ಪುತ್ತೂರು: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರ(32) ಅವರನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದ ಘಟನೆಗೆ ಸಂಬಂಧಿಸಿದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಹಿಂದು ಸಂಘಟನೆಗಳು ಬುಧವಾರ ಸುಳ್ಯ, ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಸ್ವಯಂ ಪ್ರೇರಿತ ಬಂದ್ ನಡೆಸುವಂತೆ ಕರೆ ನೀಡಿವೆ.
ಪುತ್ತೂರು, ಬೆಳ್ಳಾರೆ, ಸುಳ್ಯ ಭಾಗದಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದ್ದು, ಪ್ರವೀಣ ಅವರ ಮೃತ ದೇಹವನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಯಿಂದ ಬೆಳ್ಳಾರೆ ವರೆಗೆ ಮೆರವಣಿಗೆಯಲ್ಲಿ ಕೊಂಡೊಯ್ಯಲು ಸಂಘಟನೆಗಳು ನಿರ್ಧರಿಸಿವೆ. ಪರಿಸ್ಥಿತಿ ನಿಯಂತ್ರಣದ ದೃಷ್ಟಿಯಿಂದ ಪುತ್ತೂರು, ಸುಳ್ಯ, ಕಡಬ ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಮಂಗಳವಾರ ರಾತ್ರಿ ಪ್ರವೀಣ್ ನೆಟ್ಟಾರ ಅವರ ಮೃತ ಶರೀರವನ್ನು ಪುತ್ತೂರು ಪ್ರಗತಿ ಆಸ್ಪತ್ರೆಯಿಂದ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸುವ ವೇಳೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆಸ್ಪತ್ರೆ ಎದುರು ಪ್ರತಿಭಟನೆ ನಡೆ ಜಿಲ್ಲಾಧಿಕಾರಿಗಳು ಬಾರದೆ ಶವ ಕೊಂಡೊಯ್ಯಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು. ಪ್ರತಿಭಟನಾಕಾರರ ಮನವೊಲಿಸಲು ಯತ್ನ ವಿಫಲವಾದ ನಂತರ
ತಡರಾತ್ರಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪುತ್ತೂರಿಗೆ ಆಗಮಿಸಿ ಮಾತುಕತೆ ನಡೆಸಿದರು. ಹತ್ಯೆ ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಭವಸೆ ನೀಡಿದರು. ಜಿಲ್ಲಾಧಿಕಾರಿಯವರ ಮಾತುಕತೆ ಬಳಿಕ ಪ್ರತಿಭಟನೆ ವಾಪಸ್ ಪಡೆಯಲಾಯಿತು ಹಾಗೂ ಶವವನ್ನು ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.
ಇಂದು, ಬುಧವಾರ ಪುತ್ತೂರಿನಿಂದ ಮೆರವಣಿಗೆ ಮೂಲಕ ಶವವನ್ನು ಕೊಂಡೊಯ್ದು ಬೆಳ್ಳಾರೆ ಸಮೀಪದ ನೆಟ್ಟಾರಿನ ಪ್ರವೀಣ ಅವರ ಮನೆಯ ಪರಿಸರದಲ್ಲಿ ಅಂತ್ಯ ಸಂಸ್ಕಾರ ನಡೆಸಲು ಉದ್ದೇಶಿಸಲಾಗಿದೆ. ಪುತ್ತೂರು, ಬೆಳ್ಳಾರೆ, ಸುಳ್ಯದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಬೆಳ್ಳಾರೆಯ ಶಿಕ್ಷಣ ಸಂಸ್ಥೆಗಳು ಮುಂಜಾಗರೂಕತಾ ಕ್ರಮವಾಗಿ ರಜೆ ಘೋಷಿಸಿವೆ. ಪ್ರವೀಣ ಗೌರವಾರ್ಥ ಪುತ್ತೂರಿನ ಅಂಬಿಕಾ ವಿದ್ಯಾ ಸಂಸ್ಥೆ, ವಿವೇಕಾನಂದ ವಿದ್ಯಾಸಂಸ್ಥೆಗಳು ರಜೆ ಘೋಷಿಸಿವೆ. ಈ ಮಧ್ಯೆ ಈ ನಡುವೆ ಸರ್ಕಾರಿ ಬಸ್ ಒಂದಕ್ಕೆ ಪುತ್ತೂರಿನ ಬೊಳುವಾರು ಬಳಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ವರದಿಯಾಗಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಈ ಪುತ್ತೂರ, ಸುಳ್ಯ ಹಾಗೂ ಕಡಬ ತಾಲೂಕುಗಳ ಹಲವೆಡೆ ಬಸ್ ಸಂಚಾರ ಸ್ಥಗಿತಗೊಂಡಿದೆ.
ಸುಳ್ಯ ತಾಲೂಕಿನ ಬೆಳ್ಳಾರೆಯ ನೆಟ್ಟಾರು ನಿವಾಸಿಯಾಗಿರುವ ಪ್ರವೀಣ ಮಂಗಳವಾರ ರಾತ್ರಿ ತನ್ನ ಚಿಕನ್ ಸೆಂಟರ್ ಅನ್ನು ಮುಚ್ಚುವ ತಯಾರಿಯಲ್ಲಿದ್ದಾಗ ಅಲ್ಲಿಗೆ ಬಂದ ದುಷ್ಕರ್ಮಿಗಳು ಬಂದು ಮಾರಕಾಸ್ತ್ರಗಳಿಂದ ಅವರ ಮೇಲೆ ದಾಳಿ ಮಾಡಿದ್ದರು. ನಂತರ ಅವರನ್ನು ಆಸ್ಪತ್ರೆಗೆ ಕೊಂಡೊಯ್ದರೂ ತೀವ್ರ ಗಾಯಗಳಿಂದ ಅವರು ಮೃತಪಟ್ಟಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ