ವೈವಾಹಿಕ ಅತ್ಯಾಚಾರದ ಮೇಲಿನ ಅರ್ಜಿಗಳಿಗೆ ಕೇಂದ್ರದ ಉತ್ತರ ಕೇಳಿದ ಸುಪ್ರೀಂ ಕೋರ್ಟ್‌

ನವದೆಹಲಿ: ವೈವಾಹಿಕ ಅತ್ಯಾಚಾರ ವಿಷಯಕ್ಕೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 375 ರ ವಿನಾಯಿತಿ 2 ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳಿಗೆ ಉತ್ತರವನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರಕ್ಕೆ ಸೂಚಿಸಿದೆ.
ಅತ್ಯಾಚಾರವನ್ನು ವ್ಯಾಖ್ಯಾನಿಸುವ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 375 ರ ವಿನಾಯಿತಿ 2, ಪತ್ನಿ 15 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರದ ಹೊರತು ಪುರುಷನು ತನ್ನ ಹೆಂಡತಿಯೊಂದಿಗೆ ಲೈಂಗಿಕ ಸಂಪರ್ಕ ನಡೆಸುವುದು ಅತ್ಯಾಚಾರವಲ್ಲ ಎಂದು ಹೇಳುತ್ತದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ನೇತೃತ್ವದ ಪೀಠವು ವೈವಾಹಿಕ ಅತ್ಯಾಚಾರ ವಿಷಯದ ವಿನಾಯಿತಿಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ವಿವಿಧ ಅರ್ಜಿಗಳ ಬಗ್ಗೆ ಉತ್ತರವನ್ನು ಸಲ್ಲಿಸುವಂತೆ ಕೇಂದ್ರವನ್ನು ಕೇಳಿದೆ. ಪೀಠವು ತನ್ನ ಉತ್ತರವನ್ನು ಸಲ್ಲಿಸಲು ಫೆಬ್ರವರಿ 15 ರವರೆಗೆ ಕೇಂದ್ರ ಸರ್ಕಾರಕ್ಕೆ ಸಮಯ ನೀಡಿದೆ ಮತ್ತು ಮಾರ್ಚ್ 21 ರಂದು ಅಂತಿಮ ವಿಚಾರಣೆಗೆ ಪಟ್ಟಿ ಮಾಡಲು ಹೇಳಿದೆ.
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ವೈವಾಹಿಕ ಅತ್ಯಾಚಾರವನ್ನು ಅಪರಾಧೀಕರಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ಬಗ್ಗೆ ಕೇಂದ್ರ ಸರ್ಕಾರವು ರಾಜ್ಯಗಳ ಅಭಿಪ್ರಾಯ ಕೇಳಿದೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.
ಕಾನೂನಾತ್ಮಕ ಪರಿಣಾಮಗಳಷ್ಟೇ ಅಲ್ಲದೆ ಪ್ರಕರಣ ಸಾಮಾಜಿಕ ಪರಿಣಾಮಗಳನ್ನು ಹೊಂದಿರುವುದರಿಂದ ಪ್ರತಿಕ್ರಿಯೆ ಸಲ್ಲಿಸಲು ಅನುಮತಿ ಕೇಳಲಾಗುತ್ತಿದೆ ಎಂದು ಮೆಹ್ತಾ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಮಣಿಪುರ : ಮತಗಟ್ಟೆ ಮೇಲೆ ಗುಂಡಿನ ದಾಳಿ; ದಿಕ್ಕಾ ಪಾಲಾಗಿ ಓಡಿದ ಮತದಾರರು

ಪತಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿರುವ ಮಹಿಳೆ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಇಂದಿರಾ ಜೈಸಿಂಗ್‌ ʼಆಕೆಯ ಪ್ರಕರಣವು ಕರ್ನಾಟಕ ಹೈಕೋರ್ಟ್‌ನಲ್ಲಿದ್ದಾಗ ಕೇಂದ್ರ ಸರ್ಕಾರ ಉತ್ತರ ಸಲ್ಲಿಸದಿರಲು ನಿರ್ಧರಿಸಿತ್ತು” ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ಆದರೆ, ಈ ಬಗ್ಗೆ ತಿಳಿಸಿದ ಮೆಹ್ತಾ, ʼದೆಹಲಿ ಹೈಕೋರ್ಟ್‌ನಲ್ಲಿ ಪ್ರಕರಣದ (ವೈವಾಹಿಕ ಅತ್ಯಾಚಾರದ ಕುರಿತು ಸಾಮಾಜಿಕ ಪರಿಣಾಮಗಳ ಬಗ್ಗೆ ಕೇಂದ್ರ ಸರ್ಕಾರ ವಿವರಿಸಿತ್ತು’ ಎಂದು ತಿಳಿಸಿದರು. ಅಲ್ಲದೆ ಕೇಂದ್ರ ಸರ್ಕಾರ ಕೆಲ ತಿಂಗಳ ಹಿಂದೆ ರಾಜ್ಯಗಳಿಂದ ಅಭಿಪ್ರಾಯ ಕೇಳಿತ್ತು ಎಂದು ಮಾಹಿತಿ ನೀಡಿದರು.
ಉತ್ತರ ಸಲ್ಲಿಸಲು ಫೆಬ್ರವರಿ 15ರ ವರೆಗೆ ಕೇಂದ್ರ ಸರ್ಕಾರಕ್ಕೆ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ ನೇತೃತ್ವದ ಪೀಠ ಮಾರ್ಚ್ 21ರಂದು ಪ್ರಕರಣದ ಅಂತಿಮ ವಿಚಾರಣೆ ನಡೆಸಲಿದೆ.
ವೈವಾಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ 375 ವಿನಾಯಿತಿ 2ರ ಕುರಿತು ದೆಹಲಿ ಹೈಕೋರ್ಟ್‌ ನೀಡಿದ್ದ ಭಿನ್ನ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಮೇಲ್ಮನವಿಗೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯ ಕಳೆದ ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೇಳಿತ್ತು. ಹೈಕೋರ್ಟ್‌ ನ್ಯಾಯಮೂರ್ತಿಗಳಾದ ರಾಜೀವ್ ಶಕ್ದೆರ್‌ ವೈವಾಹಿಕ ಅತ್ಯಾಚಾರಕ್ಕೆ ನೀಡಿದ್ದ ವಿನಾಯಿತಿಯನ್ನು ರದ್ದುಗೊಳಿಸಿದರೆ ನ್ಯಾ. ಸಿ ಹರಿಶಂಕರ್ ಅದನ್ನು ಎತ್ತಿ ಹಿಡಿದಿದ್ದರು.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ

ಪತ್ನಿಯ ಒಪ್ಪಿಗೆಗೆ ವಿರುದ್ಧವಾಗಿ ಪತಿಯು ದೈಹಿಕ ಸಂಪರ್ಕ ನಡೆಸುವುದು ಸಂವಿಧಾನದ 14ನೇ ವಿಧಿಯನ್ನು ಉಲ್ಲಂಘಿಸುತ್ತದೆ ಹೀಗಾಗಿ ಅದನ್ನು ರದ್ದುಗೊಳಿಸಲಾಗಿದೆ ಎಂದು ನ್ಯಾ. ಶಕ್ದೆರ್‌ ಹೇಳಿದ್ದರು.
ಆದರೆ ಇದಕ್ಕೆ ವ್ಯತಿರಿಕ್ತ ಅಭಿಪ್ರಾಯ ವ್ಯಕ್ತಪಡಿಸಿದ್ದ ನ್ಯಾ. ಹರಿಶಂಕರ ಅವರು, “ ವಿನಾಯಿತಿ 14, 19 ಅಥವಾ 21ನೇ ವಿಧಿಗಳನ್ನು ಉಲ್ಲಂಘಿಸುತ್ತದೆ ಎನ್ನಲು ಯಾವುದೇ ಆಧಾರ ಇಲ್ಲ. ಇದರಲ್ಲಿ ಸೂಕ್ಷ್ಮ ವ್ಯತ್ಯಾಸಗಳಿವೆ. ಅರ್ಜಿಯನ್ನು ಮನ್ನಿಸಲು ಸಾಧ್ಯವಿಲ್ಲ ಎಂದು ಭಾವಿಸುವೆ” ಎಂದು ಹೇಳಿದ್ದರು.

 

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement