ನವದೆಹಲಿ: ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ಎಚ್ ಪಿ ಸಂದೇಶ್ ಅವರು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮತ್ತು ಅದರ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಸೀಮಂತ್ ಕುಮಾರ್ ಸಿಂಗ್ ಅವರ ವಿರುದ್ಧ ಜುಲೈ 7ರ ಆದೇಶದಲ್ಲಿ ಮಾಡಿದ್ದ ಅವಲೋಕನಗಳಿಗೆ ಹಾಗೂ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.
ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಮತ್ತು ಐಎಎಸ್ ಅಧಿಕಾರಿ ಜೆ ಮಂಜುನಾಥ್ ಅವರು ಪ್ರತ್ಯೇಕವಾಗಿ ಸಲ್ಲಿಸಿದ್ದ ವಿಶೇಷ ಮನವಿಗಳ ವಿಚಾರಣೆಯನ್ನು ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ, ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರ ನೇತೃತ್ವದ ತ್ರಿಸದಸ್ಯ ಪೀಠವು ತಡೆ ನೀಡಿದೆ.
ತಮ್ಮ ಮುಂದಿರುವ ಜಾಮೀನು ಮನವಿಯನ್ನು ನಿರ್ಧರಿಸುವಂತೆ ನ್ಯಾಯಮೂರ್ತಿ ಎಚ್ ಪಿ ಸಂದೇಶ್ ಅವರಿಗೆ ಸುಪ್ರೀಂ ಕೋರ್ಟ್ ಆದೇಶ ಮಾಡಿದ್ದು, ಹೈಕೋರ್ಟ್ ನಿರ್ದೇಶನ ಮತ್ತು ಅಭಿಪ್ರಾಯಗಳು ಜಾಮೀನು ಅರ್ಜಿ ಪ್ರಕರಣಕ್ಕೆ ಸಂಬಂಧಪಟ್ಟಿಲ್ಲ ಎಂದು ಹೇಳಿದೆ.
ಸೀಮಂತ್ ಕುಮಾರ್ ಅವರ ಸೇವಾ ದಾಖಲೆ ಕೇಳಿರುವುದು, ಎಸಿಬಿ ಸಲ್ಲಿಸಿರುವ ಬಿ ರಿಪೋರ್ಟ್ಗಳ ವರದಿ, ಎಸಿಬಿ ಇತ್ಯಾದಿಯ ವಿರುದ್ಧ ಹೈಕೋರ್ಟ್ ವ್ಯಕ್ತಪಡಿಸಿರುವ ಅವಲೋಕನಗಳಿಗೆ ತಡೆ ಸುಪ್ರಿಂಕೋರ್ಟ್ ಪೀಠ ತಡೆ ನೀಡಿದೆ. ಜಾಮೀನು ಅರ್ಜಿಗೂ ಹೈಕೋರ್ಟ್ ವ್ಯಕ್ತಪಡಿಸಿರುವ ಅಭಿಪ್ರಾಯಗಳಿಗೂ ಮೇಲ್ನೋಟಕ್ಕೆ ಯಾವುದೇ ಸಂಬಂಧವಿಲ್ಲ. ಜಾಮೀನು ಮನವಿ ಹಾಗೂ ಎಸಿಬಿ ಅಧಿಕಾರಿಯ ನಡತೆಗೆ ಸಂಬಂಧವಿಲ್ಲ. ಹೈಕೋರ್ಟ್ ಜಾಮೀನು ಮನವಿ ನಿರ್ಧರಿಸಬೇಕು” ಎಂದು ಸರ್ವೋಚ್ಚ ನ್ಯಾಯಾಲಯ ಆದೇಶದಲ್ಲಿ ಸೂಚಿಸಿದೆ.
‘ಎಸಿಬಿ ಕುರಿತ ಅಭಿಪ್ರಾಯಗಳು, ಎಸಿಬಿ ಮುಖ್ಯಸ್ಥ ಗೋಪ್ಯ ಸೇವಾ ವರದಿ, ಬಿ ಸಾರಾಂಶ ವರದಿ ಕೇಳಿರುವುದಕ್ಕೆ ಪೀಠವು ತಡೆಯಾಜ್ಞೆ ನೀಡುತ್ತಿದೆ. ಜಾಮೀನು ಅರ್ಜಿ ಪ್ರಕರಣದ ವ್ಯಾಪ್ತಿಯಲ್ಲೇ ಅಭಿಪ್ರಾಯಗಳನ್ನು ನೀಡಿಲ್ಲ. ನ್ಯಾಯಮೂರ್ತಿಯವರು ಜಾಮೀನು ಅರ್ಜಿಯ ವಿಚಾರಣೆಯನ್ನು ನಡೆಸಬಹುದು’ ಎಂದು ಪೀಠ ಹೇಳಿತು
ಎಸಿಬಿ ಮತ್ತು ಎಡಿಜಿಪಿ ವಿರುದ್ಧದ ಪ್ರಕ್ರಿಯೆಗೆ ತಡೆ ನೀಡಿರುವ ಸುಪ್ರೀಂ ಕೋರ್ಟ್, ನ್ಯಾ. ಸಂದೇಶ್ ಅವರು ಆಕ್ಷೇಪಾರ್ಹ ಆದೇಶದಲ್ಲಿ ಮಾಡಿರುವ ಹೇಳಿಕೆಗಳನ್ನು ಕೈಬಿಡುವುದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ರಿಜಿಸ್ಟ್ರಾರ್ಗೆ ನೋಟಿಸ್ ಜಾರಿ ಮಾಡಿದೆ.
ಈ ಪ್ರಕರಣವನ್ನು ಹೈಕೋರ್ಟ್ನ ಮತ್ತೊಂದು ಪೀಠಕ್ಕೆ ವರ್ಗಾಯಿಸುವಂತೆ ಕೋರಿದ ಅರ್ಜಿದಾರರ ಕೋರಿಕೆಯನ್ನು ಸರ್ವೋಚ್ಚ ನ್ಯಾಯಾಲಯವು ತಿರಸ್ಕರಿಸಿದೆ. ಕಳೆದ ವಿಚಾರಣೆಯಲ್ಲಿ ಜಾಮೀನು ಮನವಿಯ ವಿಚಾರಣೆಯನ್ನು ಮೂರು ದಿನ ಮುಂದೂಡುವಂತೆ ಸುಪ್ರೀಂ ಕೋರ್ಟ್ಗೆ ಹೈಕೋರ್ಟ್ ನಿರ್ದೇಶಿಸಿತ್ತು.
ಲಂಚ ಪ್ರಕರಣದಲ್ಲಿ ಆರೋಪಿಯಾಗಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯ ಉಪ ತಹಶೀಲ್ದಾರ್ ಪಿ.ಎಸ್. ಮಹೇಶ್ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಚ್.ಪಿ.ಸಂದೇಶ್, ಎಸಿಬಿ ವಿರುದ್ಧ ಕೆಂಡ ಕಾರಿದ್ದರು.
ಭ್ರಷ್ಟಾಚಾರ ನಿಗ್ರಹ ದಳಕ್ಕೆ ಭ್ರಷ್ಟಾಚಾರವೇ ದಂಧೆಯಾಗಿ ಪರಿಣಮಿಸಿದೆ. ಸ್ವಯಂ ಎಸಿಬಿಯೇ ಅತಿದೊಡ್ಡ ಭ್ರಷ್ಟರ ಕೂಪವಾಗಿದೆ. ಇದರ ಮುಖ್ಯಸ್ಥ ಎಡಿಜಿಪಿಯೇ ಕಳಂಕಿತ ಅಧಿಕಾರಿ. ದೊಡ್ಡ ದೊಡ್ಡ ಐಎಎಸ್, ಐಪಿಎಸ್ ಅಧಿಕಾರಿಗಳನ್ನ ಹಿಡಿಯೋದು ಬಿಟ್ಟು ಬಾಲಂಗೋಚಿಗಳನ್ನು ಹಿಡಿದುಕೊಂಡು ಕೋರ್ಟಿಗೆ ಬರುತ್ತೀರಿ’ ಎಂದು ನ್ಯಾಯಮೂರ್ತಿ ತರಾಟೆಗೆ ತೆಗೆದುಕೊಂಡಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ