ಬೆಂಗಳೂರು: ಈ ವರ್ಷದ ಗಣೇಶೋತ್ಸವವನ್ನು ಕೋವಿಡ್ ಪೂರ್ವದಲ್ಲಿ ಆಚರಣೆ ಮಾಡುತ್ತಿದ್ದ ರೀತಿಯಲ್ಲಿ ಆಚರಣೆ ಮಾಡಲು ಅನುಮತಿ ನೀಡಲಾಗುವುದು. ಯಾವುದೇ ನಿರ್ಬಂಧಗಳನ್ನು ವಿಧಿಸುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ. ಈ ಮೂಲಕ ಅವರು ರಾಜ್ಯಾದ್ಯಂತ ಸಾರ್ವಜನಿಕ ಗಜಾನನೋತ್ಸವ ಸಮಿತಿಗಳಿ ಸಿಹಿ ಸುದ್ದಿ ನೀಡಿದ್ದಾರೆ.
ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಚರ್ಚೆ ಮಾಡಿದ ನಂತರ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿಸಿದರು.
ಕಳೆದ ಎರಡು ವರ್ಷ ಕೋವಿಡ್ನಿಂದಾಗಿ ಸಾರ್ವಜನಿಕ ಗಣೇಶೋತ್ಸವಗಳ ಮೇಲೆ ನಿರ್ಬಂಧಗಳನ್ನು ಹೇರಲಾಗಿತ್ತು. ಸಾರ್ವಜನಿಕರ ಜೀವಕ್ಕೆ ಅಪಾಯವಾಗದಂತೆ ಕ್ರಮ ಕೈಗೊಳ್ಳುವುದು ಮುಖ್ಯವಾಗಿತ್ತು. ಸರ್ಕಾರದ ಮನವಿಗೆ ಸಾರ್ವಜನಿಕರು ಸ್ಪಂದಿಸಿದ್ದರು. ಈ ಬಾರಿ ಯಾವುದೇ ರೀತಿಯ ಅಡೆತಡೆಗಳಿರುವುದಿಲ್ಲ. ಕೋವಿಡ್ ಪೂರ್ವದಲ್ಲಿ ಹೇಗಿತ್ತೋ ಆ ರೀತಿ ಆಚರಣೆ ನಡೆಸಬಹುದಾಗಿದೆ ಎಂದರು.
ಪರಿಸರ ಸ್ನೇಹಿ ಮಣ್ಣಿನಿಂದ ತಯಾರಿಸಿದ ಗಣಪತಿ ವಿಗ್ರಹಗಳನ್ನು ಮಾತ್ರ ಪ್ರತಿಷ್ಠಾಪಿಸಬೇಕು. ಯಾವುದೇ ಕಾರಣಕ್ಕೂ ಪರಿಸರ ಮಾಲಿನ್ಯಗೊಳಿಸುವ ಪ್ಲಾಸ್ಲರ್ ಆಫ್ ಪ್ಯಾರಿಸ್ ಸೇರಿದಂತೆ ಪರಿಸರಕ್ಕೆ ಹಾನಿಯಾಗುವಂತಹ ಇತರ ವಸ್ತು ಬಳಸಿ ತಯಾರಿಸಿದ ಗಣೇಶ ವಿಗ್ರಹ ಸ್ಥಾಪಿಸುವಂತಿಲ್ಲ ಎಂದು ಅವರು ಹೇಳಿದರು.
ನಿಮ್ಮ ಕಾಮೆಂಟ್ ಬರೆಯಿರಿ