ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

ಹಾವೇರಿ: ಜನವರಿ 6ರಿಂದ ಹಾವೇರಿಯಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಶನಿವಾರ ಬಿಡುಗಡೆ ಮಾಡಲಾಯಿತು.
ಹಾವೇರಿ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಸಮ್ಮೇಳನದ ಲಾಂಛನವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲಕುಮಾರ್​ ಬಿಡುಗಡೆ ಮಾಡಿದರು.
ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ.ಮಹೇಶ್​ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ​ ಹೆಬ್ಬಾರ​, ಶಾಸಕರಾದ ನೆಹರು ಓಲೇಕಾರ, ಅರುಣ​ಕುಮಾರ್​ ಪೂಜಾರ, ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಜಿಲ್ಲಾ ಪಂಚಾಯತ ಸಿಇಒ ಮಹ್ಮದ್​ ರೋಷನ್, ಕಸಾಪ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ ಮೊದಲಾದವರಿದ್ದರು.
ಲಾಂಛನದಲ್ಲಿ ಹಾವೇರಿ ಜಿಲ್ಲೆಯ ಮಹತ್ವದ ಸ್ಥಳಗಳು, ಪರಂಪರೆ, ಸಂಸ್ಕೃತಿ, ಯೋಧರು, ಹುತಾತ್ಮರು, ಮಹಾನ್​ ಸಂತರು, ಕವಿಗಳನ್ನು ಬಿಂಬಿಸಲಾಗಿದೆ. ಜಾನಪದ ವಿಶ್ವ ವಿದ್ಯಾಲಯದ ಸಹಾಯಕ ಕುಲಸಚಿವ ಎಸ್​.ಎಚ್​. ಮುದಕವಿ ಈ ಲಾಂಛನ ವಿನ್ಯಾಸ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲಕುಮಾರ, ಎರಡು ವರ್ಷಗಳ ಕಾಲ ಕೊರೋನಾ ಇದ್ದ ಕಾರಣ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆಸಲು ಸಾಧ್ಯವಾಗಿರಲಿಲ್ಲ. ಮೂರು ದಿನಗಳ ಸಮ್ಮೇಳನದಲ್ಲಿ ಒಂದು ಪ್ರಧಾನ ವೇದಿಕೆ ಮತ್ತು ಎರಡು ಉಪವೇದಿಕೆ ಇರುತ್ತದೆ ಎಂದು ಹೇಳಿದರು.
ಜನೆವರಿ 6ರಂದು ಭವ್ಯವಾದ ಮೆರವಣಿಗೆ ಆಯೋಜಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಸಾಹಿತ್ಯ ಸಮ್ಮೇಳನಕ್ಕೆ ಐದು ಸಾವಿರ ಸ್ವಯಂ ಸೇವಕರ ಬಳಕೆಗೆ ಚಿಂತನೆ ಮಾಡಲಾಗಿದೆ. ಸಮ್ಮೇಳನಕ್ಕೆ ಈಗಾಗಲೇ 20 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಮಾತನಾಡಿ, ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳನ್ನೊಳಗೊಂಡ 21 ಸಮಿತಿ ರಚನೆ ಮಾಡಲಾಗಿದೆ. ಸುಮಾರು 25 ಸಾವಿರ ಜನರಿಗೆ ವಸತಿ ಸೌಲಭ್ಯ ಕಲ್ಪಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಮೂರು ದಿನಗಳ ಕಾಲ ಪ್ರತಿನಿತ್ಯ 3 ಲಕ್ಷ ಜನರಿಗೆ ಊಟದ ವ್ಯವಸ್ಥೆ ಮಾಡುವ ನಿರ್ಣಯ ಮಾಡಲಾಗಿದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಸಮ್ಮೇಳನ ನಡೆಯುವ ದಿನಗಳಂದು ದಸರಾ ವೇಳೆ ಮೈಸೂರು ದೀಪಾಲಂಕಾರ ಮಾಡಿದಂತೆ ಹಾವೇರಿ ನಗರಕ್ಕೆ ದೀಪಾಲಂಕಾರ ಮಾಡಲಾಗುತ್ತದೆ. ಮುಖ್ಯಮಂತ್ರಿ ಬೊಮ್ಮಾಯಿಯವರು ಹಾವೇರಿ ಜಿಲ್ಲೆಯವರು. ಅದೇ ರೀತಿ ಕಸಾಪ ರಾಜ್ಯಾಧ್ಯಕ್ಷರು ಸಹ ಹಾವೇರಿ ಜಿಲ್ಲೆಯವರು. ಹೀಗಾಗಿ ಅರ್ಥಪೂರ್ಣ ಸಮ್ಮೇಳನ ನಡೆಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಮಹೇಶ ಜೋಶಿ ಮಾತನಾಡಿ, ಹಾವೇರಿಯಲ್ಲಿ ೮೬ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನುʼ ಐತಿಹಾಸಿಕವಾಗಿ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಲಿದ್ದು, ಯಾವುದೇ ಅಡ್ಡಿ ಆತಂಕಗಳು ಉಂಟಾಗುವುದಿಲ್ಲ ಎಂಬ ಭರವಸೆಯನ್ನು ಉಭಯ ಸಚಿವರು, ಕನ್ನಡ ಸಾಹಿತ್ಯ ಪರಿಷತ್ತಿಗೆ ನೀಡಿದ್ದಾರೆ ಎಂದು ಹೇಳಿದರು.

 

 

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement