ಬಿಲ್ಕಿಸ್ ಬಾನೊ ಪ್ರಕರಣದ ಅತ್ಯಾಚಾರಿಗಳನ್ನು ಬಿಡುಗಡೆ ಮಾಡುವ ಗುಜರಾತ್ ಸರ್ಕಾರದ ಕ್ರಮದ ವಿರುದ್ಧ ಪಿಐಎಲ್‌ ಸಲ್ಲಿಕೆ

ನವದೆಹಲಿ: ಬಿಲ್ಕಿಸ್‌ ಬಾನು ಅತ್ಯಾಚಾರ ಪ್ರಕರಣದ 11 ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರೀಂಕೋರ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದ್ದು, ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ಸಮ್ಮತಿಸಿದೆ.
ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ವಕೀಲರಾದ ಕಪಿಲ್ ಸಿಬಲ್ ಹಾಗೂ ಅಪರ್ಣಾ ಭಟ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ನ್ಯಾಯಪೀಠ ಒಪ್ಪಿಗೆ ನೀಡಿದೆ.‌
ಅಪರಾಧಕ್ಕೆ ಕ್ಷಮಾಪಣೆ ನೀಡಿರುವುದನ್ನು ನಾವು ಪ್ರಶ್ನಿಸುತ್ತಿದ್ದೇವೆಯೇ ಹೊರತು ಸುಪ್ರೀಂ ಕೋರ್ಟ್ ಆದೇಶವನ್ನಲ್ಲ. ಯಾವ ತತ್ವಗಳ ಆಧಾರದ ಮೇಲೆ ಅಪರಾಧಕ್ಕೆ ಕ್ಷಮಾಪಣೆ ನೀಡಲಾಗಿದೆ ಎಂಬುದನ್ನು ನಾವು ಪ್ರಶ್ನಿಸುತ್ತಿದ್ದೇವೆಯೇ ಹೊರತು ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ನಮ್ಮ ಆಕ್ಷೇಪವಿಲ್ಲ ಎಂದು ಸಿಬಲ್ ಹೇಳಿದ್ದಾರೆ.
ಅಪರಾಧಿಗಳ ಕ್ಷಮಾಪಣೆ ಅರ್ಜಿಯನ್ನು ಪರಿಗಣಿಸುವಂತೆ ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಈ ಹಿಂದೆ ಸೂಚಿಸಿತ್ತು.
ಬಿಲ್ಕಿಸ್‌ ಬಾನು ಅತ್ಯಾಚಾರ ಪ್ರಕರಣದ 11 ಅಪರಾಧಿಗಳನ್ನು ಆಗಸ್ಟ್ 15ರಂದು ಗುಜರಾತ್‌ನ ಗೋದ್ರಾ ಉಪ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿತ್ತು. ಗುಜರಾತ್ ಸರ್ಕಾರದ ಕ್ಷಮಾಪಣೆ ನೀತಿ ಅ‌ನ್ವಯ ಈ ಕ್ರಮ ಕೈಗೊಳ್ಳಲಾಗಿತ್ತು. ಸರ್ಕಾರದ ಈ ಕ್ರಮಕ್ಕೆ ದೇಶದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಪ್ರಮುಖ ಸುದ್ದಿ :-   ಈ ಹಳ್ಳಿಯಲ್ಲಿರುವ ಮತದಾನ ಕೇಂದ್ರದ ಒಬ್ಬರೇ ಒಬ್ಬರು ಮತದಾರರಿಗಾಗಿ 40 ಕಿಮೀ ನಡೆದುಕೊಂಡು ಹೋದ ಚುನಾವಣಾ ಸಿಬ್ಬಂದಿ...!

ಈ ಮಧ್ಯೆ, ಅಪರಾಧಿಗಳ ಬಿಡುಗಡೆ ಕ್ರಮವನ್ನು ರದ್ದುಪಡಿಸಬೇಕು ಎಂದು ಮಹಿಳೆಯರು, ಸಾಮಾಜಿಕ ಕಾರ್ಯಕರ್ತರು ಸೇರಿದಂತೆ 6 ಸಾವಿರಕ್ಕೂ ಅಧಿಕ ನಾಗರಿಕರು ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ.
ಬಿಲ್ಕಿಸ್ ಬಾನೋ ಪ್ರಕರಣ
ಗೋಧ್ರಾ ನಂತರದ ಹಿಂಸಾಚಾರದ ಹಿನ್ನೆಲೆಯಲ್ಲಿ ತನ್ನ ಗ್ರಾಮದಿಂದ ಓಡಿಹೋಗಿ ಹೊಲವೊಂದರಲ್ಲಿ ಆಶ್ರಯ ಪಡೆದಿದ್ದ ಬಿಲ್ಕಿಸ್‌ ಬಾನೋ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಯಿತು ಮತ್ತು ಆಕೆಯ ಕುಟುಂಬದ 7 ಸದಸ್ಯರನ್ನು ಗುಂಪೊಂದು ಮಾರ್ಚ್ 3, 2002 ರಂದು ಕೊಂದಿತು. ತರುವಾಯ, ಸುಪ್ರೀಂ ಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿತು ಮತ್ತು ಆರೋಪಿಗಳನ್ನು 2004 ರಲ್ಲಿ ಬಂಧಿಸಲಾಯಿತು. ಜನವರಿ 21, 2008 ರಂದು ಜಸ್ವಂತ್ ಭಾಯ್ ನಾಯ್, ಗೋವಿಂದಭಾಯಿ ನಾಯ್, ಶೈಲೇಶ್ ಭಟ್, ರಾಧೇಶ್ಯಾಮ್ ಶಾ, ಬಿಪಿನ್ ಚಂದ್ರ ಜೋಶಿ, ಕೇಸರಭಾಯಿ ವೋಹಾನಿಯಾ, ಪ್ರದೀಪ್ ಮೋರ್ಧಿಯಾ, ಬಕಾಭಾಯಿ ವೋಹಾನಿಯಾ, ರಾಜುಭಾಯ್ ಸೋನಿ, ಮಿತೇಶ್ ಭಟ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಯಿತು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement