ಗ್ರಾಮ ಒನ್ ಗೆ ಇನ್ನಷ್ಟು ಸೇವೆ ಸೇರ್ಪಡೆ ಮಾಡಿ : ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ಗ್ರಾಮ ಪಂಚಾಯತ ಮಟ್ಟದಲ್ಲಿಯೇ ನಾಗರಿಕ ಸೇವೆಗಳನ್ನು ಒದಗಿಸಲು ಪ್ರಾರಂಭಿಸಲಾಗಿರುವ ಗ್ರಾಮ ಒನ್ ಕೇಂದ್ರಗಳನ್ನು ಬಲಪಡಿಸಲು ಇನ್ನಷ್ಟು ಸೇವೆಗಳನ್ನು ಸೇರ್ಪಡೆಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಇ-ಆಡಳಿತ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಗ್ರಾಮ ಒನ್ ಕೇಂದ್ರಗಳ ಮೂಲಕ ಒದಗಿಸಬಹುದಾದ ಸೇವೆಗಳನ್ನು ಗುರುತಿಸಿ, ಸಂಬಂಧಿಸಿದ ಇಲಾಖೆಗಳೊಂದಿಗೆ ಚರ್ಚಿಸಿ, ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ವಿವಿಧ ಜಿಲ್ಲೆಗಳಿಗೆ ವಿಶಿಷ್ಟ ಸೇವೆಗಳನ್ನು ಆಯಾ ಜಿಲ್ಲೆಗಳಿಗೆ ಸೀಮಿತಗೊಳಿಸಿ ಗ್ರಾಮ ಒನ್ ಕೇಂದ್ರಗಳಲ್ಲಿ ಒದಗಿಸಬೇಕು. ಜೊತೆಗೆ ಮೈಕ್ರೋ ಬ್ಯಾಂಕಿಂಗ್, ಎಲ್ ಪಿ ಜಿ ಬುಕಿಂಗ್ ಮತ್ತಿತರ ಕೆಲವು ಸೇವೆಗಳನ್ನು ಒದಗಿಸಲು ಅವಕಾಶ ಕಲ್ಪಿಸಬಹುದು ಎಂದು ತಿಳಿಸಿದರು.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಈವರೆಗೆ ಒಟ್ಟು 7274 ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, 2022ರ ಜನವರಿಯಲ್ಲಿ 65,520 ವ್ಯವಹಾರ (Transaction) ನಡೆದಿದ್ದು, ಜೂನ್ ತಿಂಗಳಲ್ಲಿ 10,36,542 ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಹೋಬಳಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಟಲ್ ಜನಸ್ನೇಹಿ ಕೇಂದ್ರಗಳ ಸೇವೆಯನ್ನು ಗ್ರಾಮ ಒನ್ ಮೂಲಕವೂ ಒದಗಿಸುವ ಬಗ್ಗೆ ಪ್ರಾಯೋಗಿಕವಾಗಿ ಕೆಲವು ಕೇಂದ್ರಗಳಲ್ಲಿ ಪ್ರಾರಂಭಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಹೊಸ ಡಾಟಾ ಸೆಂಟರ್ ಸ್ಥಾಪನೆಗೆ ಸೂಕ್ತ ಸ್ಥಳ ನಿಗದಿಪಡಿಸುವಂತೆ ಮುಖ್ಯಮಂತ್ರಿಯವರು ಸೂಚಿಸಿದರು. ಜೊತೆಗೆ ಖಾಸಗಿ ಕಂಪೆನಿಗಳೂ ಡಾಟಾ ಸೆಂಟರ್ ಪ್ರಾರಂಭಿಸಲು ಮುಂದೆ ಬರುತ್ತಿದ್ದು, ಸರ್ಕಾರವೂ ಇವುಗಳ ಸೇವೆ ಪಡೆದುಕೊಳ್ಳುವ ಬಗ್ಗೆ ಸೂಕ್ತ ನೀತಿಯನ್ನು ರೂಪಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.
ಕೆ-ಜಿಐಎಸ್ ಅಡಿ ಲಭ್ಯವಿರುವ ಮಾಹಿತಿಗಳನ್ನು ತ್ವರಿತವಾಗಿ ಹಾಗೂ ನಿಖರವಾಗಿ ನಿರ್ಧಾರ ತೆಗೆದುಕೊಳ್ಳಲು ಆಧಾರವಾಗಿ ಬಳಸಿಕೊಳ್ಳಲು ಅವಕಾಶವಿದೆ. ವಿವಿಧ ಇಲಾಖೆಗಳು ಇವುಗಳ ಅನುಕೂಲ ಪಡೆಯಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದರು.
ಪಿಎಂ ಗತಿಶಕ್ತಿ ಯೋಜನೆಯಡಿ ರಾಜ್ಯದಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಡ್ರೋನ್ ಸ್ಕೂಲ್ ಪ್ರಾರಂಭಿಸಲು ಸಿದ್ಧತೆ ನಡೆಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

ಕುಟುಂಬ ತಂತ್ರಾಂಶದ ಮಾಹಿತಿಯನ್ನಾಧರಿಸಿ, ರಾಜ್ಯದಲ್ಲಿ ಹಲವು ಯೋಜನೆಗಳಡಿ ನಾಗರಿಕರು ಅರ್ಜಿ ಸಲ್ಲಿಸದೆಯೇ ವಿವಿಧ ಸವಲತ್ತುಗಳನ್ನು ನೀಡಲಾಗುತ್ತಿದೆ. ಇದೀಗ ಮುಖ್ಯಮಂತ್ರಿಯವರು ಇತ್ತೀಚೆಗೆ ಘೋಷಿಸಿರುವ 75 ಯುನಿಟ್ ಉಚಿತ ವಿದ್ಯುತ್ ನೀಡುವ ಅಮೃತ ಜ್ಯೋತಿ ಯೋಜನೆ, ನೇಕಾರರ ಮಕ್ಕಳ ವಿದ್ಯಾರ್ಥಿ ವೇತನ ಮತ್ತಿತರ ಕಾರ್ಯಕ್ರಮಗಳಿಗೆ ಈ ದತ್ತಾಂಶವನ್ನು ಆಧರಿಸಿ ಫಲಾನುಭವಿಗಳನ್ನು ಗುರುತಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಇ-ಆಡಳಿತ ಉತ್ತಮ ಆಡಳಿತದ ಪ್ರಮುಖ ಸಾಧನ. ಇದನ್ನು ಹೆಚ್ಚಾಗಿ ಬಳಸಿ ಸರ್ಕಾರದ ಸವಲತ್ತುಗಳನ್ನು ಜನರಿಗೆ ಪಾರದರ್ಶಕವಾಗಿ ತಲುಪಿಸಬೇಕು ಎಂದು ಮುಖ್ಯಮಂತ್ರಿಗಳು ಹೇಳಿದರು.
ರಾಜ್ಯದಲ್ಲಿ ಡಿ.ಬಿ.ಟಿ. ವೇದಿಕೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಬಳಸಲಾಗುತ್ತಿದೆ. 2021-22 ರಲ್ಲಿ 1.76 ಕೋಟಿ ಫಲಾನುಭವಿಗಳಿಗೆ ವಿವಿಧ ಯೋಜನೆಗಳಡಿ 3.53 ಕೋಟಿ ವ್ಯವಹಾರ (transaction) ನಡೆದಿದ್ದು, 11,708.75 ಕೋಟಿ ರೂ. ಗಳನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಲಾಗಿದೆ. 2022-23ನೇ ಸಾಲಿನಲ್ಲಿ ಈ ವರೆಗೆ 62.87 ಲಕ್ಷ ಫಲಾನುಭವಿಗಳಿಗೆ 3114.55 ಕೋಟಿ ರೂ. ವರ್ಗಾಯಿಸಲಾಗಿದೆ.
ಡಿಬಿಟಿ ವೇದಿಕೆಯನ್ನು ಇನ್ನಷ್ಟು ಬಲಪಡಿಸಿ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸಾಧ್ಯವಿರುವ ಎಲ್ಲ ಯೋಜನೆಗಳನ್ನು ಡಿಬಿಟಿ ವ್ಯಾಪ್ತಿಗೆ ತರುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಐ.ಎಸ್.ಎನ್. ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್ ಹಾಗೂ ಇ-ಆಡಳಿತ ಇಲಾಖೆ ಕಾರ್ಯದರ್ಶಿ ವಿ.ಪೊನ್ನುರಾಜ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಮುಖ ಸುದ್ದಿ :-   ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement