ಹುಬ್ಬಳ್ಳಿ : ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಕಾರು, ಮಹಿಳೆ ಸೇರಿ ಮೂವರು ಸಾವು

ಹುಬ್ಬಳ್ಳಿ : ತಾಲೂಕಿನ ವರೂರು ಗ್ರಾಮದ ಗಣೇಶ ಹೊಟೇಲ್‌ ಬಳಿ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಮಹಿಳೆ ಸೇರಿ ಮೂವರು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.
ಅಪಘಾತದಲ್ಲಿ ದಾವಣಗೆರೆ ಮೂಲದ ಚಾಲಕ ಶಾರೂಕ್‌ (27), ಸೊಹೇಲ್ (26), ಚಿಕ್ಕಮಗಳೂರು ಜಿಲ್ಲೆ ಆಲದೂರಿನ ಎಚ್.ಕೆ. ಸುಶೀಲಾ (35) ಮೃತಪಟ್ಟಿದ್ದಾರೆ ಹಾಗೂ ಇನ್ನೋರ್ವ ಗಾಯಗೊಂಡಿದ್ದಾನೆ.

ಅವಲಕ್ಕಿ ವ್ಯಾಪಾರ ಮಾಡಿಕೊಂಡಿದ್ದ ಇವರು ದಾವಣಗೆರೆಯಿಂದ ರಾತ್ರಿ ಹುಬ್ಬಳ್ಳಿ ಕಡೆಗೆ ಬರುತ್ತಿದ್ದರು ಎಂದು ಹೇಳಲಾಗಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ, ಸೊಹೇಲ್ ಸ್ಥಳದಲ್ಲೆ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಮತ್ತು ಮಹಿಳೆಯನ್ನು ಕಿಮ್ಸ್ ಗೆ ದಾಖಿಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ‌. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement