ಸಿಬಿಐ ದಾಳಿಯ ನಂತರ ಸಿಸೋಡಿಯಾ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ ; 12 ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ದೆಹಲಿ ಲೆಫ್ಟಿನೆಂಟ್‌ ಗವರ್ನರ್‌

ನವದೆಹಲಿ: ದೆಹಲಿ ಅಬಕಾರಿ ನೀತಿಯ ಅನುಷ್ಠಾನದಲ್ಲಿ ಭ್ರಷ್ಟಾಚಾರ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ವಕ್ತಾರ ಶಮಾ ಮೊಹಮ್ಮದ್ ಶನಿವಾರ ಒತ್ತಾಯಿಸಿದ್ದಾರೆ. ಕೇಂದ್ರೀಯ ತನಿಖಾ ದಳ (ಸಿಬಿಐ) ಸಚಿವರ ಮನೆ ಮೇಲೆ ಸುಮಾರು 15 ಗಂಟೆಗಳ ಕಾಲ ದಾಳಿ ನಡೆಸಿದ ಒಂದು ದಿನದ ನಂತರ ಕಾಂಗ್ರೆಸ್‌ ಹೇಳಿಕೆ ಬಂದಿದೆ.
ಕಾಂಗ್ರೆಸ್ ನಾಯಕರಾದ ಅಲ್ಕಾ ಲಂಬಾ ಮತ್ತು ಅಭಿಷೇಕ್ ದತ್ ಕೂಡ ಮನೀಶ್ ಸಿಸೋಡಿಯಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ.
ಇದಕ್ಕೂ ಮೊದಲು, ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅನಿಲಕುಮಾರ್ ಅವರು, ಶೆಲ್ ಕಂಪನಿಗಳಿಗೆ ಮದ್ಯದ ಪರವಾನಗಿಗಳನ್ನು ಅಕ್ರಮವಾಗಿ ವಿತರಿಸುವಲ್ಲಿನ “ಬಹುಕೋಟಿ ಹಗರಣ” ಕುರಿತು ಕಾಂಗ್ರೆಸ್‌ ಪಕ್ಷವು ಜೂನ್‌ನಲ್ಲಿ ಅಂದಿನ ದೆಹಲಿಯ ಪೊಲೀಸ್ ಕಮಿಷನರ್ ರಾಕೇಶ್ ಅಸ್ಥಾನಾ ಅವರಿಗೆ ಪತ್ರ ಬರೆದಿದೆ ಎಂದು ಹೇಳಿದರು. ಆದರೆ ಅವರು ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಮನೀಶ್ ಸಿಸೋಡಿಯಾ ಅವರ ಮನೆ ಮೇಲೆ 15 ಗಂಟೆಗಳ ದಾಳಿಯ ನಂತರ ಸಿಬಿಐ ಅವರ ಕಂಪ್ಯೂಟರ್, ಫೋನ್ ಮತ್ತು ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದೆ.
ಸಿಬಿಐ ಅನ್ನು ಮೇಲಿನಿಂದ ನಿಯಂತ್ರಿಸಲಾಗುತ್ತಿದೆ ಎಂದು ದಾಳಿಯ ನಂತರ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಸಿಸೋಡಿಯಾ, “ನಾವು ಯಾವುದೇ ತಪ್ಪು ಮಾಡಿಲ್ಲ, ನಮಗೆ ಭಯವಿಲ್ಲ, ನಾವು ಜನರಿಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇವೆ, ಸಿಬಿಐ ನನ್ನ ಫೋನ್ ಮತ್ತು ಕಂಪ್ಯೂಟರ್ ಅನ್ನು ವಶಪಡಿಸಿಕೊಂಡಿದೆ. ನನಗೆ ಲಕ್ಷಾಂತರ ವಿದ್ಯಾರ್ಥಿಗಳ ಕುಟುಂಬಗಳ ಆಶೀರ್ವಾದವಿದೆ, ನಾವು ನಿಲ್ಲಿಸುವುದಿಲ್ಲ ಮತ್ತು ಉತ್ತಮ ಆಸ್ಪತ್ರೆಗಳು ಮತ್ತು ಶಾಲೆಗಳ ಮೂಲಕ ಉತ್ತಮ ಸೇವೆಯನ್ನು ನೀಡುವುದನ್ನು ಮುಂದುವರಿಸುತ್ತೇವೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಪಾಕಿಸ್ತಾನದ ದಾಳಿಗೆ ಭಾರತದ ಪ್ರತಿದಾಳಿ: ಪಾಕಿಸ್ತಾನದ 3 ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ ಭಾರತ...

12 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಲೆಫ್ಟಿನೆಂಟ್‌ ಗವರ್ನರ್‌…
ಮನೀಶ್ ಸಿಸೋಡಿಯಾ ಅವರ ಮನೆ ಮೇಲೆ ಸಿಬಿಐ ದಾಳಿ ನಡೆಸಿದ ಬಳಿಕ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು 12 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಸಿಬಿಐ ದಾಳಿಯ ಕೆಲವೇ ಗಂಟೆಗಳ ನಂತರ ಅಧಿಕಾರಿಗಳನ್ನು ಇಲಾಖೆಗಳ ನಡುವೆ ಪುನರ್ರಚಿಸಲಾಯಿತು.
ವರ್ಗಾವಣೆಗೊಂಡ ಅಧಿಕಾರಿಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ವಿಶೇಷ ಕಾರ್ಯದರ್ಶಿ ಉದಿತ್ ಪ್ರಕಾಶ್ ರೈ ಸೇರಿದ್ದಾರೆ, ಎರಡು ಭ್ರಷ್ಟಾಚಾರ ಪ್ರಕರಣಗಳಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್‌ಗೆ “ಅನಾವಶ್ಯಕ ಅನುಕೂಲ” ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಲೆಫ್ಟಿನೆಂಟ್‌ ಗವರ್ನರ್‌ ಈ ಹಿಂದೆ ಕ್ರಮಕ್ಕೆ ಶಿಫಾರಸು ಮಾಡಿದ್ದರು.

ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಏಕೆ ವಿಚಾರಣೆ ನಡೆಸುತ್ತಿದೆ?
ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರ ಉಲ್ಲೇಖದ ಆಧಾರದ ಮೇಲೆ ಮನೀಶ್ ಸಿಸೋಡಿಯಾ ವಿರುದ್ಧ ಕೇಂದ್ರೀಯ ಏಜೆನ್ಸಿಯ ತನಿಖೆಯನ್ನು ಪ್ರಾರಂಭಿಸಲಾಗಿದೆ, ಅವರು ಅಬಕಾರಿ ನೀತಿ 2021-22ರ ಅನುಷ್ಠಾನದಲ್ಲಿ ನಡೆದಿದೆ ಎನ್ನಲಾದ ಆಪಾದಿತ ಅಕ್ರಮಗಳ ಬಗ್ಗೆ ತನಿಖೆಗೆ ಶಿಫಾರಸು ಮಾಡಿದ್ದರು.ಎಫ್‌ಐಆರ್‌ನಲ್ಲಿ ಸಿಸೋಡಿಯಾ ಅವರನ್ನು ಮೊದಲ ಆರೋಪಿ ಎಂದು ಹೆಸರಿಸಲಾಗಿದೆ.

ಪ್ರಮುಖ ಸುದ್ದಿ :-   15 ನಗರಗಳ ಮೇಲೆ ಗುರಿಯಿಟ್ಟಿದ್ದ ಪಾಕ್ ಡ್ರೋನ್‌ಗಳು- ಕ್ಷಿಪಣಿಗಳನ್ನು ಹೊಡೆದುರುಳಿಸಿದ ಭಾರತ, ಪಾಕಿಸ್ತಾನದ ವಾಯು ರಕ್ಷಣಾ ವ್ಯವಸ್ಥೆ ನಾಶ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement