ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡದ ಅಭ್ಯರ್ಥಿಗಳ ಬದಲಾವಣೆ ಬಗ್ಗೆ ಮಾತನಾಡಿದ ಕುಮಾರಸ್ವಾಮಿ

ಬೆಂಗಳೂರು : ಚುನಾವಣೆಗೆ ಯಾವಾಗ ಬೇಕಾದರೂ ಚುನಾವಣೆ ದಿನಾಂಕ ಘೋಷಣೆ ಆಗಬಹುದು. ಆದ್ದರಿಂದ ಎಲ್ಲ ಘೋಷಿತ ಅಭ್ಯರ್ಥಿಗಳು ವೇಗವಾಗಿ ಜನರನ್ನು ತಲುಪುವ ಕೆಲಸ ಮಾಡಬೇಕು. ಯಾರಾದರೂ ಉದಾಸೀನ ಮಾಡಿದರೆ ಅಂಥ ಅಭ್ಯರ್ಥಿಗಳನ್ನು ಬದಲಾವಣೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಶನಿವಾರ ಕರೆಯಲಾಗಿದ್ದ ಮೊದಲ ಪಟ್ಟಿಯಲ್ಲಿರುವ 93 ಅಭ್ಯರ್ಥಿಗಳ ಸಭೆಯಲ್ಲಿ ಅವರು ಮಾತನಾಡಿದರು.
61 ಕ್ಷೇತ್ರಗಳಲ್ಲಿ ಪಂಚರತ್ನ ರಥಯಾತ್ರೆ ಮುಗಿಸಿ ಬೆಂಗಳೂರಿಗೆ ವಾಪಸಾದ ನಂತರ ಅಭ್ಯರ್ಥಿಗಳ ಸಭೆ ಕರೆದಿದ್ದ ಅವರು ಇನ್ನೆರಡು ತಿಂಗಳು ಅಭ್ಯರ್ಥಿಗಳು ಸಾಗಬೇಕಾದ ಗೆಲುವಿನ ಹಾದಿಯ ಬಗ್ಗೆ ಮಾರ್ಗಸೂಚಿಗಳನ್ನು ನೀಡಿದರು.
ಮುಂದಿನ ಎರಡೂವರೆ ತಿಂಗಳು ಅಭ್ಯರ್ಥಿಗಳು ವಾರಕ್ಕೆ ಕೊನೆಯ ಪಕ್ಷ ಮೂರು ದಿನ ವಿವಿಧ ಗ್ರಾಮಗಳಲ್ಲಿ ವಾಸ್ತವ್ಯ ಹೂಡಬೇಕು ಎಂದು ಅವರು ಅಭ್ಯರ್ಥಿಗಳಿಗೆ ತಾಕೀತು ಮಾಡಿದರು.
ಕೆಲ ಅಭ್ಯರ್ಥಿಗಳು ಬಹಳ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ, ಇನ್ನು ಕೆಲವರು ಇನ್ನೂ ಟೇಕಾಫ್ ಆಗಬೇಕಿದೆ. ವೇಗವಾಗಿ ಮುನ್ನಡೆಯದ ಅಭ್ಯರ್ಥಿಗಳನ್ನು ಮುಲಾಜಿಲ್ಲದೆ ಬದಲಾಯಿಸುತ್ತೇನೆ. ಆರೇಳು ಕ್ಷೇತ್ರಗಳಲ್ಲಿ ಘೋಷಿತ ಅಭ್ಯರ್ಥಿಗಳ ವೇಗ ನನಗೆ ತೃಪ್ತಿ ನೀಡಿಲ್ಲ. ಅವರನ್ನು ಬದಲಾವಣೆ ಮಾಡಲಾಗುವುದು ಎಂದು ಹೆಚ್.ಡಿಕೆ ಅವರು ಇದೇ ವೇಳೆ ಹೇಳಿದರು.
ಅವಕಾಶವನ್ನು ಎಲ್ಲಾ ಅಭ್ಯರ್ಥಿಗಳು ಸದುಪಯೋಗ ಮಾಡಿಕೊಳ್ಳಬೇಕು. ನನ್ನ ಆರೋಗ್ಯ ಲೆಕ್ಕಿಸದೆ ರಥಯಾತ್ರೆ ನಡೆಸುತ್ತಿದ್ದೇನೆ. ನನ್ನ ಆರೋಗ್ಯಕ್ಕಿಂತ ಜನರ ಹಿತ ಮುಖ್ಯ ಎಂದರು.
ಮಹಿಳಾ ಸ್ವಸಹಾಯ ಸಂಘಗಳ ಸಾಲ ಮನ್ನಾ, ಹಿರಿಯ ನಾಗರಿಕರಿಗೆ 5000 ರೂ. ಮಾಸಾಶನ, ವಿಕಲಚೇತನರು ಹಾಗೂ ವಿಧವೆಯರಿಗೆ 2500 ರೂ. ಮಾಶಾಸನ ನೀಡುವ ಬಗ್ಗೆ ಜನರಿಗೆ ತಿಳಿಸಿ. 2006 ಹಾಗೂ 2018ರಲ್ಲಿ ನಮ್ಮ ಆಡಳಿತದಲ್ಲಿಯೂ ಸಾಲ ಮನ್ನಾ ಬಗ್ಗೆ ಜನರಿಗೆ ತಿಳಿಸಿ ಎಂದು ಹೇಳಿದರು.
ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಮಾತನಾಡಿದರು.ಮಾಜಿ ಸಚಿವರಾದ ಬಂಡೆಪ್ಪ ಖಾಶೆಂಪೂರ್, ಎನ್ ಎಂ ನಂಬಿ, ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯ ಕೆ ಎನ್ ತಿಪ್ಪೇಸ್ವಾಮಿ ಮೊದಲಾದವರಿದ್ದರು.

ಪ್ರಮುಖ ಸುದ್ದಿ :-   ವೀಡಿಯೊ...| ಪಿಒಕೆ ಹಿಂಪಡೆವ ಬಗ್ಗೆ ಮಾತ್ರ ಮಾತುಕತೆ, ಪರಮಾಣು ಬ್ಲ್ಯಾಕ್‌ ಮೇಲ್‌ ಸಹಿಸಲ್ಲ..ಪಾಕಿಸ್ತಾನದ ಹೃದಯಕ್ಕೆ ಹೊಡೆದಿದ್ದೇವೆ..ಮಿಲಿಟರಿ ಕ್ರಮ ಅಮಾನತು ಅಷ್ಟೆ ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement