ನವದೆಹಲಿ : ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ಇತರ ನಾಲ್ವರು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಸಿದ ದೆಹಲಿಯ ಇ.ಡಿ. ನ್ಯಾಯಾಲಯ ತನ್ನ ಆದೇಶವನ್ನು ಕಾಯ್ದಿರಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ವಾದ -ಪ್ರತಿವಾದ ಅಲಿಸಿರುವ ನ್ಯಾಯಪೀಠ ಆಗಸ್ಟ್ 2ರ ವರೆಗೆ ಆದೇಶ ಕಾಯ್ದಿರಿಸಿದೆ. ಆಗಸ್ಟ್ 2ರಂದು ಮಧ್ಯಾಹ್ಬ 3ಕ್ಕೆ ಆದೇಶ ಪ್ರಕಟವಾಗಲಿದ್ದು, ಎಲ್ಲಾ ಆರೋಪಿಗಳು ಕೋರ್ಟ್ಗೆ ಹಾಜರಾಗುವಂತೆ ಸೂಚಿಸಿದೆ.
ಪ್ರಕರಣದ ತನಿಖೆ ನಡೆಸಿದ್ದ ಇ.ಡಿ ನ್ಯಾಯಾಲಯಕ್ಕೆ ಜಾರ್ಜ್ಶೀಟ್ ಸಲ್ಲಿಸಿತ್ತು. ಈ ಹಿನ್ನೆಲೆ ಡಿ.ಕೆ.ಶಿವಕುಮಾರ ತಮ್ಮ ಮಧ್ಯಂತರ ಜಾಮೀನನ್ನು ಸಾಮಾನ್ಯ ಜಾಮೀನಿಗೆ ಪರಿಗಣಿಸಲು ಮನವಿ ಮಾಡಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ವಿಕಾಸ್ ದುಲ್ ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಜಾಮೀನು ನೀಡದಂತೆ ಇಡಿ ಪರ ವಕೀಲರು ಮನವಿ ಮಾಡಿದ್ದರು. ಇದಕ್ಕೆ ಪ್ರತಿವಾದ ಮಂಡಿಸಿದ ಡಿ.ಕೆ.ಶಿವಕುಮಾರ್ ಪರ ವಕೀಲರು, ಮಧ್ಯಂತರ ಜಾಮೀನನ್ನು ಸಾಮಾನ್ಯ ಜಾಮೀನಿಗೆ ಪರಿಗಣಿಸುವಂತೆ ಎಂದು ಕೋರಿದ್ದರು.
ಇತರೆ ನಾಲ್ಕು ಆರೋಪಿಗಳ ಪರವಾಗಿ ವಾದ ಮಂಡಿಸಿದ ವಕೀಲರು ಇ.ಡಿ ಜಾಮೀನು ನೀಡಲು ವಿರೋಧಿಸುವುದಕ್ಕೆ ಅರ್ಥವಿಲ್ಲ. ಎಲ್ಲ ಅಂಶಗಳು ಮೇಲ್ಮಟ್ಟದ ನ್ಯಾಯಾಲಯಗಳಲ್ಲಿ ಚರ್ಚೆಯಾಗಿದೆ. ಹಲವು ಪ್ರಕರಣಗಳಲ್ಲಿ ಆರೋಪಿಗಳಿಗೆ ಜಾಮೀನು ಸಿಕ್ಕಿದ ಉದಾಹರಣೆಗಳಿವೆ. ಇ.ಡಿ ಜಾರ್ಜ್ಶೀಟ್ ಸಲ್ಲಿಕೆಯಾಗಿದೆ. ಇ.ಡಿ ತನಿಖೆಯ ವೇಳೆ ಆರೋಪಿಗಳನ್ನು ಬಂಧಿಸಿಲ್ಲ. ಹೀಗಾಗಿ ಜಾರ್ಜ್ಶೀಟ್ ಸಲ್ಲಿಕೆ ಬಳಿಕ ಜಾಮೀನು ಪಡೆಯಲು ವಿರೋಧಿಸುವಂತಿಲ್ಲ ಎಂದು ಹೇಳಿದ್ದರು. ವಾದ-ಪ್ರತಿವಾದ ಆಲಿಸಿದ ಬಳಿಕ ಅಗಸ್ಟ್ 2, ಮಧ್ಯಾಹ್ನ ಮೂರು ಗಂಟೆಗೆ ಆದೇಶ ಕಾಯ್ದಿರಿಸಲಾಯಿತು.
ಶಿವಕುಮಾರ್, ಅವರ ನಿಕಟವರ್ತಿಗಳಾದ ಉದ್ಯಮಿ ಸಚಿನ್ ನಾರಾಯಣ, ಶರ್ಮಾ ಟ್ರಾನ್ಸ್ಪೋರ್ಟ್ ಮಾಲೀಕ ಸುನೀಲಕುಮಾರ್ ಶರ್ಮಾ, ದೆಹಲಿಯ ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರ ಎನ್. ವಿರುದ್ಧ ವಿಚಾರಣೆ ಆರಂಭಿಸುವಂತೆ ಕೋರಿ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರೋಪ ಪಟ್ಟಿ ಸಲ್ಲಿಸಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ