ಬಿಜೆಪಿ ಸರ್ಕಾರ ಮತದಾರರ ಮಾಹಿತಿ ಕಳುವು ಮಾಡುತ್ತಿದೆ ಎಂದು ಕಾಂಗ್ರೆಸ್‌ ಗಂಭೀರ ಆರೋಪ: ಸಿಎಂ ಬೊಮ್ಮಾಯಿ ರಾಜೀನಾಮೆಗೆ ಒತ್ತಾಯ

ಬೆಂಗಳೂರು: ರಾಜ್ಯದ ಬಿಜೆಪಿ ಸರ್ಕಾರ ಮತದಾರರ ಮಾಹಿತಿಯನ್ನು ಕಳ್ಳತನ ಮಾಡುತ್ತಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಮತದಾರರಿಗೆ ಸಂಬಂಧಿಸಿದ ಡೇಟಾವನ್ನು ಕಳ್ಳತನ ಮಾಡಿದೆ ಎಂದು‌ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಗಂಭೀರ ಆರೋಪ ಮಾಡಿದರು.
ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರ ಇದಕ್ಕೆ ಹೊಣೆಯಾಗಿದೆ. ಖಾಸಗಿ ಸಂಸ್ಥೆಯೊಂದು (ಎನ್‌ಜಿಒ) ಮತದಾರರ ಅಂಕಿಅಂಶಗಳನ್ನು (ಡಾಟಾ) ಅಕ್ರಮವಾಗಿ ಸಂಗ್ರಹಿಸುತ್ತಿದ್ದು, ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಕಾರಣ. ಚುನಾವಣಾ ವ್ಯವಸ್ಥೆ ಭ್ರಷ್ಟಗೊಳಿಸುವ ಈ ಕೃತ್ಯದ ಬಗ್ಗೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಆಗ್ರಹಿಸಿದರು.
‘ಚಿಲುಮೆ’ ಎಂಬ ಸರ್ಕಾರೇತರ ಸಂಸ್ಥೆ (ಎನ್‌ಜಿಒ) ತನ್ನ ಏಜೆಂಟರನ್ನು ಸರ್ಕಾರಿ ಅಧಿಕಾರಿಗಳಂತೆ ಬಿಂಬಿಸಿ ಸಾವಿರಾರು ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಿದೆ. ಈ ಅಕ್ರಮದ ಹೊಣೆಯನ್ನು ಬಸವರಾಜ ಬೊಮ್ಮಾಯಿ ಹೊರಬೇಕು. ಅಲ್ಲದೆ, ಅವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅಲ್ಲದೆ, ಅವರ ಮೇಲೆ ಎಫ್‌ಐಆರ್‌ ದಾಖಲಿಸಬೇಕು ಹಾಗೂ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ಬಿಬಿಎಂಪಿ ಅಧಿಕಾರಿಗಳು ಚಿಲುಮೆ ಸಂಸ್ಥೆಗೆ ಮತದಾರರ ಡಾಟಾ ಸಂಗ್ರಹಿಸಲು ಅವಕಾಶ ನೀಡಿದ್ದಾರೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರೂ ಸಹ ಇದಕ್ಕೆ ಕಾರಣರಾಗಿದ್ದಾರೆ.ಡಾಟಾ ಸಂಗ್ರಹಕ್ಕೆ ಆಗಸ್ಟ್ 20ರಂದು ಆದೇಶ ಹೊರಡಿಸಲಾಗಿದೆ. ಚಿಲುಮೆ ಸಂಸ್ಥೆಯವರು ಸರ್ಕಾರಿ ಅಧಿಕಾರಿಗಳಂತೆ ಬಿಂಬಿಸಿಕೊಂಡು ಮಾಹಿತಿ ಸಂಗ್ರಹಿಸಿದ್ದಾರೆ ಎಂದು ಆರೋಪಿಸಿದರು.
ಖಾಸಗಿ ಸಂಸ್ಥೆಯವರಿಗೆ ಮತದಾರರ ಡಾಟಾ ಸಂಗ್ರಹಿಸಲು ಅವಕಾಶ ಸಿಕ್ಕಿದ್ದು ಹೇಗೆ ಎಂದು ಪ್ರಶ್ನಿಸಿದ ಅವರು ಮಾಹಿತಿಯನ್ನು ಅಕ್ರಮವಾಗಿ ಸಂಗ್ರಹಿಸುತ್ತಿರುವುದು ಏಕೆ ಎಂದು ಕೇಳಿದ್ದಾರೆ. ಈ ವಿಷಯದಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಏನು‌ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಮತದಾರರ ಮಾಹಿತಿಯನ್ನು ಸಂಗ್ರಹಿಸಬೇಕಾಗಿರುವುದು ಸರ್ಕಾರ. ಆದರೆ, ಅದರ ಬದಲಾಗಿ ಇದನ್ನು ಖಾಸಗಿ ಸಂಸ್ಥೆ ಸಂಗ್ರಹಿಸಿದೆ. ಮತದಾರರ ವಿಳಾಸ, ಮೊಬೈಲ್ ಸಂಖ್ಯೆ, ವೈಯುಕ್ತಿಕ ಮಾಹಿತಿಗಳನ್ನೂ ಖಾಸಗಿ ಸಂಸ್ಥೆ ಸಂಗ್ರಹಿಸಿದೆ. ನಕಲಿ ಕೃಷ್ಣಪ್ಪ ರವಿಕುಮಾರ ಎಂಬವರು ಇದರ ಹಿಂದಿದ್ದು, ಇವರು ಮಾಜಿ ಉಪ ಮುಖ್ಯಮಂತ್ರಿಯೂ ಆಗಿರುವ ಹಾಲಿ ಸಚಿವರ ಆಪ್ತ ಎಂದು ಸುರ್ಜೇವಾಲಾ ಆರೋಪಿಸಿದರು.

ಪ್ರಮುಖ ಸುದ್ದಿ :-   ಬೆಳಗಾವಿ: ಹಾಡಹಗಲೇ ಸ್ಕ್ರೂ ಡ್ರೈವರ್​ನಿಂದ ಚುಚ್ಚಿ ಯುವಕನ ಕೊಲೆ

ಮತದಾರರ ಮಾಹಿತಿ ಸಂಗ್ರಹಿಸಲು ಚಿಲುಮೆ ಖಾಸಗಿ ಸಂಸ್ಥೆಗೆ ಹೇಗೆ ಅವಕಾಶ ನೀಡಲಾಯಿತು ಎಂಬುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಉತ್ತರ ನೀಡಬೇಕು. ವೈಯುಕ್ತಿಕ ಮಾಹಿತಿ ಸಂಗ್ರಹಿಸಿದ್ದು ಏಕೆ? ಇವರೇನು ಸರ್ಕಾರಿ ಅಧಿಕಾರಿಗಳೇ ಸಂಗ್ರಹಿಸಲು’ ಎಂದು ಪ್ರಶ್ನಿಸಿದ ಅವರು ಇದರಲ್ಲಿ ಸರ್ಕಾರ ಹಾಗೂ ಅದರ ಅಧಿಕಾರಿಗಳೇ ಭಾಗಿಯಾಗಿರುವ ಸಾಧ್ಯತೆ ಇದೆ ಎಂದು ಆರೋಪಿಸಿದರು.
ಇದಕ್ಕೆ ಹೊಣೆ ಹೊತ್ತು ಮುಖ್ಯಮಂತ್ರಿಗಳು ತಕ್ಷಣವೇ ರಾಜೀನಾಮೆ ನೀಡಬೇಕು. ಮುಖ್ಯಮಂತ್ರಿ ವಿರುದ್ಧ ಎಫ್‌ಐಆರ್ ದಾಖಲಿಸಿ, ಬಂಧಿಸಬೇಕು. ಅಲ್ಲದೆ ಬಿಬಿಎಂಪಿ ಮುಖ್ಯ ಆಯುಕ್ತರು ಸಹ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಚುನಾವಣಾ ಆಯೋಗ ಕೂಡಾ ಇದರ ಹೊಣೆ ಹೊರಬೇಕು. ಈ ಅಕ್ರಮದ ಬಗ್ಗೆ 30 ದಿನಗಳ ಒಳಗೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯ ನೇತೃತ್ವದಲ್ಲಿ ಸಮಗ್ರ ತನಿಖೆ ಆಗಬೇಕು. ಯಾಕೆಂದರೆ ಮತದಾರರ ಮಾಹಿತಿಯನ್ನು ಸರ್ಕಾರದ ಅಧಿಕಾರಿಗಳನ್ನು ಹೊರತುಪಡಿಸಿ ಇತರರು ಸಂಗ್ರಹಿಸುವಂತಿಲ್ಲ. ಆದರೆ, ಚಿಲುಮೆ ಸಂಸ್ಥೆ ಕಾನೂನುಬಾಹಿರವಾಗಿ ಈ ಕೆಲಸ ಮಾಡಿದೆ. ಇದು ಗಂಭೀರ ಅಪರಾಧವಾಗಿದೆ ಎಂದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಇದಕ್ಕೆ ಮುಖ್ಯಮಂತ್ರಿಯೇ ಕಾರಣ. ಮತದಾರರ ಮಾಹಿತಿ ಸಂಗ್ರಹಿಸಿ ವಾಮಮಾರ್ಗದಲ್ಲಿ ಚುನಾವಣೆ ಗೆಲ್ಲಲು ಅವರು ಹೊರಟಿದ್ದಾರೆ. ಬಸವರಾಜ ಬೊಮ್ಮಾಯಿ ಅವರಿಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ನೈತಿಕ ಹಕ್ಕಿಲ್ಲ. ಹೀಗಾಗಿ ಅವರು ರಾಜೀನಾಮೆ ನೀಡಬೇಕು. ಮುಖ್ಯಮಂತ್ರಿ ವಿರುದ್ಧ ನಾವು ದೂರು ನೀಡುತ್ತೇವೆ ಎಂದರು.
ಬಿಬಿಎಂಪಿ ಬಿಜೆಪಿ ಕಾರ್ಯಕರ್ತರಂತೆ ಕೆಲಸ ಮಾಡುತ್ತಿದ್ದಾರೆ. ನಿನ್ನೆ ಇದ್ದಕ್ಕಿದ್ದಂತೆ ಚಿಲುಮೆ ಸಂಸ್ಥೆಗೆ ನೀಡಿದ್ದ ಅನುಮತಿ ಆದೇಶವನ್ನು ಬಿಬಿಎಂಪಿ ಹಿಂಪಡೆದಿದೆ. ಚಿಲುಮೆ ಟ್ರಸ್ಟ್ ನಿಯಮ ಉಲ್ಲಂಘಿಸಿದೆ ಎನ್ನುವುದು ಇದರಿಂದಲೇ ಸ್ಪಷ್ಟವಾಗುತ್ತದೆ. ಅದು ವೆಬ್‌ಸೈಟ್‌ನಲ್ಲಿ ದಾಖಲೆಗಳನ್ನು ಅಪ್ಲೋಡ್ ಮಾಡಲಾಗಿದ್ದಕ್ಕೆ ಯಾರು ಜವಾಬ್ದಾರಿ? ಆ ಸಂಸ್ಥೆ ವಿರುದ್ಧ ಎಫ್ಐಆರ್ ಮಾಡಲಾಗಿದೆಯೇ ಎಂದು ಅವರು ಪ್ರಶ್ನಿಸಿದರು. ನೈಜ ಮತದಾರರ ಹೆಸರು ಕಿತ್ತುಹಾಕಲು ಇದೆಲ್ಲ ಮಾಡಲಾಗಿದೆ. ಒಂದೇ ರಸ್ತೆಯಲ್ಲಿ ಹೊಂಬಾಳೆ ಟ್ರಸ್ಟ್, ಹೊಂಬಾಳೆ ಕಂಪನಿ ಮಾಡಿಕೊಂಡಿದ್ದಾರೆ. ಅವರದೇ ಮಾಲೀಕತ್ವದ ಚಿಲುಮೆ ಸಂಸ್ಥೆಯನ್ನೂ ಮಾಡಲಾಗಿದೆ. ಮಾಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಡಿಕೆ ಶಿವಕುಮಾರ್ ಆರೋಪ ಮಾಡಿದರು.
ಈ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ನಾವು ದೂರು ನೀಡುತ್ತೇವೆ.ಈ ಬಗ್ಗೆ ತಕ್ಷಣ ತನಿಖೆ ಆಗಬೇಕು ಎಂದರು.
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ, ಶಾಸಕರಾದ ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್‌, ಮೊದಲಾದವರಿದ್ದರು.

ಪ್ರಮುಖ ಸುದ್ದಿ :-   ಪ್ರಧಾನಿಯವರು ಪತ್ರಿಕಾಗೋಷ್ಠಿಗಳನ್ನು ಏಕೆ ನಡೆಸುವುದಿಲ್ಲ? : ಹೆಚ್ಚು ಸಲ ಕೇಳಿದ ಪ್ರಶ್ನೆಗೆ ಕೊನೆಗೂ ಉತ್ತರಿಸಿದ ನರೇಂದ್ರ ಮೋದಿ

1 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement