ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಕೆ

ಬೆಳಗಾವಿ: ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರು ಇಂದು. ಮಂಗಳವಾರ ವಿಧಾನಪರಿಷತ್ ಕಾರ್ಯದರ್ಶಿಗೆ ನಾಮಪತ್ರ ಸಲ್ಲಿಸಿದರು.
ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ , ಸಚಿವರಾದ ಜೆ.ಸಿ. ಮಾಧುಸ್ವಾಮಿ, ಗೋವಿಂದ ಕಾರಜೋಳ, ಸರ್ಕಾರದ ಮುಖ್ಯ ಸಚೇತಕ ವೈ.ಎನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರು ಇದ್ದರು.
ನಾಳೆ ಬುಧವಾರ ಪರಿಷತ್‌ನಲ್ಲಿ ಸಭಾಪತಿ ಚುನಾವಣೆ ನಡೆಯಲಿದೆ. ಆಡಳಿತಾರೂಢ ಬಿಜೆಪಿ ಸದಸ್ಯರು ಬಹುಮತ ಹೊಂದಿರುವುದರಿಂದ ಬಸವರಾಜ ಹೊರಟ್ಟಿ ಆಯ್ಕೆ ಬಹುತೇಕ ಖಚಿತವಾಗಿದೆ. ಅಲ್ಲದೆ, ಚುನಾವಣೆಯಲ್ಲಿ ಕಾಂಗ್ರೆಸ್ ತಟಸ್ಥವಾಗಿರುವುದರಿಂದ ಹೊರಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಪಕ್ಷಗಳ ಬಲಾಬಲದಲ್ಲಿ ಆಡಳಿತರೂಢ ಬಿಜೆಪಿ 39, ಕಾಂಗ್ರೆಸ್ 26 ಹಾಗೂ ಜೆಡಿಎಸ್ 8 ಸ್ಥಾನಗಳನ್ನು ಹೊಂದಿವೆ. ಒಬ್ಬರು ಪಕ್ಷೇತರ ಸದಸ್ಯರು ಸೇರಿದಂತೆ ಒಟ್ಟು 75 ಸದಸ್ಯರಿರುವ ವಿಧಾನಪರಿಷತ್‍ನಲ್ಲಿ ಸಭಾಪತಿಯಾಗಲು 38 ಸದಸ್ಯರ ಬೆಂಬಲ ಪಡೆಯಬೇಕಾಗುತ್ತದೆ.
ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಸಂದರ್ಭದಲ್ಲಿ ಬಸವರಾಜ ಹೊರಟ್ಟಿ ಅವರಿಗೆ ಸಭಾಪತಿ ಸ್ಥಾನ ನೀಡುವ ಭರವಸೆ ನೀಡಲಾಗಿತ್ತು. ಆದರೆ ಆರಂಭದಲ್ಲಿ ಹೊರಟ್ಟಿ ಅವರಿಗೆ ಸಭಾಪತಿ ಸ್ಥಾನ ನೀಡಲು ವಿರೋಧ ವ್ಯಕ್ತವಾಗಿತ್ತು. ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಅವರನ್ನು ಮುಂದುವರಿಸಬೇಕು ಎಂಬ ಬಿಜೆಪಿಯಲ್ಲಿ ಒತ್ತಡ ಕೇಳಿ ಬಂದಿತ್ತು.
ಆದರೆ ಬಿಜೆಪಿ ತಾನು ನೀಡಿದ ಭರವಸೆಯಂತೆಯೇ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಅವರಿಗೆ ಮನ್ನಣೆ ನೀಡಿದ್ದು ಹೊರಟ್ಟಿ ಅವರು ಎರಡನೇ ಬಾರಿಗೆ ಸಭಾಪತಿ ಸ್ಥಾನ ಆಲಂಕರಿಸುವುದು ಬಹುತೇಕ ಖಾತ್ರಿಯಾಗಿದೆ.

ಪ್ರಮುಖ ಸುದ್ದಿ :-   ಪೋಕ್ಸೋ ಪ್ರಕರಣ : ಮುರುಘಾ ಶರಣರ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement