ಬೆಂಗಳೂರು: ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ನೇಮಕಾತಿ ಹಗರಣದಲ್ಲಿ ಬಂಧನಕ್ಕೊಳಗಾಗಿ ಅಮಾನತುಗೊಂಡಿರುವ ಪೊಲೀಸ್ ನೇಮಕಾತಿ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮೃತ್ ಪೌಲ್ ಅವರನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಶುಕ್ರವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಅಮೃತ ಪೌಲ್ ಅವರನ್ನು ಹೆಚ್ಚುವರಿಯಾಗಿ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿ ನೀಡಿದ್ದ ಅವಧಿ ಇಂದು, ಶುಕ್ರವಾರ ಮುಗಿದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಒಂದನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಆನಂದ್ ಟಿ. ಚವ್ಹಾಣ ಅವರ ಮುಂದೆ ಹಾಜರುಪಡಿಸಲಾಗಿತ್ತು.
ಜುಲೈ 4ರಂದು ಬಂಧಿತರಾಗಿದ್ದ ಪೌಲ್ ಅವರನ್ನು ಮೊದಲಿಗೆ 10 ಪೊಲೀಸ್ ವಶಕ್ಕೆ ನೀಡಲಾಗಿತ್ತು. ಜುಲೈ 13ರಂದು ಮತ್ತೆ ಮೂರು ದಿನಗಳ ಕಾಲ ಮ್ಯಾಜಿಸ್ಟ್ರೇಟ್ ಅವರು ಪೌಲ್ರನ್ನು ಪೊಲೀಸ್ ಕಸ್ಟಡಿಗೆ ನೀಡಿದ್ದರು.
ವೈದ್ಯಕೀಯ ಚಿಕಿತ್ಸೆಯಲ್ಲಿರುವುದರಿಂದ ಪೌಲ್ ಅವರಿಗೆ ಸುಳ್ಳು ಪತ್ತೆ ಪರೀಕ್ಷೆ ಬೇಡ ಎಂದು ನ್ಯಾಯಾಲಯವು ಹೇಳಿದೆ.
545 ಪಿಎಸ್ಐ ಹುದ್ದೆ ನೇಮಕಾತಿಗೆ ನಡೆದ ಪರೀಕ್ಷೆಯನ್ನು 54,287 ಅಭ್ಯರ್ಥಿಗಳು ಎದುರಿಸಿದ್ದರು. ಈ ಹರಣಕ್ಕೆ ಸಂಬಂಧಿಸಿದಂತೆ ಸಿಐಡಿಯು 50ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ