸೂಕ್ತವೆಂದು ನಾವು ಭಾವಿಸುತ್ತೇವೆ” ಎಂದು ಹೇಳಿತು. ಹೀಗಾಗಿ ಪ್ರಕರಣವನ್ನು ಜುಲೈ 14ರ ಗುರುವಾರಕ್ಕೆ ಮುಂದೂಡಲಾಯಿತು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement