ಮೈಸೂರು: ಪ್ರಥಮ ದರ್ಜೆ ಸಹಾಯಕರ ಹುದ್ದೆ ಕೊಡಿಸಲು ಅವ್ಯವಹಾರ ನಡೆಸಿದ ಆರೋಪದ ಮೇಲೆ ಮೈಸೂರು ನರಸಿಂಹರಾಜ ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ಅಶ್ವಿನಿ ಅನಂತಪುರ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತರು ಸೋಮವಾರ ಆದೇಶ ಹೊರಡಿಸಿದ್ದಾರೆ.
ಕೆಪಿಎಸ್ಸಿಯ ಎಫ್ಡಿಎ ನೇಮಕಾತಿ ಪ್ರಕ್ರಿಯೆಯಲ್ಲಿ ಅಭ್ಯರ್ಥಿಯೊಬ್ಬರಿಗೆ ಕೆಪಿಎಸ್ಸಿ ವತಿಯಿಂದ ನಡೆದಿದ್ದ ಪ್ರಥಮ ದರ್ಜೆ ಸಹಾಯಕರ ಪರೀಕ್ಷೆಗೆ ಅಭ್ಯರ್ಥಿ ಜತೆ ಡೀಲ್ ಮಾಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ದಾಖಲೆಗಳ ಸಮೇತ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅಶ್ವಿನಿ ಅನಂತಪುರ ಅವರನ್ನು ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನಗರ ಪೊಲೀಸ್ ಆಯುಕ್ತರು ವಿಚಾರಣೆ ಬಾಕಿ ಇರಿಸಿ ತಕ್ಷಣ ಜಾರಿಗೆ ಬರುವಂತೆ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಆರೋಪಿ ಪಿಎಸ್ಐ ಮಾತನಾಡಿದ್ದೆನ್ನಲಾದ ಮೊಬೈಲ್ ಹಾಗೂ ವಾಟ್ಸ್ಆಪ್ ಆಡಿಯೊ ಸಂಭಾಷಣೆಗಳು ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ಬಗ್ಗೆ ನಗರ ಅಪರಾಧ ವಿಭಾಗದ ಎಸಿಪಿ ಪ್ರಾಥಮಿಕ ತನಿಖೆ ನಡೆಸಿದ್ದು, ಆರೋಪಗಳು ಮೇಲ್ನೋಟಕ್ಕೆ ನೈಜವೆಂದು ತಿಳಿದು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ