ಪ್ರವೀಣ ನೆಟ್ಟಾರು ಹತ್ಯೆ : ಇಂದು ನಡೆಯಬೇಕಿದ್ದ ರಾಜ್ಯ ಬಿಜೆಪಿ ಸರ್ಕಾರದ ಜನೋತ್ಸವ ಕಾರ್ಯಕ್ರಮ ರದ್ದು

ಬೆಂಗಳೂರು: ‘ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ
ದೊಡ್ಡಬಳ್ಳಾಪುರದಲ್ಲಿ ಇಂದು, ಗುರುವಾರ (ಜುಲೈ 28) ಬಿಜೆಪಿ ಹಮ್ಮಿಕೊಂಡಿದ್ದ ಸಾಧನಾ ಸಮಾವೇಶ- ‘ಜನೋತ್ಸವ’ ಕಾರ್ಯಕ್ರಮ ರದ್ದುಪಡಿಸಲಾಗಿದೆ.
ಆರ್‌.ಟಿ. ನಗರದಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ರಾತ್ರಿ 12:30 ಗಂಟೆಗೆ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಯ ಹಿನ್ನೆಲೆಯಲ್ಲಿ ಜನೋತ್ಸವವನ್ನು ರದ್ದುಪಡಿಸಲಾಗಿದೆ. ಪ್ರವೀಣ್ ಅವರ ಹತ್ಯೆ ಸಂದರ್ಭದಲ್ಲಿ ಕಾರ್ಯಕ್ರಮ ಸೂಕ್ತವಲ್ಲ. ಹೀಗಾಗಿ ದೊಡ್ಡಬಳ್ಳಾಪುರದಲ್ಲಿ ಹಾಗೂ ವಿಧಾನಸೌಧದಲ್ಲಿ‌ ಹಮ್ಮಿಕೊಳ್ಳಲಾಗಿದ್ದ ಜನೋತ್ಸವ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದರು.

ಜನಪರವಾದ ಕಾರ್ಯಕ್ರಮಗಳನ್ನು ಮುಂದುವರಿಸುತ್ತೇವೆ. ದೊಡ್ಡಬಳ್ಳಾಪುರ ಹಾಗೂ ವಿಧಾನಸೌಧದಲ್ಲಿ ಇಂದು, ಗುರುವಾರ ನಡೆಯುವ ಎಲ್ಲ ಕಾರ್ಯಕ್ರಮಗಳು ರದ್ದಾಗಿವೆ. ಆದರೆ, ಜನಪರ ಕಾರ್ಯಕ್ರಮ-ಯೋಜನೆಗಳನ್ನು ಮಾಧ್ಯಮದವರ ಮೂಲಕ ಪ್ರಕಟಿಸುತ್ತೇವೆ ಎಂದು ಅವರು ಹೇಳಿದರು.
ಪ್ರವೀಣ ಹತ್ಯೆ ಹಾಗೂ ನಮ್ಮ ಪಕ್ಷದ ಯುವಕರ ಆಕ್ರೋಶವನ್ನೂ ಗಮನಿಸಿದೆ. ನನ್ನ ಮನಸ್ಸಿಗೂ ತುಂಬಾ ನೋವಾಗಿದೆ. .ಹತ್ಯೆಯಾದ ಪ್ರವೀಣಅವರ ತಾಯಿಯ ಆಕ್ರಂದನ ನೋಡಿದ ಬಳಿಕ ಕಾರ್ಯಕ್ರಮ ರದ್ದುಪಡಿಸಲು ತೀರ್ಮಾನಿಸಿದೆ ಎಂದು ಮಾಹಿತಿ ನೀಡಿದರು.
ಜನೋತ್ಸವ ಮಾಡಲು ನನ್ನ ಮನಃಸಾಕ್ಷಿ ಒಪ್ಪಲಿಲ್ಲ. ಹಾಗಾಗಿ ಮುಂದೂಡಲು ತೀರ್ಮಾನಿಸಿದೆ. ನಮ್ಮ ಪಕ್ಷದ ಅಧ್ಯಕ್ಷರಾದ ಜೆ.ಪಿ. ನಡ್ಡಾ ಸೇರಿದಂತೆ ಪ್ರಮುಖರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆಎಂದು ತಿಳಿಸಿದರು.
ಜನೋತ್ಸವ ನಡೆಸುವ ಮೂಲಕ ನಮ್ಮ ಸರ್ಕಾರ ಜನಪರವಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದನ್ನು, ಮುಂದಿನ ಯೋಜನೆಗಳನ್ನು ಘೋಷಿಸಬೇಕು ಎಂದು ನಿಶ್ಚಯಿಸಿದ್ದೆವು. ನಮ್ಮ ಪಕ್ಷದ ಅಮಾಯಕ ಹಾಗೂ ನಿಷ್ಠಾವಂತ ಕಾರ್ಯಕರ್ತ ಪ್ರವೀಣರ ಹತ್ಯೆಯ ನೋವು ನಮ್ಮೆಲ್ಲರನ್ನೂ ಬಾಧಿಸಿದೆ ಎಂದರು.
ಪ್ರವೀಣ ಹತ್ಯೆಯ ಆರೋಪಿಗಳನ್ನು ಸದೆಬಡಿಯಲು ಸರ್ಕಾರ ಬದ್ಧ. ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಇಂಥ ಕೃತ್ಯದಲ್ಲಿ ಭಾಗಿಯಾದ ಸಂಘಟನೆಗಳನ್ನು ನಾಶ ಮಾಡಲು, ಈಗ ಇರುವ ವ್ಯವಸ್ಥೆಯ ಹೊರತಾಗಿ ವಿಶೇಷವಾದ ಭಯೋತ್ಪಾದನಾ ನಿಗ್ರಹ ಕಮಂಡೋವನ್ನು ರಚಿಸಲು ನಾವು ಉದ್ದೇಶಿಸಿದ್ದೇವೆ ಎಂದರು.

ಪ್ರಮುಖ ಸುದ್ದಿ :-   ಶ್ರೀರಂಗಪಟ್ಟಣ: ಐಸ್‌ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳ ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement