ಒಂದು ವರ್ಷದ ಬಾಲಕನ ಮೇಲೆ ಲೈಂಗಿಕ ಶೋಷಣೆ, ಹತ್ಯೆ : ಆರೋಪಿಗೆ ಗಲ್ಲು ಶಿಕ್ಷೆ ನೀಡಿದ ಬೆಂಗಳೂರಿನ ವಿಶೇಷ ಕೋರ್ಟ್‌

ಬೆಂಗಳೂರು: ಒಂದು ವರ್ಷದ ಬಾಲಕನ ಮೇಲೆ  ಲೈಂಗಿಕದೌರ್ಜನ್ಯ ನಡೆಸಿ ಬರ್ಬರವಾಗಿ ಕೊಲೆ ಮಾಡಿದ ಆರೋಪಿಗೆ ಬೆಂಗಳೂರಿನ ತ್ವರಿತಗತಿ ವಿಶೇಷ ನ್ಯಾಯಾಲಯವು ಮರಣ ದಂಡನೆ ವಿಧಿಸಿ ತೀರ್ಪು ನೀಡಿದೆ.
ಯಶವಂತಪುರದ ಕರಿಮಣಿ ಕೊಳಚೆ ಪ್ರದೇಶದ ನಿವಾಸಿ ಮೂರ್ತಿ ಎಂಬಾತ ಬಾಲಕನೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿ ಕೊಲೆಗೈದಿದ್ದಾನೆ ಎಂದು ಆರೋಪಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನಗರದ 1ನೇ ತ್ವರಿತಗತಿಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಕೆ. ಎನ್. ರೂಪ ಅವರು ಮೂರ್ತಿಗೆ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 302 ಅಡಿ (ಕೊಲೆ) ಮರಣ ದಂಡನೆ ಶಿಕ್ಷೆ ವಿಧಿಸಿದ್ದಾರೆ. ಪೋಕ್ಸೊ ಕಾಯ್ದೆಯಡಿ ಜೀವಾವಧಿ ಶಿಕ್ಷೆಯನ್ನೂ ವಿಧಿಸಲಾಗಿದೆ.
ಐಪಿಸಿ ಸೆಕ್ಷನ್ 377 (ಅನೈಸರ್ಗಿಕ ಲೈಂಗಿಕ ಕ್ರಿಯೆ) ಮತ್ತು ಲೈಂಗಿಕ ದೌರ್ಜನ್ಯಗಳಿಂದ ಮಕ್ಕಳ ಸಂರಕ್ಷಣಾ ಕಾಯಿದೆ (ಪೋಕ್ಸೊ) ಸೆಕ್ಷನ್ 5 ಹಾಗೂ 6 ಅಡಿಯಲ್ಲಿ ಜೀವಾವಧಿ ಶಿಕ್ಷೆ ಮತ್ತು ₹50 ಸಾವಿರ ದಂಡ ವಿಧಿಸಿರುವ ನ್ಯಾಯಾಲಯವು ಮೃತ ಬಾಲಕನ ಕುಟುಂಬಕ್ಕೆ ₹5,00,000 ಪರಿಹಾರ ನೀಡುವಂತೆ ಬೆಂಗಳೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನಿರ್ದೇಶಿಸಿದೆ.

ಪ್ರಮುಖ ಸುದ್ದಿ :-   ಪೋಕ್ಸೋ ಪ್ರಕರಣ : ಮುರುಘಾ ಶರಣರ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

ವಿಚಾರಣಾ ನ್ಯಾಯಾಲಯವು ತನ್ನ ತೀರ್ಪಿನಲ್ಲಿ ಪೋಕ್ಸೊ ಕಾಯ್ದೆ ಜಾರಿಗೆ ಬಂದು 10 ವರ್ಷಗಳಾಗಿವೆ. ಆದರೆ, ಇಂತಹ ಅಪರಾಧ ಕೃತ್ಯಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆಯೇ ಹೊರತು ಕಡಿಮೆಯಾಗಿಲ್ಲ ಎಂದು ಗಮನಿಸಿದೆ.
ಪ್ರಾಸಿಕ್ಯೂಷನ್ ಪ್ರಕಾರ, ಆರೋಪಿ ಮತ್ತು ಸಂತ್ರಸ್ತ ಮಗುವಿನ ತಂದೆ ಪರಸ್ಪರ ಪರಿಚಿತರು. ಸೆಪ್ಟೆಂಬರ್ 12, 2015 ರಂದು, ಮಧ್ಯಾಹ್ನ 2 ಗಂಟೆಗೆ, ಮಗುವಿನ ತಂದೆ ತನ್ನ ಮಗನನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಆರೋಪಿಗೆ ವಹಿಸಿ ತುರ್ತು ಕೆಲಸಕ್ಕೆ ಹೋಗಿದ್ದರು.ಬಳಿಕ ಆರೋಪಿ ಮಗುವನ್ನು ಯಶವಂತಪುರ ಸಮೀಪದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ. ಮಗು ಅಳಲು ಆರಂಭಿಸಿದಾಗ ಆರೋಪಿ ಹೆದರಿ ಅವನನ್ನು ಹೊಡೆದು ಕೊಂದಿದ್ದಾನೆ ಎಂದು ಆರೋಪಿಸಲಾಗಿತ್ತು.
ಅಪ್ರಕರಣ ಬೆಳಕಿಗೆ ಬಂದ ನಂತರ ರಾಜಗೋಪಾಲನಗರ ಠಾಣಾ ಪೊಲೀಸರು ಎಫ್‌ಐಆರ್ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದರು. ಬಳಿಕ ತನಿಖೆ ಪೂರ್ಣಗೊಳಿಸಿ, ಆರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣವನ್ನು ಸುದೀರ್ಘವಾಗಿ ವಿಚಾರಣೆ ನಡೆಸಿದ್ದ ತ್ವರಿತಗತಿ ನ್ಯಾಯಾಲಯವು ಎಂಟು ಜನರ ಸಾಕ್ಷ್ಯ ಪರಿಗಣಿಸಿ ದೋಷಿಗೆ ಮರಣ ದಂಡನೆ ವಿಧಿಸಿದೆ. ಪ್ರಾಸಿಕ್ಯೂಷನ್ ಪರವಾಗಿ ಸರ್ಕಾರಿ ಅಭಿಯೋಜಕಿ ಪಿ ಕೃಷ್ಣವೇಣಿ ವಾದ ಮಂಡಿಸಿದ್ದರು.

ಪ್ರಮುಖ ಸುದ್ದಿ :-   ನ್ಯಾಯಾಲಯದ ನಿರ್ದೇಶನ ಪಾಲಿಸಲು ನಿರ್ಲಕ್ಷ್ಯ: ರಾಜ್ಯ ಸರ್ಕಾರದ 41 ಇಲಾಖೆಗಳಿಗೆ ಹೈಕೋರ್ಟ್‌ ನೋಟಿಸ್‌

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement