ಮಂಗಳೂರು: ಮಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ಎನ್ಐಎ ತನಿಖೆಗೆ ಹಸ್ತಾಂತರಿಸಿದೆ.
ಈಗಾಗಲೇ ಪೊಲೀಸರು ತನಿಖೆ ಮುಂದುವರಿಸಿದ್ದು, ಆರೋಪಿ ಶಾರಿಕ್ ಹೇಳಿಕೆಯನ್ನು ವೀಡಿಯೋ ದಾಖಲೀಕರಣ ಮಾಡಿಕೊಂಡಿದ್ದಾರೆ. ಗುರುವಾರದಿಂದ ಎನ್ಐಎ ಅಧಿಕಾರಿಗಳು ತನಿಖೆ ಕೈಗೆತ್ತಿಕೊಳ್ಳಲಿದ್ದು, ಶಾರಿಕ್ನಿಂದ ಪ್ರತ್ಯೇಕ ಹೇಳಿಕೆಯನ್ನು ಪಡೆದುಕೊಂಡು ದಾಖಲಿಸಿಕೊಳ್ಳಲಿದ್ದಾರೆ ಎಂಬುದಾಗಿ ಮಾಹಿತಿ ಲಭ್ಯವಾಗಿದೆ. ತನಿಖೆಯ ಸಲುವಾಗಿ ಎನ್ಐಎಯ ಮೂರು ತಂಡಗಳು ಮಂಗಳೂರಿಗೆ ಆಗಮಿಸಿವೆ.
ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಂಕಿತ ಉಗ್ರ ಶಾರೀಕ್ ಚೇತರಿಸಿಕೊಳ್ಳುತ್ತಿದ್ದು, ಬುಧವಾರವೂ ಆತನನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದರು.ಕಳೆದ ತಿಂಗಳ ನವೆಂಬರ್ 20ರಂದು ಮಂಗಳೂರಿನ ಕಂಕನಾಡಿ ಬಳಿ ಚಲಿಸುತ್ತಿದ್ದ ಆಟೋದಲ್ಲಿ ನಿಗೂಢ ಸ್ಫೋಟ ಸಂಭವಿಸಿತ್ತು. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ಇಲಾಖೆಯ ತಜ್ಞರು ಹಾಗೂ ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿದ್ದರು. ಬಳಿಕ ಘಟನೆಯಲ್ಲಿ ಗಾಯಗೊಂಡಿದ್ದ ಶಾರಿಕ್ ಒಬ್ಬ ಶಂಕಿತ ಉಗ್ರನೆಂಬ ಬಗ್ಗೆ ತನಿಖೆ ಸಂದರ್ಭದಲ್ಲಿ ಕಂಡುಬಂತು.. ದಿನದಿಂದ ದಿನಕ್ಕೆ ಈ ಪ್ರಕರಣ ಹಲವು ತಿರುವು ಪಡೆದುಕೊಳ್ಳುತ್ತಿದೆ.
ನಿಮ್ಮ ಕಾಮೆಂಟ್ ಬರೆಯಿರಿ