ಕಾಂಗ್ರೆಸ್ ಅಧ್ಯಕ್ಷರ ಹುದ್ದೆಗೆ ಸ್ಪರ್ಧೆ ಖಚಿತಪಡಿಸಿದ ಅಶೋಕ್ ಗೆಹ್ಲೋಟ್: ಆದ್ರೆ ರಾಜಸ್ಥಾನದಿಂದ ದೂರ ಉಳಿಯಲ್ವಂತೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ನಾಮಪತ್ರ ಸಲ್ಲಿಸುವುದನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಗುರುವಾರ ಖಚಿತಪಡಿಸಿದ್ದಾರೆ. ಅಶೋಕ್ ಗೆಹ್ಲೋಟ್, ತಾನು ಎಂದಿಗೂ ರಾಜಸ್ಥಾನದಿಂದ ದೂರ ಉಳಿಯುವುದಿಲ್ಲ ಮತ್ತು ರಾಜ್ಯಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ನಾನು ನಾಮಪತ್ರ ಸಲ್ಲಿಸುತ್ತೇನೆ, ನಂತರ ಇತರ ಪ್ರಕ್ರಿಯೆ ಜಾರಿಯಲ್ಲಿರುತ್ತದೆ ಮತ್ತು ಚುನಾವಣೆಯೂ ನಡೆಯಬಹುದು. ಇದೆಲ್ಲವೂ ಭವಿಷ್ಯದ ಮೇಲೆ ಅವಲಂಬಿತವಾಗಿದೆ ಎಂದು ಅಶೋಕ್ ಗೆಹ್ಲೋಟ್ ಗುರುವಾರ ಹೇಳಿದ್ದಾರೆ ಎಂದು ಇಂಡಿಯಾ ಟುಡೇ.ಇನ್‌ ವರದಿ ಮಾಡಿದೆ.
ನಾನು ನಿರ್ದಿಷ್ಟವಾಗಿ ಯಾರ ಬಗ್ಗೆಯೂ ಕಾಮೆಂಟ್ ಮಾಡಲು ಬಯಸುವುದಿಲ್ಲ. ರಾಜಸ್ಥಾನದಲ್ಲಿ ಯಾವ ಪರಿಸ್ಥಿತಿ ಎದುರಾಗುತ್ತದೆ, ಕಾಂಗ್ರೆಸ್ ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಮತ್ತು ರಾಜಸ್ಥಾನದ ಶಾಸಕರು ಏನು ಯೋಚಿಸುತ್ತಾರೆ ಎಂಬುದನ್ನು ನೋಡೋಣ. ಇದು ಎಲ್ಲಾ ಇದನ್ನು ಅವಲಂಬಿಸಿರುತ್ತದೆ ಎಂದು ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಬಗ್ಗೆ ಮಾತನಾಡುತ್ತ ಹೇಳಿದರು.

ಅಶೋಕ್ ಗೆಹ್ಲೋಟ್ ಅವರು ಉನ್ನತ ಹುದ್ದೆಗೆ ನಾಮಪತ್ರ ಸಲ್ಲಿಸುವುದಾಗಿ ಖಚಿತಪಡಿಸುವುದರೊಂದಿಗೆ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಸ್ಪರ್ಧೆ ಕಾವೇರತೊಡಗಿದೆ, ಸಂಸದ ಶಶಿ ತರೂರ್ ಕೂಡ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಸೋನಿಯಾ ಗಾಂಧಿ ‘ಓಕೆ’ ಹೇಳಿದ್ದಾರೆ.
ಏತನ್ಮಧ್ಯೆ, ರಾಹುಲ್‌ ಗಾಂಧಿ ಅವರನ್ನು ಪಕ್ಷದ ಮುಖ್ಯಸ್ಥರನ್ನಾಗಿ ಮರಳಿ ಕರೆತರಲು ಏಳು ರಾಜ್ಯ ಘಟಕಗಳು ನಿರ್ಣಯಗಳನ್ನು ಅಂಗೀಕರಿಸುವುದರೊಂದಿಗೆ ರಾಹುಲ್ ಗಾಂಧಿ ಅವರು ಕಾಂಗ್ರೆಸ್‌ನ ಆಡಳಿತವನ್ನು ವಹಿಸಿಕೊಳ್ಳಬೇಕೆಂಬ ಕೂಗು ಹೆಚ್ಚುತ್ತಿದೆ.
ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ
ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಸೆಪ್ಟೆಂಬರ್ 24 ರಿಂದ 30ರ ವರೆಗೆ ನಡೆಯಲಿದೆ. ನಾಮಪತ್ರಗಳ ಪರಿಶೀಲನೆಯ ದಿನಾಂಕ ಅಕ್ಟೋಬರ್ 1 ಆಗಿದ್ದು, ನಾಮಪತ್ರ ಹಿಂಪಡೆಯಲು ಅಕ್ಟೋಬರ್ 8 ಕೊನೆಯ ದಿನಾಂಕವಾಗಿದೆ.
ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳಿದ್ದಲ್ಲಿ ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 19 ರಂದು ಮತ ಎಣಿಕೆ ಮತ್ತು ಫಲಿತಾಂಶ ಘೋಷಣೆಯಾಗಲಿದೆ.

ಪ್ರಮುಖ ಸುದ್ದಿ :-   ಪಾಕಿಸ್ತಾನದ 19 ವರ್ಷದ ಹುಡುಗಿಗೆ ಹೊಸ ಜೀವನ ನೀಡಿದ 'ಭಾರತದ ಹೃದಯ' ....!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement