ಬಿಬಿಎಂಪಿ ಚುನಾವಣೆ: ವಾರ್ಡ್‌ಗಳ ಪುನರ್‌ ವಿಂಗಡಣೆ ಪ್ರಶ್ನಿಸಿದ್ದ ಅರ್ಜಿಗಳನ್ನು ವಜಾ ಮಾಡಿದ ಹೈಕೋರ್ಟ್‌

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ವಿವಿಧ ವಿಧಾನಸಭಾ ಕ್ಷೇತ್ರಗಳ ವಾರ್ಡ್‌ಗಳ ಪುನರ್‌ ವಿಂಗಡಣೆ ಅಧಿಸೂಚನೆ ರದ್ದುಪಡಿಸುವಂತೆ ಕೋರಿ ಶಾಸಕರಾದ ಸೌಮ್ಯ ರೆಡ್ಡಿ, ಜಮೀರ್ ಅಹ್ಮದ್ ಖಾನ್, ಎಂ. ಸತೀಶ್‌ ರೆಡ್ಡಿ ಸೇರಿದಂತೆ ಇತರರು ಸಲ್ಲಿಸಿದ್ದ ಅರ್ಜಿಗಳನ್ನು ಶುಕ್ರವಾರ ಕರ್ನಾಟಕ ಹೈಕೋರ್ಟ್‌ ವಜಾ ಮಾಡಿದೆ.
ಬಿಬಿಎಂಪಿಯ 243 ವಾರ್ಡ್‌ಗಳಿಗೆ ಹಾಲಿ ಮೀಸಲಾತಿ ನಿಗದಿ ಮಾಡಿರುವುದನ್ನು ಪುನರ್ ಪರಿಶೀಲನೆ ನಡೆಸಲು ಆದೇಶಿಸುವಂತೆ ಕೋರಿ ಈಜಿಪುರದ ಕೆ ಮಹದೇವ ಮತ್ತಿತರರು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಹೇಮಂತ್‌ ಚಂದನಗೌಡರ ನೇತೃತ್ವದ ಏಕಸದಸ್ಯ ಪೀಠವು ನಡೆಸಿತು. ಹಿಂದಿನ ವಿಚಾರಣೆಯಲ್ಲಿ ಅರ್ಜಿದಾರರು ಕೋರಿಕೆಯ ಹಿನ್ನೆಲೆಯಲ್ಲಿ ವಾರ್ಡ್‌ ಪುನರ್‌ ವಿಂಗಡಣೆಗೆ ಸಂಬಂಧಿಸಿದಂತೆ ಪೀಠವು ಕೆಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿತು. ಇದರಿಂದ ಸಂತೃಪ್ತಗೊಳ್ಳದ ಪೀಠವು ಕ್ಷೇತ್ರ ಪುನರ್‌ ವಿಂಗಡಣೆಯಲ್ಲಿನ ವ್ಯತ್ಯಾಸ ಮತ್ತು ಲೋಪಗಳನ್ನು ನಂತರ ಬರಲಿರುವ ಸರ್ಕಾರಗಳು ಸರಿಪಡಿಸಲಿವೆ ಎಂದು ಹೇಳಿ ಅರ್ಜಿಗಳನ್ನು ವಜಾ ಮಾಡಿದೆ.

ಚಾಮರಾಜಪೇಟೆ, ಜಯನಗರ, ಶಿವಾಜಿ ನಗರ ಮತ್ತಿತರ ಕಡೆ ವಿರೋಧ ಪಕ್ಷದ ಶಾಸಕರು ಇರುವ ಕ್ಷೇತ್ರಗಳಲ್ಲಿ ವಾರ್ಡ್‌ಗಳ ಸಂಖ್ಯೆ ತಗ್ಗಿಸಲಾಗಿದೆ. ಕೆಲವು ವಾರ್ಡ್‌ಗಳ ಮತದಾರರ ಸಂಖ್ಯೆ 34 ಸಾವಿರ ಇದ್ದರೆ, ಕೆಲವು ವಾರ್ಡ್‌ಗಳಲ್ಲಿ 39 ಸಾವಿರ ಮತದಾರರ ಸಂಖ್ಯೆ ಇದೆ. ಕೆಲವು ಕಡೆ ವಾರ್ಡ್‌ಗಳನ್ನು ಎರಡು ವಿಧಾನಸಭಾ ಕ್ಷೇತ್ರಗಳ ನಡುವೆ ವಿಭಜಿಸಲಾಗಿದೆ ಎಂದು ಅರ್ಜಿದಾರರ ಆಕ್ಷೇಪಿಸಿದ್ದರು. ಬಿಜೆಪಿಯ ಬೊಮ್ಮನಹಳ್ಳಿ ವಿಧಾನಸಭಾ ಕೇತ್ರದ ಶಾಸಕ ಎಂ ಸತೀಶ್‌ ರೆಡ್ಡಿ ಅವರು ತಮ್ಮ ಕ್ಷೇತ್ರದಲ್ಲಿ ಬರುವ ಕೆಲವು ವಾರ್ಡ್‌ಗಳನ್ನು ವಿಭಜಿಸಿ, ಪಕ್ಕದ ವಿಧಾನಸಭಾ ಕ್ಷೇತ್ರದ ವಾರ್ಡ್‌ಗಳ ಜೊತೆ ಸೇರ್ಪಡೆಗೊಳಿಸಲಾಗಿದೆ ಎಂದು ಆಕ್ಷೇಪಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

ವಿಧಾನಸಭಾ ಕ್ಷೇತ್ರಗಳ ಭೌಗೋಳಿಕ ವಿಸ್ತೀರ್ಣ ಹಾಗೂ ಜನಸಂಖ್ಯೆ ಹೆಚ್ಚಳದ ಆಧಾರದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 243 ವಾರ್ಡ್‌ಗಳನ್ನು ರಚಿಸಲಾಗಿದೆ. 2011ರ ಜನಗಣತಿ ಆಧರಿಸಿ ಪ್ರತಿ ವಾರ್ಡ್‌ಗೆ ಜನಸಂಖ್ಯೆ ನಿಗದಿಪಡಿಸಲಾಗಿದೆ. ಪ್ರತಿಯೊಂದು ವಿಧಾನಸಭಾ ಕ್ಷೇತ್ರದ ವಾರ್ಡ್ ವಿಂಗಡಣೆಯಲ್ಲಿ ಶೇ.10ರಷ್ಟು ಜನಸಂಖ್ಯೆ ಏರಿಳಿತದ ಅನುಪಾತ ಅನುಸರಿಸಲಾಗಿದೆ. 2011ರ ಜನಸಂಖ್ಯೆ ಆಧರಿಸಿ ವಾರ್ಡ್‌ಗಳ ಮರುವಿಂಗಡಣೆ ಮಾಡಲಾಗಿದೆ ಎಂದು ಸರ್ಕಾರ ವಾದಿಸಿತ್ತು.
ರಾಜ್ಯ ಚುನಾವಣಾ ಆಯೋಗವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಕೆ ಎನ್ ಫಣೀಂದ್ರ ಅವರು “ಅರ್ಜಿದಾರರ ಪರ ವಕೀಲರು ಮತ್ತೆ ಮತ್ತೆ ತಕರಾರು ತೆಗೆಯುವುದು ಸಮಂಜಸವಲ್ಲ. ಏನಾದರೂ ಆಕ್ಷೇಪಣೆ ಅಥವಾ ಲೋಪದೋಷಗಳು ಇದ್ದಲ್ಲಿ ಅದನ್ನು ಮುಂದಿನ ಚುನಾವಣೆಯಲ್ಲಿ ಸರಿಪಡಿಸಿಕೊಳ್ಳಬಹುದು. ಚುನಾಯಿತ ಪ್ರತಿನಿಧಿಗಳಿಲ್ಲದೆ ಪಾಲಿಕೆಯನ್ನು ಕಾರ್ಯಾಂಗದ ಕೈಯಲ್ಲಿ ನಡೆಸಿಕೊಂಡು ಹೋಗುವುದು ಸೂಕ್ತವಲ್ಲ” ಎಂದು ಪೀಠದ ಮುಂದೆ ತಮ್ಮ ವಾದ ಮಂಡಿಸಿದ್ದರು.

2 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement