ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕಾಮಗಾರಿ: ಕೇರಳದ ಬೇಡಿಕೆಗೆ ಒಪ್ಪದ ಕರ್ನಾಟಕ

ಬೆಂಗಳೂರು: ರಾಜ್ಯದ ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ, ವನ್ಯಜೀವಿಧಾಮಗಳಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ ಎಂದು ಕೇರಳ ಸರ್ಕಾರಕ್ಕೆ ರಾಜ್ಯ ಸರ್ಕಾರ ತಿಳಿಸಿದೆ.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭೇಟಿ ಬಳಿಕ ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇತ್ತೀಚೆಗೆ ನಡೆದ ದಕ್ಷಿಣ ವಲಯ ಪರಿಷತ್ತಿನ ಸಭೆಯಲ್ಲಿ ತೀರ್ಮಾನಿಸಿದಂತೆ ದ್ವಿಪಕ್ಷೀಯ ಮಾತುಕತೆ ನಡೆಸಲು ಪಿಣರಾಯಿ ವಿಜಯನ್ ಬಂದಿದ್ದರು ಎಂದು ತಿಳಿಸಿದರು.
ಕಾಞಂಗಾಡ್-ಕಾಣಿಯೂರು ರೈಲು ಮಾರ್ಗ ಸೇರಿದಂತೆ ವಿವಿಧ ರೈಲ್ವೆ ಮತ್ತು ಹೆದ್ದಾರಿ ಯೋಜನೆಗಳಿಗೆ ಸಹಮತಿ ನೀಡುವಂತೆ ಕೇರಳ ಸರ್ಕಾರ ಕೋರಿಕೆ ಸಲ್ಲಿಸಿತ್ತು. ಪ್ರಸ್ತಾಪಿತ ಕಾಞಂಗಾಡ್-ಕಾಣಿಯೂರು ರೈಲು ಮಾರ್ಗವು ಕೇರಳದಲ್ಲಿ 40 ಕಿ.ಮೀ. ಹಾಗೂ ಕರ್ನಾಟಕದಲ್ಲಿ 31 ಕಿ.ಮೀ. ಮಾರ್ಗ ಹೊಂದಿದ್ದು, ರಾಜ್ಯಕ್ಕೆ ಇದರಿಂದ ಹೆಚ್ಚಿನ ಅನುಕೂಲಗಳಿಲ್ಲ. ಅಲ್ಲದೆ, ಪಶ್ಚಿಮ ಘಟ್ಟದ ಜೀವ ವೈವಿಧ್ಯ ಸೂಕ್ಷ್ಮ ಪ್ರದೇಶದಲ್ಲಿ ಈ ರೈಲು ಮಾರ್ಗ ಹಾದು ಹೋಗುವ ಕಾರಣ ಒಪ್ಪಿಗೆ ನೀಡಲು ಸಾಧ್ಯವಿಲ್ಲ ಎಂದು ತಿಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಹಳೆಯ ಯೋಜನೆಯಾದ ತಲಚೇರಿ- ಮೈಸೂರು ರೈಲು ಯೋಜನೆಯನ್ನೂ ಪಿಣರಾಯಿ ವಿಜಯನ್‌ ಪ್ರಸ್ತಾಪಿಸಿದರು. ಈ ರೈಲು ಮಾರ್ಗವು ಬಂಡಿಪುರ-ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಮಧ್ಯಭಾಗದಲ್ಲಿ ಹಾದುಹೋಗುವುದರಿಂದ ಅಲ್ಲಿನ ವನ್ಯಜೀವಿಗಳಿಗೆ ಹಾನಿಯಾಗಲಿದೆ. ಹೀಗಾಗಿ, ಇದಕ್ಕೂ ಸಮ್ಮತಿಸಲು ಸಾಧ್ಯವಿಲ್ಲ ಎಂದಾಗ, ಭೂಗತ ರೈಲು ಮಾರ್ಗ ನಿರ್ಮಿಸುವ ಕುರಿತು ಕೇರಳ ಸರ್ಕಾರ ಪ್ರಸ್ತಾಪಿಸಿದೆ. ಆದರೆ, ಇದರಿಂದಲೂ ನಿರ್ಮಾಣ ಚಟುವಟಿಕೆ ಸಂದರ್ಭದಲ್ಲಿ ಪರಿಸರಕ್ಕೆ ಹಾನಿಯಾಗಲಿದೆ. ಆದ್ದರಿಂದ ಅದಕ್ಕೂ ಸಮ್ಮತಿಸುವುದಿಲ್ಲ ಎಂದು ತಿಳಿಸಲಾಗಿದೆ ಎಂದರು.
ಅಲ್ಲದೆ. ಕೇರಳಕ್ಕೆ ಬಂಡಿಪುರ ರಾಷ್ಟ್ರೀಯ ಉದ್ಯಾನದ ಮೂಲಕ ರಾತ್ರಿ ವೇಳೆ ಎರಡು ಬಸ್‌ಗಳು ಸಂಚರಿಸುತ್ತಿವೆ. ನಾಲ್ಕು ಬಸ್‌ಗಳಿಗೆ ಅನುಮತಿ ನೀಡುವಂತೆ ಕೋರಲಾಗಿತ್ತು. ಅದಕ್ಕೂ ಸರ್ಕಾರ ಒಪ್ಪಿಗೆ ನೀಡಿಲ್ಲ ಎಂದೂ ಬೊಮ್ಮಾಯಿ ಮಾಹಿತಿ ನೀಡಿದರು.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

1 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement