ನವದೆಹಲಿ: ಕೇಂದ್ರ ಸರ್ಕಾರದ ತನಿಖೆ ಭರವಸೆ ಹಿನ್ನೆಲೆಯಲ್ಲಿ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಸ್ತಿಪಟುಗಳು ನಡೆಸುತ್ತಿದ್ದ ಧರಣಿಯನ್ನು ಶನಿವಾರ ಅಂತ್ಯಗೊಳಿಸಿದ್ದಾರೆ.
ಲೈಂಗಿತ ಕಿರುಕುಳ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಷನ್ ಅಧ್ಯಕ್ಷ ಬೃಜ್ ಭೂಷಣ್ ಶರಣ್ ಸಿಂಗ್ ತನಿಖೆ ನಡೆಯುವವರಿಗೆ ತಮ್ಮ ಸ್ಥಾನದಿಂದ ಕೆಳಗಿಳಿಯುವುದೂ ಸೇರಿದಂತೆ ಕುಸ್ತಿಪಟುಗಳ ಬೇಡಿಕೆಗಳ ಬಗ್ಗೆ ಕೇಂದ್ರ ಸರ್ಕಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕುಸ್ತಿಪಟುಗಳು ಎರಡು ದಿನಗಳಿಂದ ನಡೆಸುತ್ತಿದ್ದ ಧರಣಿಯನ್ನ ಶುಕ್ರವಾರ ರಾತ್ರಿ ಕೈಬಿಟ್ಟಿದ್ದಾರೆ.
ಬಜರಂಗ್ ಪುನಿಯಾ, ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ರವಿ ದಹಿಯಾ ಸೇರಿದಂತೆ ಹಲವಾರು ಕುಸ್ತಿಪಟುಗಳು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರೊಂದಿಗೆ ಶುಕ್ರವಾರ ರಾತ್ರಿ ಎರಡನೇ ಸುತ್ತಿನ ಮಾತುಕತೆಯ ನಡೆಸಿದ ನಂತರ ಎರಡು ದಿನಗಳಿಂದ ದೆಹಲಿಯ ಜಂತರ್-ಮಂತರ್ನಲ್ಲಿ ನಡೆಸುತ್ತಿದ್ದ ಧರಣಿ ಕೈಡಲಾಗಿದೆ. ಮಾತುಕತೆ ವೇಳೆ ಸರ್ಕಾರ ಹೋರಾಟಗಾರರು ಮಾಡಿದ ಆರೋಪಗಳನ್ನು ಪರಿಶೀಲಿಸುವುದಾಗಿ ಭರವಸೆ ನೀಡಿದೆ. ಆರೋಪಗಳ ತನಿಖೆಗೆ ಮೇಲುಸ್ತುವಾರಿ ಸಮಿತಿ ರಚಿಸಲಾಗುವುದು. ಆರೋಪಗಳ ತನಿಖೆ ಮಾಡುವವರೆಗೆ ಡಬ್ಲ್ಯುಎಫ್ಐ ಮುಖ್ಯಸ್ಥರು ತಮ್ಮ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.
ಮೇಲುಸ್ತುವಾರಿ ಸಮಿತಿಯನ್ನು ರಚಿಸಲು ನಿರ್ಧರಿಸಲಾಗಿದೆ. ಈ ಸಮಿತಿ ಸದಸ್ಯರ ಹೆಸರುಗಳನ್ನು ನಾಳೆ ಪ್ರಕಟಿಸಲಾಗುತ್ತದೆ. ಸಮಿತಿ ನಾಲ್ಕು ವಾರಗಳಲ್ಲಿ ತನಿಖೆ ಪೂರ್ಣಗೊಳಿಸಲಿದೆ. ಇದು ಹಣಕಾಸು ಅವ್ಯವಹಾರ ಮತ್ತು ಲೈಂಗಿಕ ಕಿರುಕುಳದ ಆರೋಪ ಸೇರಿದಂತೆ ಎಲ್ಲ ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಲಿದೆ ಎಂದು ಅನುರಾಗ್ ಠಾಕೂರ್ ಸಭೆ ಬಳಿಕ ಹೇಳಿದ್ದಾರೆ. ತನಿಖೆ ಪೂರ್ಣಗೊಳ್ಳುವವರಗೆ ಸಿಂಗ್ ಅವರು ಹುದ್ದೆಯಿಂದ ಹೊರಗಿದ್ದು, ತನಿಖೆಗೆ ಸಹಕರಿಸಲಿದ್ದಾರೆ. ಮೇಲುಸ್ತುವಾರಿ ಸಮಿತಿ ಡಬ್ಲ್ಯುಎಫ್ಐನ ದೈನಂದಿನ ವ್ಯವಹಾರಗಳನ್ನು ನಿರ್ವಹಿಸಲಿದೆ ಎಂದು ಹೇಳಿದ್ದಾರೆ.
ಏಷ್ಯನ್ ಗೇಮ್ಸ್ ಮತ್ತು ಒಲಂಪಿಕ್ ಅರ್ಹತಾ ಪಂದ್ಯಗಳೊಂದಿಗೆ ಇದು ಪ್ರಮುಖ ವರ್ಷವಾಗಿದೆ. ಹೀಗಾಗಿ ಸರ್ಕಾರದಿಂದ ಭರವಸೆ ಸಿಕ್ಕ ನಂತರ ಪ್ರತಿಭಟನೆ ಅಂತ್ಯಗೊಳಿಸಲು ನಿರ್ಧರಿಸಿದ್ದೇವೆ. ಸಮಿತಿಯು ನಿಷ್ಪಕ್ಷಪಾತ ತನಿಖೆ ನಡೆಸಲಿದೆ ಎಂಬ ವಿಶ್ವಾಸವಿದೆ. ನಮ್ಮ ಸುರಕ್ಷತೆ ತಮ್ಮ ಜವಾಬ್ದಾರಿ ಎಂದು ಸಚಿವರು ಭರವಸೆ ನೀಡಿದ್ದಾರೆ ಎಂದು ಕುಸ್ತಿ ಪಟುಗಳು ಹೇಳಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ