ಹುಬ್ಬಳ್ಳಿಯ ಈದ್ಗಾ‌ ಮೈದಾನದಲ್ಲಿ ಮೂರು ದಿನಗಳ ಗಣೇಶೋತ್ಸವ ಆಚರಣೆಗೆ ಅವಕಾಶ

ಹುಬ್ಬಳ್ಳಿ: ಹುಬ್ಬಳ್ಳಿ ಈದ್ಗಾ‌ ಮೈದಾನದಲ್ಲಿ ಮೂರು ದಿನಗಳ ಕಾಲ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (HDMC) ಅವಕಾಶ ನೀಡಿದೆ.
ಈ ಕುರಿತು ಮಾತನಾಡಿದ ಹುಬ್ಬಳ್ಳಿ-ಧಾರವಾಡ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ಗಣೇಶ ಪ್ರತಿಷ್ಠಾಪನೆಗೆ ಒಟ್ಟು ಆರು ಸಂಘಟನೆಗಳು ಮನವಿ ಮಾಡಿದ್ದವು. ಸಂಘಟನೆಗಳ ಮನವಿ ಪರಿಶೀಲನೆಗಾಗಿ ಸಮಿತಿಯನ್ನು ರಚಿಸಲಾಗಿತ್ತು. ಸಮಿತಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡುವಂತೆ ವರದಿ ನೀಡಿತ್ತು. ಹೀಗಾಗಿ ಆರು ಸಂಘಟನೆಗಳ ಪೈಕಿ ಒಂದು ಸಂಘಟನೆಗೆ ಅವಕಾಶ ನೀಡಲಾಗುತ್ತದೆ ಎಂದರು.

ಆರು ಸಂಘಟನೆಗಳಲ್ಲಿ ಯಾರಿಗೆ ಕೊಡಬೇಕು ಎಂಬುದನ್ನು ಮೇಯರ್‌ ಅವರ ವಿವೇಚನೆಗೆ ಬಿಡಲಾಗಿದೆ. ಮಂಗಳವಾರ ಬೆಳಿಗ್ಗೆ ಸದನ ಸಮಿತಿ ಸಭೆ ಕರೆದು ಆರು ಸಂಘಟನೆಗಳಲ್ಲಿ ಯಾವ ಒಂದು ಸಮಿತಿಗೆ ಕೊಡಬೇಕು ಎಂದು ನಿರ್ಧರಿಸಲಾಗುತ್ತದೆ ಎಂದು ತಿಳಿಸಿದರು.
ಅಲ್ಲದೆ, ಎಲ್ಲ ಗಣೇಶೋತ್ಸವ ಸಮಿತಿಗೆ ಅನ್ವಯವಾಗುವ ನಿಯಮಾವಳಿಗಳು ಹಾಗೂ ಮಾನದಂಡಗಳು ಈದ್ಗಾ ಮೈದಾನದ ಗಣೇಶೋತ್ಸವ ಸಮಿತಿಗೆ ಅನ್ವಯವಾಗುತ್ತದೆ ಎಂದು ತಿಳಿಸಿದರು.

ಇದಕ್ಕೂ ಮೊದಲು ಸೋಮವಾರ ಸಂಜೆ 5 ಗಂಟೆಗೆ ಸದನ ಸಮಿತಿಯು ಮೇಯರ್ ಈರೇಶ ಅಂಚಟಗೇರಿ ಅವರಿಗೆ ವರದಿ ಸಲ್ಲಿಸಿದ ಬಳಿಕ, ಪ್ರವಾಸಿ ಮಂದಿರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಲಾಯಿತು. ಸಭೆಯಲ್ಲಿ ಮೇಯರ್ ಈರೇಶ ಅಂಚಟಗೇರಿ, ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಎಡಿಜಿಪಿ ಅಲೋಕ​ಕುಮಾರ, ಪಾಲಿಕೆ ಆಯುಕ್ತ ಡಾ. ಗೋಪಾಲಕೃಷ್ಣ ಬಿ. ಮೊದಲಾದವರಿದ್ದರು.

ಪ್ರಮುಖ ಸುದ್ದಿ :-   ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ ಸಿದ್ದರಾಮಯ್ಯ, ಡಿಸಿಎಂಗೆ ಡಿಕೆಶಿಗೆ ಸಮನ್ಸ್‌ ಮರು ಜಾರಿ

 

 

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement