ಹುಬ್ಬಳ್ಳಿ: ರೌಡಿಶೀಟರ್ ಹಿನ್ನೆಲೆಯ ಸ್ಯಾಂಟ್ರೊ ರವಿಗೆ ಸೇರಿದ ಆಸ್ತಿಯನ್ನು ಮುಟುಗೋಲು ಹಾಕಿಕೊಳ್ಳಲು ಸೂಚನೆ ನೀಡಲಾಗಿದ್ದು, ಆತನ ಬಂಧನಕ್ಕಾಗಿ ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಯಾಂಟ್ರೋ ರವಿ ಕಾನೂನು ಬಾಹಿರವಾಗಿ ಆಸ್ತಿ ಸಂಪಾದಿಸಿದ್ದನ್ನು ಮುಟ್ಟುಗೋಲು ಹಾಕಿಕೊಳ್ಳಲು ಪೊಲೀಸರಿಗೆ ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಆತನನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.
ಪೊಲೀಸರು ವಿಶೇಷ ತನಿಖಾ ತಂಡವನ್ನು ರಚಿಸಿದ್ದು, ಆತನ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ. ಆದಷ್ಟು ಶೀಘ್ರ ಬಂಧನವಾಗಲಿದೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದರು.
ಕಾಂಗ್ರೆಸ್ ನಾಯಕರು ಸ್ಯಾಂಟ್ರೊ ರವಿಯನ್ನು ರಕ್ಷಣೆ ಮಾಡಿದ್ದಾರೆ. ಕಾಂಗ್ರೆಸ್ ಅಧಿಕಾರ ಅವಧಿಯಲ್ಲಿ ಆತ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸಿದ್ದ. ಜೈಲಿನಲ್ಲಿದ್ದ ಆತನ ಬಿಡುಗಡೆಗೆ ಅನುವು ಮಾಡಿಕೊಟ್ಟವರು ಸಹ ಅವರೇ ಎಂದರು.
ಕಾನೂನು ಬಾಹಿರವಾಗಿ ತಪ್ಪು ಯಾರೇ ಮಾಡಿದರೂ ತಪ್ಪೇ. ಯಾರ ಅವಧಿಯಲ್ಲಿ ಏನು ನಡೆಯಿತು ಎಂಬುದು ಮುಖ್ಯವಾಗಬಾರದು. ಆತನ ಮೇಲೆ ಯಾರು ಕಾನೂನು ಕ್ರಮ ಜರುಗಿಸಿದ್ದರು ಎಂಬುದಷ್ಟೇ ಮುಖ್ಯವಾಗುತ್ತದೆ. ಪೊಲೀಸರಿಗೆ ನಾವು ಈ ವಿಚಾರದಲ್ಲಿ ಸ್ವಾತಂತ್ರ್ಯ ನೀಡಿದ್ದೇವೆ. ಆದಷ್ಟು ಬೇಗ ಈ ಪ್ರಕ್ರಿಯೆಗಳು ಮುಗಿಯಲಿವೆ ಎಂದು ಹೇಳಿದರು.
ನಿಮ್ಮ ಕಾಮೆಂಟ್ ಬರೆಯಿರಿ