ಬೆಂಗಳೂರು: ತಮಿಳುನಾಡಿನಲ್ಲಿ ಭಾರೀ ಮಳೆ ಸುರಿಸುತ್ತಿರುವ ಮಾಂಡೌಸ್ ಚಂಡಮಾರುತ(Mandous cyclone)ದ ದುರ್ಬಲ ಪರಿಚಲನೆ ಕರ್ನಾಟಕದಲ್ಲಿಯೂ ಹಾದು ಹೋಗುತ್ತಿದ್ದು, ಕರ್ನಾಟಕದ ದಕ್ಷಿಣ ಒಳನಾಡನ್ನು ಪ್ರವೇಶಿಸಿದೆ. ಪರಿಣಾಮ, ಬೆಂಗಳೂರಿನಲ್ಲಿ ತುಂತುರು ಮಳೆ ಸುರಿಯಲಾರಂಭಿಸಿದೆ ಹಾಗೂ ರಾಜ್ಯಾದ್ಯಂತ ಥಂಡಿ ವಾತಾವರಣವನ್ನು ಸೃಷ್ಟಿಸಿದೆ.
ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲೆಯೂ ಆಗಲಿದ್ದು, ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಈ ಮಳೆ ಡಿಸೆಂಬರ್ 13ರವರೆಗೂ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಹಾಸನ, ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಗುಡುಗು ಮಿಂಚು ಸಹಿತ ಮಳೆ ಬೀಳಲಿದೆ. ಮೋಡ ಕವಿದ ವಾತಾವರಣ ಇರುವುದರಿಂದ ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಸರಾಸರಿ ಉಷ್ಣಾಂಶ ಕುಸಿತವಾಗಿದೆ.
ಸದ್ಯ ಎಲ್ಲೆಡೆ ಥಂಡಿ ವಾತಾವರಣ ಇದ್ದು, ತುಂತುರು ಮಳೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆ ಜೊತೆಗೆ ಥಂಡಿ ವಾತಾವರಣ ನಿರ್ಮಾಣವಾಗಿದೆ. ಹಲವೆಡೆ ಮೋಡ ಕವಿದ ವಾತಾವರಣವಿದೆ.
ಈಗಾಗಲೇ ಬೆಂಗಳೂರು ನಗರ/ಗ್ರಾಮಾಂತರ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರ, ಕೋಲಾರ, ತುಮಕೂರು ಮಂಡ್ಯ, ರಾಮನಗರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.
‘ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಮಾಂಡೌಸ್ ಚಂಡಮಾರುತವು ತಮಿಳುನಾಡಿನ ಉತ್ತರ ಭಾಗದಲ್ಲಿರುವ ಕರಾವಳಿ ಹಾಗೂ ಪುದುಚೇರಿಯನ್ನು ಆವರಿಸಿದೆ. ಚೆನ್ನೈನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಚಂಡಮಾರುತದ ಅಲೆಗಳು ನಿಧಾನವಾಗಿ ಕರ್ನಾಟಕವನ್ನು ಪ್ರವೇಶಿಸಿದೆ’ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ.
ನಿಮ್ಮ ಕಾಮೆಂಟ್ ಬರೆಯಿರಿ