ಫೆಬ್ರವರಿ 10ರೊಳಗೆ ಕೆಆರ್​ಪಿಪಿ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಜನಾರ್ದನ ರೆಡ್ಡಿ

ರಾಯಚೂರು : ಹೊಸ ರಾಜಕೀಯ ಪಕ್ಷ ಘೋಷಿಸಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ತಮ್ಮ ಪಕ್ಷವಾದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (KRPP) ಅಭ್ಯರ್ಥಿಗಳ ಪಟ್ಟಿಯನ್ನು ಫೆಬ್ರವರಿ 10ರೊಳಗೆ ಪ್ರಕಟಿಸಲಾಗುವುದುೆಂದು ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಕಲ್ಯಾಣ ಕರ್ನಾಟಕದ ಒಟ್ಟು 30 ಕ್ಷೇತ್ರಗಳಲ್ಲಿ ಈಗಾಗಲೇ 13 ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಉಳಿದ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಫೆಬ್ರವರಿ 10ರೊಳಗೆ ಈ ಎಲ್ಲ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಅವರ ಹೆಸರನ್ನು ಘೋಷಣೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಅಭ್ಯರ್ಥಿಗಳ ವರ್ಚಸ್ಸು ಮತ್ತು ಗೆಲ್ಲುವ ಸಾಧ್ಯತೆಯನ್ನು ಗಮನದಲ್ಲಿಟ್ಟಕೊಂಡು ಪಕ್ಷದ ಟಿಕೆಟ್ ನೀಡಲಾಗುವುದು. ಚುನಾವಣೆಯಲ್ಲಿ ಯಾವ ಪಕ್ಷದೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ತಿಳಿಸಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement